ವಿದ್ಯಾರ್ಥಿಗಳ ಸಮಸ್ಯೆ ಇತ್ಯರ್ಥಕ್ಕೆ ‘ಕ್ಯಾಂಪಸ್‌ ಗೇಟ್‌ ಮೀಟ್‌’ ಅಭಿಯಾನ

| Published : Sep 11 2024, 01:04 AM IST

ಸಾರಾಂಶ

ನಿಗಮಗಳಲ್ಲಿನ ಹಣ ದುರುಪಯೋಗ ಆರೋಪದ ಕುರಿತು ಪ್ರತಿಕ್ರಿಯಿಸಿದ ಕೀರ್ತಿ ಗಣೇಶ್‌, ದೇವರಾಜ ಅರಸು ನಿಗಮದಲ್ಲಿ ಇಂಥ ಆರೋಪ ಬಂದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಯುತ್ತಿದೆ. ಈ ವರ್ಷ ನಿಗಮಕ್ಕೆ 100 ಕೋಟಿ ರು. ಅನುದಾನ ನೀಡಲಾಗಿದ್ದು, ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳನ್ನು ಸಂಗ್ರಹಿಸಿ, ಬಗೆಹರಿಸುವ ಉದ್ದೇಶದಿಂದ ಎನ್‌ಎಸ್‌ಯುಐ ಸಂಘಟನೆಯು ‘ಕ್ಯಾಂಪಸ್‌ ಗೇಟ್‌ ಮೀಟ್‌’ ಅಭಿಯಾನವನ್ನು ಆರಂಭಿಸಿದೆ. ಮಂಗಳೂರಿನಲ್ಲಿ ಮಂಗಳವಾರ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಕೀರ್ತಿ ಗಣೇಶ್‌, ಸ್ಕಾಲರ್‌ಶಿಪ್‌, ಬಸ್‌ ಸಮಸ್ಯೆ, ಎನ್‌ಇಪಿ- ಎಸ್‌ಇಪಿ ಅಳವಡಿಕೆಯಲ್ಲಿನ ಸಮಸ್ಯೆಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ವಿದ್ಯಾರ್ಥಿ ಸಮೂಹ ಎದುರಿಸುತ್ತಿದೆ. ಅವುಗಳನ್ನು ಸೂಕ್ತ ವೇದಿಕೆಯ ಮೂಲಕ ಬಗೆಹರಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಗೂಗಲ್‌ ಫಾರಂ ನೀಡುತ್ತೇವೆ. ಅದರಲ್ಲಿ ಸಮಸ್ಯೆಗಳನ್ನು ನಮೂದಿಸಿ ನೀಡುವ ಮೂಲಕ ಮಾಹಿತಿ ಸಂಗ್ರಹ ಮಾಡಲಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಪ್ರತ್ಯೇಕ ಯೋಜನೆ: ನಿಗಮಗಳಲ್ಲಿನ ಹಣ ದುರುಪಯೋಗ ಆರೋಪದ ಕುರಿತು ಪ್ರತಿಕ್ರಿಯಿಸಿದ ಕೀರ್ತಿ ಗಣೇಶ್‌, ದೇವರಾಜ ಅರಸು ನಿಗಮದಲ್ಲಿ ಇಂಥ ಆರೋಪ ಬಂದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಯುತ್ತಿದೆ. ಈ ವರ್ಷ ನಿಗಮಕ್ಕೆ 100 ಕೋಟಿ ರು. ಅನುದಾನ ನೀಡಲಾಗಿದ್ದು, ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್‌ ಆಳ್ವ, ಮಂಗಳೂರು ವಿವಿ ಸಿಂಡಿಕೇಟ್‌ ಸದಸ್ಯ ಸವಾದ್‌ ಸುಳ್ಯ, ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಫಹಾಝ್‌, ಮುಖಂಡರಾದ ರಫೀಕ್‌, ಅನ್ವಿತ್‌ ಕಟೀಲ್‌, ಝಾಕೀರ್‌, ಕೀರ್ತನ್‌ ಗೌಡ ಮತ್ತಿತರರಿದ್ದರು.