ಕನ್ನಡಪ್ರಭ ವಾರ್ತೆ ಬೀಳಗಿ
ಜಾತಿ ವ್ಯವಸ್ಥೆ ಎಂಬ ಪಿಡುಗು ನಿರ್ಮೂಲನೆ ಆಗುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಜಾತೀಯತೆ ಹೋಗಲಾಡಿಸಲು ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣ ಅತ್ಯಂತ ಪರಿಣಾಮಕಾರಿ ಅಸ್ತ್ರಗಳಾಗಿವೆ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.ತಾಲೂಕಿನ ಕೊರ್ತಿ ಗ್ರಾಮದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ಬಾಗಲಕೋಟೆ ಜಿಲ್ಲಾ ಸಮಿತಿ ವತಿಯಿಂದ ಬುದ್ಧ, ಬಸವ,ಅಂಬೇಡ್ಕರ್ ಜಯಂತ್ಯುತ್ಸವದ ನಿಮಿತ್ತ ಏರ್ಪಡಿಸಿದ್ದ ಸಮ ಸಮಾಜದ ನಿರ್ಮಾಣ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಜಗದ್ಗುರು ಬಸವಣ್ಣನವರು ಸಮ ಸಮಾಜದ ನಿರ್ಮಾಣಕ್ಕಾಗಿ 800 ವರ್ಷಗಳ ಹಿಂದೆಯೇ ಶ್ರಮಿಸಿದ್ದರು. ಅಂದಿನ ಕಾಲದಲ್ಲಿ ಪೂರ್ವಿಕರ ವೃತ್ತಿ ಆಧರಿಸಿ ಜಾತಿಗಳನ್ನು ಗುರುತಿಸಲಾಗುತ್ತಿತ್ತು. ನಂತರ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡುವ ಮೂಲಕ ಎಲ್ಲರಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿದ್ದಾರೆ ಎಂದರು.ಉನ್ನತ ಶಿಕ್ಷಣ ಪಡೆದ ವ್ಯಕ್ತಿ ಹಾಗೂ ಕುಟುಂಬಗಳಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ದೊರೆಯುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.ಕೆಪಿಸಿಸಿ ಮಾಜಿ ಕಾರ್ಯದರ್ಶಿ ಬಸವ ಪ್ರಭು ಸರನಾಡಗೌಡ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಆಧುನಿಕ ಬಸವಣ್ಣ ಎಂದೇ ಕರೆಯಲಾಗುತ್ತದೆ. ಅವರು ನಮಗೆ ಪ್ರಬಲವಾದ ಸಂವಿಧಾನ ನೀಡಿ ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ್ದಾರೆ. ಅವರ ಭಾವೈಕ್ಯತೆ ಹಾಗೂ ಏಕತೆಯನ್ನು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.ಉಪನ್ಯಾಸಕರಾಗಿ ಆಗಮಿಸಿದ್ದ ಕಲಬುರ್ಗಿಯ ಪ್ರಗತಿಪರ ಚಿಂತಕ ರಂಜನ ದರ್ಗಾ ಮಾತನಾಡಿ, ಬಸವಣ್ಣನವರು ದುಡಿಯುವ ವರ್ಗವನ್ನು ಸಂಘಟಿಸಿ ಕಾಯಕ ಕ್ರಾಂತಿ ನಡೆಸಿದವರು. ಆದರೆ, ಇಂದು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಪ್ರಗತಿಪರ ತತ್ವಗಳನ್ನು ದುರ್ಬಲಗೊಳಿಸಲು ವ್ಯವಸ್ಥಿತ ಶಕ್ತಿಗಳು ಕಾರ್ಯನಿರ್ವಹಿಸುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಬಸವರಾಜ ಹಳ್ಳದಮನಿ ಅಧ್ಯಕ್ಷತೆಯನ್ನು ವಹಿಸಿದ್ದರು. ಪರಶುರಾಮ ಕಾಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ತಹಸೀಲ್ದಾರ್ ವಿನೋದ ಹತ್ತಳ್ಳಿ, ಸಿಪಿಐ ಹಣಮಂತ ಸಣಮನಿ, ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತ ಕಾಖಂಡಕಿ, ತಾಪಂ ಮಾಜಿ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಪಪಂ ಮಾಜಿ ನಾಮನಿರ್ದೇಶಿತ ಸದಸ್ಯ ಸಿದ್ದು ಸಾರಾವರಿ, ಕಾಶಿಮ ಅಲಿ ಗೊಠೆ, ರಮೇಶ ಅನಗವಾಡಿ, ಮಂಜುನಾಥ ಜಾನಮಟ್ಟಿ, ಯಲ್ಲಪ್ಪ ಮಾದರ ಇದ್ದರು.