ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಕಾರಟಗಿಯಿಂದ ಶಿರಡಿಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್‌ ಕಟ್ಟೆಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಮೃತಪಟ್ಟು, ಓರ್ವ ಪ್ರಯಾಣಿಕ ಗಾಯಗೊಂಡ ಘಟನೆ ತಾಲೂಕಿನ ಮನಗೂಳಿ ಪಟ್ಟಣದ ಕೂಡಗಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಶುಕ್ರವಾರ ಸಂಭವಿಸಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ನಿವಾಸಿಗಳಾದ ವೆಂಕರಾವ್ ರಾಘವೇಂದ್ರ (20), ಸತ್ಯವೇಣಿ ರಾಘವೇಂದ್ರ (36), ಜಶ್ವಂತ್ ರಾಘವೇಂದ್ರ(18) ಮೃತಪಟ್ಟವರು. ರಾಘವೇಂದ್ರ ವೆಂಕಟರಾವ (41) ಗಾಯಗೊಂಡಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬ ಸದಸ್ಯರೆಲ್ಲ ಸೇರಿ ಕಾರಟಗಿಯಿಂದ ಮಹಾರಾಷ್ಟ್ರದಲ್ಲಿರುವ ಶಿರಡಿಗೆ ದೇವರ ದರ್ಶನಕ್ಕೆ ಹೊರಟಿದ್ದಾಗ ಕೂಡಗಿ ಕ್ರಾಸ್‌ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಪಾದಚಾರಿ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಸತ್ಯವೇಣಿ ರಾಘವೇಂದ್ರ, ಜಶ್ವಂತ ರಾಘವೇಂದ್ರ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ಕಾರು ಚಲಾಯಿಸುತ್ತಿದ್ದ ಹರಿವೆಂಕಟರಾವ್‌ ರಾಘವೆಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ರಾಘವೇಂದ್ರ ವೆಂಕಟರಾವ್‌ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಮನಗೂಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.