ಸಾರಾಂಶ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದು ಹಕ್ಕು. ಸರ್ಕಾರ ಸಂವಿಧಾನ ದತ್ತ ಹಕ್ಕನ್ನು ಮೊಟಕುಗೊಳಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಡೆಹಿಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಮಣಿಪಾಲದಲ್ಲಿ ನಡೆದ ಪ್ರತಿಭಟನೆ ಸಂಬಂಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಖಂಡಿಸಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದು ಹಕ್ಕು. ಸರ್ಕಾರ ಸಂವಿಧಾನ ದತ್ತ ಹಕ್ಕನ್ನು ಮೊಟಕುಗೊಳಿಸಲು ಯತ್ನಿಸುತ್ತಿದೆ. ಸರ್ಕಾರವೇ ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಿಕ್ಷಕರಿಗಾದ ಅನ್ಯಾಯದ ವಿರುದ್ಧ ನ್ಯಾಯಯುತವಾಗಿ ಪ್ರತಿಭಟಿಸಿರುವ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು ವಾಮ ಮಾರ್ಗದಿಂದ ಪ್ರತಿಭಟನಾಕಾರರನ್ನು ಬೆದರಿಸುವ ಹತಾಶ ಯತ್ನದಲ್ಲಿ ತೊಡಗಿದ್ದು ಅದು ಸಫಲವಾಗದು ಎಂದು ಗೀತಾಂಜಲಿ ಸುವರ್ಣ ಎಚ್ಚರಿಸಿದ್ದಾರೆ.ಹಗರಣಗಳ ಸರಮಾಲೆ ಹಾಗೂ ದ್ವೇಷ ರಾಜಕಾರಣದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ತೀವ್ರ ಮಳೆಯಿಂದಾಗಿ ಆಸ್ತಿಪಾಸ್ತಿ ಕಳಕೊಂಡ ಸಂತ್ರಸ್ತರತ್ತ ಮುಖ ಮಾಡದ ಸರ್ಕಾರ ಮೂಲಭೂತ ಆದ್ಯತೆಗಳ ಸಹಿತ ಅಭಿವೃದ್ಧಿಯನ್ನೂ ಕಡೆಗಣಿಸಿದೆ. ರಸ್ತೆ ದುರಸ್ತಿಗೂ ಹಣ ನೀಡದ ಸ್ಥಿತಿ ತಲುಪಿರುವಾಗ ಅನ್ಯಾಯದ ವಿರುದ್ಧ ರಸ್ತೆ ತಡೆ ಮಾಡಿದವರ ವಿರುದ್ಧ ಕೇಸು ದಾಖಲಿಸುವ ಮೂಲಕ ಸರ್ಕಾರ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ ಎಂದು ಗೀತಾಂಜಲಿ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.