ಒಂದೂವರೆ ವರ್ಷದಲ್ಲಿ ಕ್ಯಾನ್ಸರ್ ಆಸ್ಪತ್ರೆ ಸಿದ್ಧ

| Published : Nov 12 2023, 01:00 AM IST / Updated: Nov 12 2023, 01:01 AM IST

ಒಂದೂವರೆ ವರ್ಷದಲ್ಲಿ ಕ್ಯಾನ್ಸರ್ ಆಸ್ಪತ್ರೆ ಸಿದ್ಧ
Share this Article
  • FB
  • TW
  • Linkdin
  • Email

ಸಾರಾಂಶ

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನಗರದಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಕಾಮಗಾರಿ ಚಾಲನೆ ನೀಡಿದ್ದೇನೆ. ಇನ್ನೊಂದುವರೆ ವರ್ಷದಲ್ಲಿ ಕಟ್ಟಡ ಉದ್ಘಾಟನೆಗೊಂಡು ಆಸ್ಪತ್ರೆ ಸೇವೆಗೆ ಸಿದ್ಧವಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ಹೇಳಿದರು.

ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿ ಮಧು ಬಂಗಾರಪ್ಪ ಅವರ ಆಸಕ್ತಿ ಮತ್ತು ಪ್ರಯತ್ನದಿಂದ ಕಾನೂನು ತೊಡಕು ನಿವಾರಣೆಯಾಗಿ ಕ್ಯಾನ್ಸರ್ ಆಸ್ಪತ್ರೆಗೆ ಗುದ್ದಲಿ ಪೂಜೆ ನೆರವೇರಿದೆ. ಇಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣದಿಂದ ಸುತ್ತಮುತ್ತಲಿನ ಜಿಲ್ಲೆಯ ಜನ ಸಾಮಾನ್ಯರಿಗೆ ಅತ್ಯಂತ ಉಪಯೋಗವಾಗಲಿದೆ ಎಂದರು.

ಆಸ್ಪತ್ರೆ ಸಿವಿಲ್ ಕಾಮಗಾರಿಗೆ ₹50 ಕೋಟಿ ಮಂಜೂರಾಗಿದೆ. 120 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ ಆಗಲಿದೆ. ಕೀಮೊ, ರೇಡಿಯೋ ಥೆರಪಿ ಸೇರಿದಂತೆ ಅಗತ್ಯವಾದ ಎಲ್ಲ ವ್ಯವಸ್ಥೆಯನ್ನು ಮಾಡಲಾಗುವುದು. ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವಿಭಾಗದ ಕಾರ್ಡಿಯಾಲಜಿ ಘಟಕದಲ್ಲಿ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಸೇವೆ ನೀಡಲಾಗುತ್ತಿದೆ. ಪೂರ್ಣ ಪ್ರಮಾಣದ ಕಾರ್ಯಾಚರಣೆ ಕುರಿತು ಪರಿಶೀಲಿಸಿ, ಅಭಿವೃದ್ದಿಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಜನಸಾಮಾನ್ಯರು, ಬಡವರಿಗೆ ಉಚಿತ ಮತ್ತು ಗುಣಮಟ್ಟದ ಆರೋಗ್ಯ ನೀಡುವುದು ಕಾಂಗ್ರೆಸ್‌ ಸರ್ಕಾರದ ಉದ್ದೇಶವಾಗಿದ್ದು, ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಯನ್ನು 18 ತಿಂಗಳೊಳಗೆ ಪೂರ್ಣಗೊಳಿಸಬೇಕು. ಇನ್ನು ಆರು ತಿಂಗಳಲ್ಲಿ ಆಸ್ಪತ್ರೆಗೆ ಅಗತ್ಯವಾದ ಮೂಲಸೌಕರ್ಯ, ಉಪಕರಣ, ಸಿಬ್ಬಂದಿ,ತಂತ್ರಜ್ಞಾನದ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಡವರ ಮಕ್ಕಳು ಡಾಕ್ಟರ್‌ ಆಗಬೇಕು:

