ಉಡುಪಿ: ನಾಟಕ, ರಂಗಭೂಮಿ ಮೊದಲಾದ ಚಟುವಟಿಕೆಗಳಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಇಂತಹ ಕಲೆಗಳಿಗೆ ಪ್ರೋತ್ಸಾಹ ನೀಡುವವರನ್ನು ಗುರುತಿಸಿ ಗೌರವಿಸುವುದು ಉತ್ತಮ ಬೆಳವಣಿಗೆ ಎಂದು ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಹೇಳಿದರು. ಅವರು ಇಲ್ಲಿನ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಸಂಸ್ಥೆಯ ಸ್ಥಾಪಕ ದಿ. ಕುತ್ಪಾಡಿ ಆನಂದ ಗಾಣಿಗ ಅವರ ಸ್ಮರಣಾರ್ಥ ನಡೆದ ಎರಡು ದಿನಗಳ ‘ರಂಗಭೂಮಿ ಆನಂದೋತ್ಸವ’ದಲ್ಲಿ ಸಾಯಿರಾಧಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ಮನೋಹರ್ ಎಸ್. ಶೆಟ್ಟಿ ಅವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಪ್ರಾಯೋಜಿತ ತಲ್ಲೂರ್ಸ್ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.ಉಡುಪಿಯಲ್ಲಿ ರಂಗಭೂಮಿ ಕಟ್ಟಿ ಬೆಳೆಸಿದ ಆನಂದ ಗಾಣಿಗರ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಸಂತೋಷ ತಂದಿದೆ. ಅವರ ನಂತರ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಪ್ರದೀಪ್ ಚಂದ್ರ ಹಾಗೂ ಅವರ ತಂಡ ಅಭಿನಂದನಾರ್ಹರು ಎಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮನೋಹರ್ ಎಸ್ .ಶೆಟ್ಟಿ ಅವರು, ರಂಗಭೂಮಿ ನೀಡುವ ಉತ್ತಮ ಸಂದೇಶಗಳು ಸಮಾಜಕ್ಕೆ ದಾರಿ ದೀಪವಾಗಿವೆ. ರಂಗಭೂಮಿ ಉಡುಪಿ ಅನೇಕ ಪ್ರಭುದ್ಧ ಕಲಾವಿದರನ್ನು ಸಮಾಜಕ್ಕೆ ನೀಡಿದೆ. ಕುತ್ಪಾಡಿ ಆನಂದ ಗಾಣಿಗರು ರಂಗಭೂಮಿಯನ್ನು ಕಟ್ಟಿ ಬೆಳೆಸಲು ವಹಿಸಿದ್ದ ಶ್ರಮವನ್ನು ಕಣ್ಣಾರೆ ಕಂಡಿದ್ದೇನೆ. ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ನೀಡುವ ಈ ಪ್ರಶಸ್ತಿಗೆ ಆಭಾರಿಯಾಗಿದ್ದೇನೆ ಎಂದರು.ರಂಗಭೂಮಿ ಉಡುಪಿ ಅಧ್ಯಕ್ಷ ಹಾಗೂ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆನಂದ ಗಾಣಿಗರು ಸುಮಾರು 45 ವರ್ಷಗಳ ಕಾಲ ರಂಗಭೂಮಿ ಉಡುಪಿ ಸಂಸ್ಥೆಯ ಶ್ರೇಯೋಭಿವೃದ್ಧಿಗಾಗಿ ತಮ್ಮನ್ನೇ ಅರ್ಪಿಸಿಕೊಂಡ ಮಹಾನುಭಾವರು. ಅವರ ನೆನಪಿನ ಈ ಕಾರ್ಯಕ್ರಮದಲ್ಲಿ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತಿದ್ದೇವೆ. ಈವರೆಗೆ 15 ಮಂದಿ ಸಾಧಕರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದ್ದೇವೆ ಎಂದರು.ಟ್ರಸ್ಟ್ ನ ಟ್ರಸ್ಟಿ, ಗಿರಿಜಾ ಶಿವರಾಮ ಶೆಟ್ಟಿ, ತಲ್ಲೂರು ಶಿವಪ್ರಸಾದ್ ಎಸ್. ಶೆಟ್ಟಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಸುಧಾಕರ್ ಶೆಟ್ಟಿ, ಅಲಯನ್ಸ್ ಉಡುಪಿ ಜಿಲ್ಲಾ ಗವರ್ನರ್ ಸುನಿಲ್ ಕುಮಾರ್ ಶೆಟ್ಟಿ, ಆನಂದ ಗಾಣಿಗ ಅವರ ಅಳಿಯ ಗೋಪಾಲ ಗಾಣಿಗ, ರಂಗಭೂಮಿ ಉಡುಪಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಎನ್.ಆರ್. ಬಲ್ಲಾಳ್, ಅನುರಾಧ ಮನೋಹರ್ ಶೆಟ್ಟಿ ಇದ್ದರು.
ಲೇಖಕಿ ಪೂರ್ಣಿಮಾ ಸುರೇಶ್ ನಿರೂಪಿಸಿದರು. ಅನುಷಾ ಆಚಾರ್ ವಾಚಿಸಿದರು. ರಂಗಭೂಮಿ ಉಡುಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ವಂದಿಸಿದರು.