ಮಂಗಳೂರು: ಮಾರಕ ಕಾಯಿಲೆ ಕ್ಯಾನ್ಸರ್ಗೆ ಆರಂಭದಲ್ಲೇ ಚಿಕಿತ್ಸೆ ಪಡೆದುಕೊಳ್ಳುವುದು ಅತ್ಯಗತ್ಯ. ಕ್ಯಾನ್ಸರ್ನ್ನು ಶೀಘ್ರ ಪತ್ತೆ ಮಾಡಿ ಚಿಕಿತ್ಸೆ ಪಡೆಯುವುದರಿಂದ ತಡೆಗಟ್ಟಬಹುದು. ಈ ರೋಗದ ವಿರುದ್ಧ ಹೋರಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಹೇಳಿದ್ದಾರೆ.ನಗರದ ಜಿಲ್ಲಾಸ್ಪತ್ರೆಯ ಆರ್ಎಪಿಸಿಸಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಸರ್ಕಾರಿ ಆಸ್ಪತ್ರೆ, ಪ್ಯಾಲಿಯೇಟಿವ್ ಮೆಡಿಸಿನ್ ವಿಭಾಗ ಹಾಗೂ ಎನ್ಡಿಸಿ ಕೋಶ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಕ್ಯಾನ್ಸರ್ ದಿನ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ವೆನ್ಲಾಕ್ ಅಧೀಕ್ಷಕ ಡಾ.ಸುಧಾಕರ್ ಮಾತನಾಡಿ, ಉತ್ತಮ ಅಭ್ಯಾಸ, ಜೀವನ ಶೈಲಿ, ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳುವುದರಿಂದ ಕ್ಯಾನ್ಸರ್ನಂತಹ ಮಾರಕ ಕಾಯಿಲೆಯಿಂದ ದೂರವಿರಬಹುದು. ಆಹಾರದ ಮೇಲೆ ನಿಗಾ ವಹಿಸಿದರೆ ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಕ್ಯಾನ್ಸರ್ ರೋಗ ತಡೆಗಟ್ಟುವ ಬಗ್ಗೆ ಮಾಹಿತಿ ಪಸರಿಸಬೇಕು ಎಂದು ಅವರು ಹೇಳಿದರು.ಸಂಪನ್ಮೂಲ ವ್ಯಕ್ತಿ, ಕೆಎಂಸಿ ಆಸ್ಪತ್ರೆಯ ವಿಕಿರಣ ಆಂಕೋಲಜಿ ವಿಭಾಗದ ಮುಖ್ಯಸ್ಥ ಡಾ.ಅತಿಯಮಾನ್ ಮಾತನಾಡಿ, ಸಾವಿನ ಪ್ರಮುಖ ಕಾರಣಗಳಲ್ಲಿ ಕ್ಯಾನ್ಸರ್ ಒಂದಾಗಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಬಹಳ ಅಗತ್ಯ. ಧೂಮಪಾನ, ಮದ್ಯಪಾನದಂತಹ ಚಟಗಳು ನಮ್ಮ ಆರೋಗ್ಯ ಹಾಳು ಮಾಡುತ್ತವೆ ಎಂದರು.ಡಿ.ಎಸ್.ಒ ಡಾ. ನವೀನ್ ಚಂದ್ರ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಸುದರ್ಶನ್, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ವೆನ್ಲಾಕ್ ಪ್ಯಾರಮೆಡಿಕಲ್ ವಿಭಾಗದ ಪ್ರಾಂಶುಪಾಲೆ ಗ್ರೇಸಿ, ವೆನ್ಲಾಕ್ ಉಪಶಮನ ಆರೈಕೆ ವಿಭಾಗದ ವೈದ್ಯಾಧಿಕಾರಿ ಡಾ. ಅಣ್ಣಯ್ಯ ಕುಲಾಲ್ ಮತ್ತಿತರರು ಇದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೆಪಾಡಿ ನಿರೂಪಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ನಿಂದ ಜಿಲ್ಲಾ ವೆನ್ಲಾಕ್ ಆಸ್ಪತ್ರೆವರೆಗೆ ಜಾಗೃತಿ ಜಾಥಾ ನಡೆಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಚಾಲನೆ ನೀಡಿದರು.