ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇದೇ ಸೆ.15ರಂದು ಆಚರಿಸಲಾಗುತ್ತಿದ್ದು, ರಾಜ್ಯದ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಚಾಮರಾಜನಗರ ಜಿಲ್ಲೆಯವರೆಗೆ ಅತಿ ಉದ್ದದ ಮಾನವ ಸರಪಳಿ ರಚಿಸಲಾಗುತ್ತಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸುವಂತೆ ಲೋಕಸಭಾ ಸದಸ್ಯ ಸುನಿಲ್ ಬೋಸ್ ಮನವಿ ಮಾಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುನಿಲ್ ಬೋಸ್ ಅವರು, ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಾಗರಿಕರಿಗೆ ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳನ್ನು ಒಳಗೊಂಡ ಜಾಗೃತಿ ಮೂಡಿಸುವ ಉದ್ದೇಶದಿಂದ ಸರ್ಕಾರ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಸೆ.15ರಂದು ಬೆಳಿಗ್ಗೆ 8.30 ರಿಂದ 10.30ರವರೆಗೆ ಏಕಕಾಲದಲ್ಲಿ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವು ರಾಜ್ಯಾದ್ಯಂತ ನಡೆಯಲಿದೆ. ಚಾಮರಾಜನಗರ ಜಿಲ್ಲೆಯಲ್ಲಿ 24 ಕಿ.ಮೀ. ವ್ಯಾಪ್ತಿಯ ಮಾನವ ಸರಪಳಿ ರಚಿಸಲಾಗುತ್ತಿದ್ದು, 19,200 ಜನರು ಭಾಗವಹಿಸಲಿದ್ದಾರೆಂದು ತಿಳಿಸಿದರು.ಚಾಮರಾಜನಗರ ಜಿಲ್ಲೆಯ ಆರಂಭದ ಸರಹದ್ದಾದ ಮೂಗೂರು ಕ್ರಾಸ್ನಿಂದ ಚಾಮರಾಜನಗರ ಪಟ್ಟಣದ ಪಚ್ಚಪ್ಪ ವೃತ್ತದವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತದೆ. ಪಚ್ಚಪ್ಪ ವೃತ್ತದಿಂದ ಸುಮಾರು 1 ಕಿ.ಮೀವರೆಗೆ ಅಂದರೆ ವರ್ತಕರ ಭವನದವರೆಗೆ ಭಾರತದ ತ್ರಿವರ್ಣ ಧ್ವಜ ಹಿಡಿಯುವ ಕಾರ್ಯಕ್ರಮ ಸಹ ವಿಶೇಷವಾಗಿದೆ. ಸಂವಿಧಾನ ಪೀಠಿಕೆ ಓದುವುದು, ಸಸಿ ನೆಡುವುದು, ಇನ್ನಿತರ ವಿಶೇಷ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಲಾಗಿದೆ ಎಂದು ವಿವರಿಸಿದರು.
ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿ ಮೇಲೆ ನಿಂತಿದೆ. ಈ ಭದ್ರ ಬುನಾದಿ ಬಲಿಷ್ಠವಾಗದಿದ್ದರೆ ಪ್ರಜಾಪ್ರಭುತ್ವ ಬಲಿಷ್ಠವಾಗಲಾರದು. ಆದ್ದರಿಂದ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವದ ಆದರ್ಶಗಳು ಭಾರತ ಸಂವಿಧಾನ ಪೀಠಿಕೆಯ ಭಾಗವಾಗಿದೆ. ಅಂತಾರಾಷ್ಟ್ರಿಯ ಪ್ರಜಾಪ್ರಭುತ್ವ ದಿನ ಈ ಬಗ್ಗೆ ಅರಿವು ಮೂಡಿಸುವ ದೊಡ್ಡ ಕಾರ್ಯವನ್ನು ಸರ್ಕಾರ ಆಯೋಜಿಸಿದೆ ಎಂದರು.2023ನೇ ಸಾಲಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಎಲ್ಲೆಡೆ ಯಶಸ್ವಿಯಾಗಿ ನಡೆಸಲಾಗಿತ್ತು. ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಇದೇ ಸೆ.15ರಂದು ಉದ್ದನೆಯ ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲಾಗುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಜಿಲ್ಲೆಯ ಜನಪ್ರನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ರೋಟರಿ ಇಂಟರ್ ನ್ಯಾಷನಲ್, ಸಿವಿಲ್ ಸೊಸೈಟಿ, ಎನ್ಜಿಒ, ವಕೀಲರು, ಶಿಕ್ಷಕರು, ವಿದ್ಯಾರ್ಥಿಗಳು, ಮಹಿಳಾ ಸಂಘಟನೆಗಳು, ಮಾಧ್ಯಮದವರು, ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ಸಮುದಾಯದ ಯಜಮಾನರು, ಮುಖಂಡರು ಸೇರಿದಂತೆ ಎಲ್ಲಾ ಸಾರ್ವಜನಿಕರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕೋರಿದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿ ರಚಿಸಲಾಗುವ 24 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಾಣವು ಅತ್ಯಂತ ಗಮನ ಸೆಳೆಯಲಿದೆ. ಮೂಗೂರು ಕ್ರಾಸ್ನಿಂದ ಆರಂಭವಾಗಲಿರುವ ಮಾನವ ಸರಪಳಿ ನಿರ್ಮಾಣದ ಪ್ರತಿ 100 ಮೀಟರ್ಗೆ ವಿವಿಧ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರತಿ 500 ಮೀ.ಗೆ ಒಬ್ಬ ತಾಲೂಕು ಮಟ್ಟದ ಅಧಿಕಾರಿ ಹಾಗೂ ಪ್ರತಿ 1 ಕಿ.ಮೀ ಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ ಎಂದರು.ಇದೇ ವೇಳೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಲೋಗೊ ಒಳಗೊಂಡ ಭಿತ್ತಿ ಪತ್ರವನ್ನು ಗಣ್ಯರು ಬಿಡುಗಡೆ ಮಾಡಿದರು. ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಇದ್ದರು.