ಸಾರಾಂಶ
ಇತ್ತೀಚಿನ ದಿನಗಳಲ್ಲಿ ಮಿತಿ ಇಲ್ಲದಂತೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದರಿಂದ ಪರಿಸರ ಮತ್ತು ಮನುಷ್ಯನ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಸದೆ, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕೆಂದು ಭರಮಸಾಗರ ಪೊಲೀಸ್ ಠಾಣೆಯ ಪಿಎಸ್ಐ ಸುರೇಶ್ ಹೇಳಿದರು.
ಕನ್ನಡಪ್ರಭ ವಾರ್ತೆ ಸಿರಿಗೆರೆ
ಇತ್ತೀಚಿನ ದಿನಗಳಲ್ಲಿ ಮಿತಿ ಇಲ್ಲದಂತೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದರಿಂದ ಪರಿಸರ ಮತ್ತು ಮನುಷ್ಯನ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಸದೆ, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕೆಂದು ಭರಮಸಾಗರ ಪೊಲೀಸ್ ಠಾಣೆಯ ಪಿಎಸ್ಐ ಸುರೇಶ್ ಹೇಳಿದರು.ಭರಮಸಾಗರ ಸರ್ಕಾರಿ ಪದವಿ ಕಾಲೇಜಿನ ಎನ್.ಎಸ್.ಎಸ್ ವಿಭಾಗ, ಗ್ರಾಮ ಪಂಚಾಯಿತಿ, ನೆಹರು ಯುವ ಕೇಂದ್ರದ ಆಶ್ರಯದಲ್ಲಿ ಸ್ವಚ್ಛತಾ ಹಿ ಸೇವಾ ಅಂಗವಾಗಿ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.
ಅಕ್ಟೋಬರ್ ತಿಂಗಳಿನಲ್ಲಿ ಭಾರತ ಸರ್ಕಾರ 15 ದಿನಗಳ ಕಾಲ ಸ್ವಚ್ಛತಾ ಚಟುವಟಿಕೆಗಳನ್ನು ಆಯೋಜಿಸುತ್ತದೆ. ಈ ಸಂದರ್ಭದಲ್ಲಿ ಎನ್ಎಸ್ಎಸ್ ಸ್ವಯಂಸೇವಕರು ಕಾಲೇಜಿನ ಆವರಣ, ಭರಮಸಾಗರದ ಪ್ರಮುಖ ಬೀದಿಗಳು, ದೇವಸ್ಥಾನ, ಸರ್ಕಾರಿ ಆಸ್ಪತ್ರೆ, ಪೊಲೀಸ್ ಸ್ಟೇಷನ್, ಪಶು ಆಸ್ಪತ್ರೆ ಹೀಗೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಜನರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವರು ಎಂದು ತಿಳಿಸಿದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪಾತಣ್ಣ ಮಾತನಾಡಿ, ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಮಿತಗೊಳಿಸುವುದರ ಮೂಲಕ ಸ್ವಚ್ಛ ಮತ್ತು ಸುಂದರ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಲೋಕೇಶ್ ನಾಯಕ್ ರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ನೆಹರು ಯುವ ಕೇಂದ್ರದ ಯುವಜನ ಅಧಿಕಾರಿಗಳಾದ ಸುಹಾಸ್, ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಾಲೇಜಿನ ಬೋಧಕ-ಬೋಧಕೇತರ ವರ್ಗ, ಎನ್ಎಸ್ಎಸ್ ಸ್ವಯಂ ಸೇವಕರು ಹಾಜರಿದ್ದರು.