ಕುಂದಗೋಳ:
ಕೋಲ್ಕತ್ತಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬಿಎಸ್ಎಫ್ ಯೋಧನೋರ್ವ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.ತಾಲೂಕಿನ ಶಿರೂರ ಗ್ರಾಮದ ಯೋಧ ಸಂತೋಷ ರಾಮಪ್ಪ ಹೊನ್ನಪ್ಪನವರ (38) ಮೃತರು. ಆದರೆ, ಇವರ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಮೃತರಿಗೆ ತಂದೆ-ತಾಯಿ, ಪತ್ನಿ ಹಾಗೂ ಪುತ್ರಿ ಇದ್ದಾರೆ.
14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂತೋಷ ಅವರು, ದೇಶದ ವಿವಿಧ ಗಡಿ ಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದರು. ಸದ್ಯ ಕೋಲ್ಕತ್ತಾದಲ್ಲಿ ಕರ್ತವ್ಯದಲ್ಲಿದ್ದ ಅವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ತಂದೆ ರಾಮಪ್ಪ, ತಾಯಿ ಮಂಜವ್ವ, ಪತ್ನಿ ಕಾವ್ಯಾ ಹಾಗೂ ಮಗಳು ಸಾನಿಧ್ಯ ಕಣ್ಣೀರಿಟ್ಟಿದ್ದಾರೆ. 7 ವರ್ಷಗಳ ಹಿಂದೆ ವಿವಾಹವಾಗಿದ್ದ ಸಂತೋಷ ಕುಟುಂಬಕ್ಕೆ ದೊಡ್ಡ ಆಧಾರಸ್ತಂಭವಾಗಿದ್ದರು.ವಿಷಯ ತಿಳಿಯುತ್ತಿದ್ದಂತೆ ತಹಸೀಲ್ದಾರ್ ರಾಜು ಮಾವರಕರ್ ಯೋಧನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೋಧನ ಪಾರ್ಥಿವ ಶರೀರವನ್ನು ಕೋಲ್ಕತ್ತಾದಿಂದ ವಿಮಾನದ ಮೂಲಕ ಮುಂಬೈ, ಬೆಂಗಳೂರು ಹಾಗೂ ಹುಬ್ಬಳ್ಳಿ ಮಾರ್ಗವಾಗಿ ತರಲಾಗುವುದು. ಶುಕ್ರವಾರ ಸಂಜೆ ವೇಳೆಗೆ ಪಾರ್ಥಿವ ಶರೀರ ಸ್ವಗ್ರಾಮ ತಲುಪುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.
ಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಿದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಈ ಅಂತಿಮ ಸಂಸ್ಕಾರದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಪ್ರಮುಖ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಈ ವೇಳೆ ಗ್ರಾಮ ಲೆಕ್ಕಾಧಿಕಾರಿ ಈರಣ್ಣ ರಂಗಪ್ಪನವರ, ಪಶು ವೈದ್ಯಾಧಿಕಾರಿ ಡಾ. ಹನುಮಂತಗೌಡ ಪಾಟೀಲ, ಪಿಡಿಒ ಬಿ. ರಾಘವೇಂದ್ರ ಸೇರಿದಂತೆ ಗ್ರಾಮಸ್ಥರಿದ್ದರು.