ಬಂಗಾರಪೇಟೆ: ಮಾನವನ ದುರಾಸೆಯಿಂದ ಭ್ರಷ್ಟಾಚಾರ ವ್ಯಾಪಕವಾಗಿ ಹೆಚ್ಚುತ್ತಿದ್ದು, ಅದು ಸುಸ್ಥಿರ ಅಭಿವೃದ್ಧಿಗೆ ದೊಡ್ಡ ತೊಡಕಾಗುತ್ತಿದೆ. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜನ ನಿರ್ಣಯ ವೇದಿಕೆಯ ರಾಜ್ಯಾಧ್ಯಕ್ಷ ಗಂಗಾಧರ್ ಅಭಿಪ್ರಾಯಪಟ್ಟರು.ಪಟ್ಟಣದ ಅಂಬೇಡ್ಕರ್ ಪುತ್ಥಳಿ ಬಳಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ನೈತಿಕತೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕು. ಈ ದಿಟ್ಟ ಉದ್ದೇಶದಿಂದಲೇ ಜನ ನಿರ್ಣಯ ವೇದಿಕೆಯ ವತಿಯಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಜನ ನಿರ್ಣಯ ವೇದಿಕೆಯ ರಾಜ್ಯ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾಗಿ ವಿ. ಶಿವಾರೆಡ್ಡಿ, ಸಲಹಾ ಸಮಿತಿಯ ರಾಜ್ಯಾಧ್ಯಕ್ಷರಾಗಿ ಪಟ್ಟಂದೂರು ಬಿ. ಕೃಷ್ಣಪ್ಪ ಹಾಗೂ ರಾಜ್ಯ ಕಾರ್ಯದರ್ಶಿಯಾಗಿ ಶಿವಕುಮಾರ ಸ್ವಾಮಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.ರಾಜ್ಯ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಸಲಹಾ ಸಮಿತಿಯ ರಾಜ್ಯಾಧ್ಯಕ್ಷ ಕೃಷ್ಣಪ್ಪ, ರಾಜ್ಯ ಉಪಾಧ್ಯಕ್ಷ ಜೀವನ್ ರೆಡ್ಡಿ, ತಾಲೂಕು ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಚೌಡಪ್ಪ, ಗೌರವ ಅಧ್ಯಕ್ಷ ಮಂಜುನಾಥ್ ಇತರರು ಇದ್ದರು.