ಚಿಕ್ಕಮಗಳೂರುದೇಶದ ಅಭಿವೃದ್ಧಿ ಹಾಗೂ ಪ್ರಗತಿಯ ನಿಜವಾದ ಅಳತೆಗೋಲು ಶಿಕ್ಷಣ. ಸದೃಢ ಹಾಗೂ ಸ್ವಾಸ್ಥ್ಯ ಸಮಾಜ ನಿರ್ಮಿಸಲು ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಅತ್ಯಗತ್ಯ ಎಂದು ಉಚ್ಛ ನ್ಯಾಯಾಲಯದ ನ್ಯಾಯಾಧೀಶ ಎಚ್.ಪಿ.ಸಂದೇಶ್ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ದೇಶದ ಅಭಿವೃದ್ಧಿ ಹಾಗೂ ಪ್ರಗತಿಯ ನಿಜವಾದ ಅಳತೆಗೋಲು ಶಿಕ್ಷಣ. ಸದೃಢ ಹಾಗೂ ಸ್ವಾಸ್ಥ್ಯ ಸಮಾಜ ನಿರ್ಮಿಸಲು ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಅತ್ಯಗತ್ಯ ಎಂದು ಉಚ್ಛ ನ್ಯಾಯಾಲಯದ ನ್ಯಾಯಾಧೀಶ ಎಚ್.ಪಿ.ಸಂದೇಶ್ ಅಭಿಪ್ರಾಯಪಟ್ಟರು.ನಗರದ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಹಾಗೂ ಯುವ ಸ್ಫೂರ್ತಿ ಅಕಾಡೆಮಿ ಸಹಯೋಗದಲ್ಲಿ ನಡೆದ ವಸತಿ ಶಾಲೆ ಮತ್ತು ಕಾಲೇಜುಗಳ ಪ್ರಾಂಶುಪಾಲರ ‘ಆಡಳಿತ ಮತ್ತು ಶೈಕ್ಷಣಿಕ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿ ದೇಶದ ಅಭಿವೃದ್ಧಿ ಸಂಕೇತ ಹಾಗೂ ದೇಶದ ಶ್ರೇಣಿಯ ಅಳತೆ ಗೋಲು ನಿರ್ಧಾರವಾಗುವುದು ಶಿಕ್ಷಣದಿಂದ ಮಾತ್ರ. ಶಿಕ್ಷಣವಿಲ್ಲದಿದ್ದರೆ ದೇಶದ ಪ್ರಗತಿ ಅಸಾಧ್ಯ. ವಸತಿ ಶಾಲೆ ಗಳಲ್ಲಿ ಕಲಿಯುವ ಗ್ರಾಮೀಣ ಭಾಗದ ಪ್ರತಿಭಾವಂತ ಮಕ್ಕಳಿಗೆ ಅವರ ಕೌಟುಂಬಿಕ, ಸಾಮಾಜಿಕ ಮತ್ತು ಆರ್ಥಿಕ ಹಿನ್ನೆಲೆ ಗಳನ್ನು ಪರಿಗಣಿಸದೇ ಅತ್ಯುತ್ತಮ ಗುಣಮಟ್ಟದ ಆಧುನಿಕ ಶಿಕ್ಷಣ ಒದಗಿಸುವುದು ವಸತಿ ಶಿಕ್ಷಣ ಸಂಸ್ಥೆಗಳ ಮೂಲ ಉದ್ದೇಶ ವಾಗಬೇಕು ಎಂದರು.ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಅಕ್ಷರ, ಅನ್ನ ಮತ್ತು ಜ್ಞಾನದ ದಾಸೋಹ ನೀಡುವಲ್ಲಿ ಪ್ರಾಂಶುಪಾಲರ ಪಾತ್ರ ಬಹುಮುಖ್ಯ. ವಸತಿ ಶಾಲೆಗಳು ರಾಜ್ಯಮಟ್ಟದಲ್ಲಿ ಶೇ. 99.57ರಷ್ಟು ಅತ್ಯುತ್ತಮ ಫಲಿತಾಂಶ ಪಡೆದಿರುವುದು ಹೆಮ್ಮೆಯ ವಿಚಾರ. ಈ ಸಾಧನೆ ಸಂಪೂರ್ಣ ಕೀರ್ತಿ ರಾಜ್ಯದ ಎಲ್ಲಾ ಪ್ರಾಂಶುಪಾಲರಿಗೆ ಸಲ್ಲಬೇಕು. ನೀವೇ ಈ ಶಿಕ್ಷಣ ವ್ಯವಸ್ಥೆ ನಿಜವಾದ ಪೋಷಕರು ಎಂದು ಹರ್ಷ ವ್ಯಕ್ತಪಡಿಸಿದರು.ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ಮಾತನಾಡಿ, ಸಮಾಜದಲ್ಲಿ ತುಳಿತಕ್ಕೆ ಒಳಗಾದವರು, ಮಹಿಳೆ ಯರು, ಮಕ್ಕಳು, ಹಿರಿಯ ನಾಗರಿಕರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಕಾನೂನು ನೆರವು ಹಾಗೂ ಅರಿವು ಮೂಡಿಸಲು ತಾಲೂಕು ಮಟ್ಟದಿಂದ ಸುಪ್ರೀಂ ಕೋರ್ಟ್‌ವರೆಗೆ ಕಾನೂನು ಸೇವಾ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಕ್ರೈಸ್ ಸಂಸ್ಥೆಯ ಶಿಕ್ಷಣ ಮತ್ತು ತರಬೇತಿ ವಿಭಾಗದ ಜಂಟಿ ನಿರ್ದೇಶಕ ಎಸ್.ಎಸ್.ನಾಗೇಶ್ ಮಾತನಾಡಿ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ವಸತಿಯುತ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ 1999ರಲ್ಲಿ ಆರಂಭ ವಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇಂದು ರಾಜ್ಯಾದ್ಯಂತ ಶೈಕ್ಷಣಿಕ ಕ್ರಾಂತಿ ಸೃಷ್ಟಿಸುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸದ್ಯ 874 ವಸತಿ ಶಾಲೆ ಹಾಗೂ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿದ್ದು ಒಟ್ಟು 2.18 ಲಕ್ಷ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದರಲ್ಲಿ ಶೇ.60 ರಷ್ಟು ಹೆಣ್ಣುಮಕ್ಕಳಿದ್ದು, ಅವರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿಶೇಷವಾಗಿ 209 ವಸತಿ ಶಾಲೆಯನ್ನು ಹೆಣ್ಣು ಮಕ್ಕಳಿಗಾಗಿಯೇ ಮೀಸಲಿಡಲಾಗಿದೆ. ಪ್ರತಿ ವರ್ಷ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಈ ಬಾರಿ ಕೇವಲ ಶೇ.50 ರಷ್ಟು ಸೀಟುಗಳಿಗೆ ಬರೋಬ್ಬರಿ 2.30 ಲಕ್ಷ ಅರ್ಜಿಗಳು ಸ್ವೀಕೃತವಾಗಿರುವುದು ಸಂಸ್ಥೆ ಮೇಲಿರುವ ನಂಬಿಕೆ ತೋರಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಪೋಷಕರು ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ವ್ಯಾಮೋಹದಿಂದ ಮಕ್ಕಳನ್ನು ಮುಕ್ತ ಗೊಳಿಸಲು ನಮ್ಮ ವಸತಿ ಶಾಲೆಗಳ ಕಡೆಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದು ತಿಳಿಸಿದರು.ಲಿಸಾ ಫೌಂಡೇಶನ್‌ನ ಸಂಸ್ಥಾಪಕಿ, ವಕೀಲೆ ಸಂಗೀತಾ ಪ್ರಸಾದ್, ಮಹೇಶ್ ಪದವಿ ಪೂರ್ವ ಕಾಲೇಜು ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿ.ಎಂ.ರಾಜಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಎಚ್.ಪಿ.ಮದನಗೌಡ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಸುಜೇಂದ್ರ ಇದ್ದರು.