ಸಾರಾಂಶ
ಕಾರು ಪಲ್ಟಿಯಾಗಿ ಎದುರಿಗೆ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸೇರಿ ಮೂವರು ಸ್ಥಳದಲ್ಲೇ ಅಸುನೀಗಿದ ಘಟನೆ ತಾಲೂಕಿನ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಗದಗ: ಕಾರು ಪಲ್ಟಿಯಾಗಿ ಎದುರಿಗೆ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಸೇರಿ ಮೂವರು ಸ್ಥಳದಲ್ಲೇ ಅಸುನೀಗಿದ ಘಟನೆ ತಾಲೂಕಿನ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಕೊಪ್ಪಳದಿಂದ ಬರುತ್ತಿದ್ದ ಕಾರು, ಹೊಸಪೇಟೆ ಕಡೆಗೆ ಹೊರಟಿದ್ದ ಗೋವಾ ರಾಜ್ಯದ ಸಾರಿಗೆ ಸಂಸ್ಥೆಯ ಬಸ್ಸಿಗೆ ರೋಡ್ ಡಿವೈಡರ್ ದಾಟಿ ಬಂದು ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ಕಾರು ನಜ್ಜು ಗುಜ್ಜಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ಹಾವೇರಿ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ನಲ್ಲಿ ಪೇದೆಯಾಗಿದ್ದ ಅರ್ಜುನ ನೆಲ್ಲೂರು (34) ಅವರ ಸಹೋದರ ಸಂಬಂಧಿ ರವಿ ನೆಲ್ಲೂರು (35) ಹಾಗೂ ಈರಣ್ಣ ಉಪ್ಪಾರ (38) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹಗಳನ್ನು ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.