ಬಡವರ ಮಕ್ಕಳು ಸಹ ಡಾಕ್ಟರ್ ಆಗಬೇಕೆಂಬ ಉದ್ದೇಶದಿಂದ ರಾಜ್ಯಾದ್ಯಂತ ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲೇ ಅತ್ಯಧಿಕ 70 ಮೆಡಿಕಲ್ ಕಾಲೇಜುಗಳಿದ್ದು, ಇದರಲ್ಲಿ 25 ಸರ್ಕಾರಿ ಕಾಲೇಜುಗಳಾಗಿವೆ. ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ವಿಭಾಗಗಳ ಕೇಂದ್ರ ಸ್ಥಾನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿದೆ. ತುಮಕೂರು, ಮಂಡ್ಯ, ಮೈಸೂರಿನಲ್ಲಿ ಕೆಲಸ ನಡೆಯುತ್ತಿದೆ. ಕಲಬುರಗಿಯಲ್ಲಿ ಆಸ್ಪತ್ರೆ ಸೇವೆ ಆರಂಭಿಸಿದೆ. ಮುಂದಿನ 5 ವರ್ಷಗಳಲ್ಲಿ ಪ್ರತಿ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಮಾತನಾಡಿ, ಈ ಜಾಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲು ಇದ್ದ ಕಾನೂನಿನ ತೊಡಕನ್ನು ನಿವಾರಿಸಲಾಗಿದೆ. ಕ್ಯಾನ್ಸರ್ ಆಸ್ಪತ್ರೆಗೆ ನಿರ್ಮಾಣಕ್ಕೆ ಸರ್ಕಾರ ₹100 ಕೋಟಿ ಮಂಜೂರು ಮಾಡಿದ್ದು, ಆದಷ್ಟು ಬೇಗ, ಗುಣಮಟ್ಟದೊಂದಿಗೆ ಆಸ್ಪತ್ರೆ ನಿರ್ಮಾಣಗೊಂಡು ಸೇವೆಗೆ ಸಿದ್ಧವಾಗಬೇಕು ಎಂದರು.

ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಟಿ ಸೇವೆಯೂ ಇದ್ದು, ವೈದ್ಯಕೀಯ ಶಿಕ್ಷಣ ಸಚಿವರು ಇನ್ನಷ್ಟು ಸಹಕಾರ ನೀಡಿದಲ್ಲಿ ಪೂರ್ಣ ಪ್ರಮಾಣದಲ್ಲಿ ಈ ಆಸ್ಪತ್ರೆ ಕಾರ್ಯನಿರ್ವಹಿಸುವ ಮೂಲಕ ಹೊರ ಜಿಲ್ಲೆಗಳಾದ ಮಂಗಳೂರು, ಬೆಂಗಳೂರು ಮತ್ತು ದಾವಣಗೆರೆಗೆ ರೋಗಿಗಳು ಚಿಕಿತ್ಸೆಗಾಗಿ ಹೋಗುವುದು ತಪ್ಪುತ್ತದೆ. ಆದ್ದರಿಂದ ಮಲೆನಾಡಿಗೆ ಹೆಚ್ಚು ಸೌಲಭ್ಯಗಳನ್ನು ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದರು. ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ.ಲೋಕೇಶ್ ಮಾತನಾಡಿ, ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮಾನವ ಸಂಪನ್ಮೂಲ, ಮೂಲಭೂತ ಸೌಕರ್ಯಗಳನ್ನು ಶಿಸ್ತಿನಿಂದ ನಿರ್ವಹಿಸಲಾಗುವುದು. ಪ್ರತಿ ವರ್ಷ ದೇಶದಲ್ಲಿ 14 ಲಕ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಾರೆ. ರಾಜ್ಯದಲ್ಲಿ ಪ್ರತಿ ವರ್ಷ 80 ಸಾವಿರ ಪತ್ತೆಯಾದರೆ ಶಿವಮೊಗ್ಗ ಸುತ್ತಮುತ್ತ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಾರೆ. ಇಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಯಿಂದ ಮಧ್ಯ ಕರ್ನಾಟಕ ಭಾಗದ ಸುತ್ತಮತ್ತಲಿನ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಇಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಅಭಿವೃದ್ದಿಗೆ ಯೋಜನೆ ರೂಪಿಸಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಯೋಗೇಶ್, ರೇಖಾ ರಂಗನಾಥ್, ಮಾಜಿ ವಿಧಾನ ಪರಿಷತ್ ಶಾಸಕ ಆರ್.ಪ್ರಸನ್ನಕುಮಾರ್, ಡಿಎಂಇ ಡಾ.ಸುಜಾತಾ ರಾಥೋಡ್, ಜಿಲ್ಲಾಧಿಕಾರಿ ಡಾ ಆರ್‌.ಸೆಲ್ವಮಣಿ, ಜಿ.ಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ, ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ ಮತ್ತಿತರರು ಇದ್ದರು.-----------------------------ಬಾಕ್ಸ್‌...ಇಲ್ಲಿ ಕ್ಯಾನ್ಸರ್ ಆಸ್ಪತ್ರೆ ಆಗಬೇಕೆಂಬ ಬಹು ದಿನದ ಕನಸು ನನಸಾಗಿದೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಅತಿಯಾದ ಜನಸಂದಣಿ ಇರುತ್ತದೆ. ಎಲ್ಲರಿಗೂ ಅಲ್ಲಿ ಚಿಕಿತ್ಸೆ ಕಷ್ಟ ಆದ್ದರಿಂದ ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಹೀಗೆ ಬೇರೆ ಬೇರೆ ಕಡೆ ಕ್ಯಾನ್ಸರ್ ಆಸ್ಪತ್ರೆ ತೆರೆದರೆ ಬಡವರು ಬದುಕುತ್ತಾರೆ. ಆದಷ್ಟು ಬೇಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡು ಬಡವರ ಸೇವೆ ಆರಂಭಿಸಲಿ. ಆಸ್ಪತ್ರೆ ಸ್ಥಾಪನೆಯಂತಹ ಪುಣ್ಯದ ಕೆಲಸ ಮತ್ತೊಂದಿಲ್ಲ. -ಬೇಳೂರು ಗೋಪಾಲಕೃಷ್ಣ, ಶಾಸಕ.-------------------

