ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಚಿಕ್ಕಮಗಳೂರಿನ ಹೊರ ವಲಯದ ರಾಂಪುರ ರಸ್ತೆ ಕಾಮಗಾರಿ ಹಾಗೂ ಅನುದಾನ ಮಂಜೂರಾತಿ ವಿಚಾರವಾಗಿ ಗುರುವಾರ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಮ್ಮುಖದಲ್ಲಿ ನಡೆದ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಬೀದಿ ರಂಪಾಟಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಭಂಗ ಸುಮೋಟೊ ಪ್ರಕರಣ ದಾಖಲಾಗಿದೆ.ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಗುರುವಾರ ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು, 20 ವರ್ಷ ಶಾಸಕರಾಗಿದ್ದ ಅವಧಿಯಲ್ಲಿ ರಸ್ತೆ ಕಾಮಗಾರಿ ನಡೆಸದೇ, ಇದೀಗ ಕಾಂಗ್ರೆಸ್ ಸರ್ಕಾರ ರಸ್ತೆ ಕಾಮಗಾರಿ ಮಾಡುತ್ತಿದೆ. ಈಗ ಏಕೆ ಇಲ್ಲಿಗೆ ಬಂದಿದ್ದೀರಾ ಎಂದು ನಡು ರಸ್ತೆಯಲ್ಲಿ ಪ್ರಶ್ನಿಸಿದ್ದಲ್ಲದೇ, ಸಿ.ಟಿ.ರವಿ ಹಾಗೂ ಬಿಜೆಪಿ ವಿರುದ್ಧ ಧಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ, ಒಂದು ಹಂತದಲ್ಲಿ ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆದಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಹರ ಸಾಹಸ ಪಡಬೇಕಾಯಿತು. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಂತಿ ಭಂಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.ನಾಲ್ವರ ವಿರುದ್ಧ ಎಫ್ಐಆರ್
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಗುಪ್ತ ಮಾಹಿತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪೇದೆ ಪ್ರವೀಣ್ ನೀಡಿರುವ ದೂರು ಆಧಾರಿಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿದ ಆರೋಪದಡಿ ಪೊಲೀಸರು ಒಟ್ಟು ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಈ ಪೈಕಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಿಜೆಪಿ ರಾಜೇಶ್ ಕಲ್ಲುದೊಡ್ಡಿ ಮತ್ತು ಕಾಂಗ್ರೆಸ್ ಕಾರ್ಯಕರ್ತರಾದ ಕೌಶಿಕ್ ಮತ್ತು ಹೇಮಂತ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.ಫೋಟೋ: ಸಂತೋಷ್ ಕೋಟ್ಯಾನ್ ಫೋಟೋ ಇದೆ.
---ಬಾಕ್ಸ---ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಖಂಡನೆ
ರಸ್ತೆ ಕಾಮಗಾರಿ ವೀಕ್ಷಣೆಗೆ ತೆರಳಿದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಅಡ್ಡಗಟ್ಟಿ ಗಲಾಟೆ ಮಾಡಿ, ಉದ್ದೇಶ ಪೂರ್ವಕವಾಗಿ ಆಡಳಿತ ಪಕ್ಷದ ಕಾರ್ಯಕರ್ತರು ಶಾಂತಿ ಕದಡುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಖಂಡನೆ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಕಾನೂನು ಸೂವ್ಯವಸ್ಥೆ ಎಷ್ಟರ ಮಟ್ಟಿಗೆ ಹಾಳಾಗಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯರ ಮೇಲೆಯೇ ಗೂಂಡಾ ವರ್ತನೆ ತೋರುವಷ್ಟು ಕಾನೂನು ಸುವ್ಯವಸ್ಥೆ ಹದಗೆಡಿಸಿರುವ ಕಾಂಗ್ರೆಸ್ ದುರಾಡ ಳಿತ, ಜನ ಸಾಮಾನ್ಯರಿಗೆ ಎನು ಸುರಕ್ಷತೆ ನೀಡುವುದಕ್ಕೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಸಿ.ಟಿ.ರವಿ ಅವರನ್ನು ಅಡಗಟ್ಟಿ ದುರ್ವತನೆ ತೋರುವಷ್ಟು ಧೈರ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಬಂದಿದ್ದು ಹೇಗೆ? ಯಾರ ಕುಮ್ಮಕ್ಕು ಇದೆ? ಇದನ್ನು ನೋಡಿಕೊಂಡು ನಾವು ಕೈಕಟ್ಟಿಕೊಂಡು ಕೂರಬೇಕಾ? ಶಾಂತಿ ಭಂಗ ಪ್ರಚೋದನೆಗೆ ಯಾರು ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.ವಿಧಾನಪರಿಷತ್ ಸದಸ್ಯರ ಮೇಲೆ ಗೂಂಡಾ ವರ್ತನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ಬಿಜೆಪಿ ಕಾರ್ಯಕರ್ತರೊಂದಿಗೆ ಜನರು ಬೀದಿಗಿಳಿದು ಹೋರಾಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಫೋಟೋ: ವಿಜಯೇಂದ್ರ ಫೋಟೋ ಬಳಸಿ