ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ತಹಸೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ್ (35) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಸೇರಿದಂತೆ ಮೂವರ ವಿರುದ್ಧ ಖಡೆಬಜಾರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಚಿವೆ ಹೆಬ್ಬಾಳಕರ್‌ ಆಪ್ತ ಸೋಮು ದೊಡವಾಡ, ಬೆಳಗಾವಿ ತಹಸೀಲ್ದಾರ ಬಸವರಾಜ ನಾಗರಾಳ, ತಹಸೀಲ್ದಾರ ಕಚೇರಿ ಎಫ್‌ಡಿಸಿ ಅಶೋಕ ಕಬ್ಬಳಿಗೇರ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನ ಸಾವಿಗೆ ಈ ಮೂವರು ಕಾರಣ ಎಂದು ರುದ್ರಣ್ಣ ವಾಟ್ಸಾಪ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಈ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ವಿಶೇಷ ತಂಡ ರಚನೆ ಮಾಡಿದ್ದಾರೆ.