ಕ್ಯಾನ್ಸರ್ ಆಸ್ಪತ್ರೆ ಆಗುತ್ತಿರುವುದು ಒಂದೊಳ್ಳೆ ಕೆಲಸ. ಶೀಘ್ರದಲ್ಲಿ ಕೆಲಸಗಳು ಪೂರ್ಣಗೊಳ್ಳಲಿ. ಸಿಮ್ಸ್ ಕಾಲೇಜಿನಲ್ಲಿ ಅನೇಕ ಸಮಸ್ಯೆಗಳಿದ್ದು, ಆಡಳಿತವನ್ನು ಬಿಗಿಗೊಳಿಸಿ ಸಮಸ್ಯೆಗಳನ್ನು ಪರಿಹರಿಸಿದರೆ ಅನುಕೂಲವಾಗುತ್ತದೆ. -ಎಸ್.ಎನ್.ಚನ್ನಬಸಪ್ಪ,ಶಾಸಕ--------------------ಬಾಕ್ಸ್‌...ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜ್ಯದಲ್ಲಿ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡುತ್ತಿರುವುದು ಅಭಿನಂದನೀಯ. ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಎಲ್ಲ ವ್ಯವಸ್ಥೆಗಳು ಜಾರಿಗೆ ಬಂದು ಪೂರ್ಣ ಪ್ರಮಾಣದ ಚಿಕಿತ್ಸೆ ಇಲ್ಲಿಯೇ ಆಗುವಂತೆ ಆಗಬೇಕು. ಅದೇ ರೀತಿ ಜಿಲ್ಲೆಯಲ್ಲಿ ಭದ್ರಾವತಿ ದೊಡ್ಡ ತಾಲೂಕಾಗಿದೆ. ಇಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ಹೆಚ್ಚು ಜನರಿಗೆ ಅನುಕೂಲವಾಗುತ್ತದೆ. -ಸಂಗಮೇಶ್ವರ್,ಶಾಸಕ.----------------------ಪೊಟೋ: 11ಎಸ್ಎಂಜಿಕೆಪಿ02ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ಮಾತನಾಡಿದರು.