ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 4 ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸಿದ್ದು, 13.40 ಲಕ್ಷ ರೂ.ಮೊತ್ತದ ಚಿನ್ನ ಮತ್ತು ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ತಿಳಿಸಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 4 ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸಿದ್ದು, 13.40 ಲಕ್ಷ ರೂ.ಮೊತ್ತದ ಚಿನ್ನ ಮತ್ತು ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ತಿಳಿಸಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 4 ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ತೆಲಂಗಾಣ ರಾಜ್ಯದ ಹೈದ್ರಾಬಾದ್‌ನ ಮಹ್ಮದ್ ಮುಜಾಹಿದ್ ಅಲಿಯಾಸ್ ಜಾವೀದ್ ತಂದೆ ಮಹ್ಮದ್ ಜಾಫರ್ (32) ಎಂಬಾತನನ್ನು ಬಂಧಿಸಿ 13.40 ಲಕ್ಷ ರು.ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.

ತಮ್ಮ ಮನೆ ಬೀಗ ಮುರಿದು ಕಳ್ಳರು ಚಿನ್ನಾಭರಣ, 16 ಸಾವಿರ ರು..ನಗದು ಸೇರಿ 66 ಸಾವಿರ ರು.ಮೌಲ್ಯದ ನಗನಾಣ್ಯ ಕಳವಾಗಿದೆ ಎಂದು ನಗರದ ಹಳೇ ಜೇವರ್ಗಿ ರಸ್ತೆಯ ಜೀವನ ಪ್ರಕಾಶ ಶಾಲೆ ಹಿಂದುಗಡೆ ಇರುವ ಏರಿಯಾ ನಿವಾಸಿ ಶಿವರಾಜ ಅವಂಟಿ ಎಂಬುವವರು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಪ್ರಕರಣದ ಆರೋಪಿಗಳ ಪತ್ತೆಗೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಶಾಲೂ, ಪ್ರವೀಣ್ ಹೆಚ್.ನಾಯಕ್, ಕಲಬುರಗಿ ದಕ್ಷಿಣ ಉಪ ವಿಭಾಗದ ಸಹಾಯಕ ಸಹಾಯಕ ಪೊಲೀಸ್ ಆಯುಕ್ತ ಶರಣಬಸಪ್ಪ ಸುಬೇದಾರ, ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಪಿಐ ಜಿ.ಎಂ.ಪಾಟೀಲ ಅವರ ನೇತೃತ್ವದಲ್ಲಿ ಎಎಸ್‍ಐ ಶಿವಶರಣಪ್ಪ, ಸಿಬ್ಬಂದಿಗಳಾದ ಸಿರಾಜ ಪಟೇಲ್, ಪ್ರಭಾಕರ, ಮೋಸಿನ್, ಯಲ್ಲಪ್ಪ, ಶಿವಲಿಂಗ, ಮಲ್ಲಣ್ಣ, ಸಂಗಣ್ಣ, ಅನೀಲಕುಮಾರ, ಚನ್ನವಿರೇಶ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು.

ಪೊಲೀಸರ ತಂಡ ತನಿಖೆ ನಡೆಸಿ ಆರೋಪಿ ಮಹ್ಮದ್ ಮುಜಾಹಿದ್ ಅಲಿಯಾಸ್ ಜಾವೀದ್‍ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿ ಕಳ್ಳತನ ಮಾಡಿದ್ದ 12.75 ಲಕ್ಷ ರು.ಮೊತ್ತದ 85 ಗ್ರಾಂ.ಬಂಗಾರದ ಆಭರಣ, 65 ಸಾವಿರ ರು.ಮೌಲ್ಯದ 260 ಗ್ರಾಂ.ಬೆಳ್ಳಿ ಆಭರಣ ಸೇರಿ 13.40 ಲಕ್ಷ ರು.ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 4 ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವನ್ನು ಅವರು ಶ್ಲಾಘಿಸಿದರು.

ಡಿಸಿಪಿಗಳಾದ ಶಾಲೂ, ಪ್ರವೀಣ್ ಹೆಚ್.ನಾಯಕ್, ಕಲಬುರಗಿ ದಕ್ಷಿಣ ಉಪ ವಿಭಾಗದ ಸಹಾಯಕ ಸಹಾಯಕ ಪೊಲೀಸ್ ಆಯುಕ್ತ ಶರಣಬಸಪ್ಪ ಸುಬೇದಾರ, ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಪಿಐ ಜಿ.ಎಂ.ಪಾಟೀಲ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.