ಬೆಂಗಳೂರು: 2018ರ ವಿಧಾನಸಭಾ ಚುನಾವಣೆ ಸಮಯದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಕಾನೂನುಬಾಹಿರವಾಗಿ ಸಭೆ ನಡೆಸಿ ವಿಸ್ಕಿ ಹಾಗೂ ಬಿರಿಯಾನಿ ವಿತರಿಸಿದ ಆರೋಪಕ್ಕೆ ಸಂಬಂಧಿಸಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಮತ್ತು ಅವರ ಆಪ್ತ ಸಹಾಯಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಎಚ್.ಸಿ.ಬಾಲಕೃಷ್ಣ ಮತ್ತು ಅವರ ಆಪ್ತ ಸಹಾಯಕ ರವಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.ಅರ್ಜಿದಾರರ ವಿರುದ್ದದ ಎಲ್ಲ ಆರೋಪಗಳ ಕುರಿತು ತನಿಖೆ ನಡೆಸುವ ಮುನ್ನ ಪೊಲೀಸರು ಮ್ಯಾಜಿಸ್ಟ್ರೇಟ್ ಅವರಿಂದ ಪೂರ್ವಾನುಮತಿ ಪಡೆದಿಲ್ಲ. ರಾಜಕೀಯ ದ್ವೇಷ ಮತ್ತು ಅರ್ಜಿದಾರರನ್ನು ತೇಜೋವಧೆ ಮಾಡಲು ಈ ದೂರು ದಾಖಲಿಸಲಾಗಿದೆ ಎಂಬ ಅರ್ಜಿದಾರರ ಪರ ವಕೀಲರ ವಾದ ಪುರಸ್ಕರಿಸಿರುವ ಪೀಠ ಈ ಆದೇಶ ಮಾಡಿದೆ. ವಿಸ್ತೃತ ಆದೇಶವು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಪ್ರಕರಣವೇನು?:ರಾಮನಗರ ತಾಲೂಕು ಕಸಬಾ ಹೋಬಳಿ ಬಸವನಪುರದಲ್ಲಿರುವ ಹಿಲ್ ವ್ಯೂ ರೆಸಾರ್ಟ್ನಲ್ಲಿ 2018ರ ಮಾರ್ಚ್ 27ರಂದು ಸಂಜೆ 6.30ರ ಸಮಯದಲ್ಲಿ ಬಾಲಕೃಷ್ಣ ಮತ್ತು ರವಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸುಮಾರು 1,500ಕ್ಕೂ ಹೆಚ್ಚು ಜನರೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿತ್ತು. ಈ ವೇಳೆ ಸ್ಥಳದಲ್ಲಿ ಮ್ಯಾಕ್ಡೊವೆಲ್ಸ್ ಬ್ರ್ಯಾಂಡ್ ವಿಸ್ಕಿಯ 750 ಎಂಎಲ್ನ 47 ಹಾಗೂ 2 ಲೀಟರ್ನ 6 ಬಾಟಲಿಗಳು, ಇಂಪೀರಿಯಲ್ನ 4 ಬಾಟಲಿಗಳು ಮತ್ತು ಬಿರಿಯಾನಿ ವಶಪಡಿಸಿಕೊಳ್ಳಲಾಗಿತ್ತು.
ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ತನಿಖೆ ನಡೆಸಿದ್ದ ಪೊಲೀಸರು, ರಾಮನಗರ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ರದ್ದು ಕೋರಿ ಎಚ್.ಸಿ.ಬಾಲಕೃಷ್ಣ ಮತ್ತು ಅವರ ಆಪ್ತ ಸಹಾಯಕ ರವಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
(ಮಾಗಡಿ ಶಾಸಕ ಬಾಲಕೃಷ್ಣ ಮಗ್ಶಾಟ್ ಬಳಸಿ ಸರ್)
