ಸಾರಾಂಶ
ರಾಜ್ಯಪಾಲರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಪಕ್ಷದಿಂದ ಕೈ ಬಿಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಕೃತ್ಯ ಭಾರತದಲ್ಲೂ ನಡೆಯಬಹುದು ಎಂದಿರುವ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಅವರ ವಿರುದ್ಧ ರಾಷ್ಟ್ರದ್ರೋಹಿ ಪ್ರಕರಣ ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಪಕ್ಷದಿಂದ ಕೈ ಬಿಡಬೇಕು. ರಾಜ್ಯಪಾಲರು ಸರ್ಕಾರದ ಒಂದು ಭಾಗವೇ ಆಗಿದ್ದಾರೆ. ಟೀಕಿಸುವ ಭರದಲ್ಲಿ ಮನಸ್ಸಿಗೆ ಬಂದಂತೆ ಮಾತನಾಡುವುದು ತರವಲ್ಲ. ಅದರಲ್ಲೂ ಐವನ್ ಡಿಸೋಜ ಅವರು ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರು ಐವನ್ ಅಲ್ಲ, ಹೈವಾನ್ ಎಂದು ಟೀಕಿಸಿದರು.ಕಾಂಗ್ರೆಸ್ ಮುಖಂಡರು ಇವರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಿಯೂ ಇಲ್ಲ, ಖಂಡಿಸಿಯೂ ಇಲ್ಲ. ಗಲಾಟೆಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇವರಿಗೆ ನಿಜವಾಗಿಯೂ ರಾಷ್ಟ್ರದ್ರೋಹಿ ಪಟ್ಟ ಕಟ್ಟಿ ಜೈಲಿಗೆ ಕಳಿಸಬೇಕು. ಇವರನ್ನು ಪಕ್ಷದಿಂದ ಕಾಂಗ್ರೆಸ್ ಮುಖಂಡರು ಉಚ್ಚಾಟನೆ ಮಾಡಬೇಕು. ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡಬೇಕು ಎಂದು ಹರಿಹಾಯ್ದರು. ಬಾಂಗ್ಲಾದಲ್ಲಿ ಆದಂತೆ ಕರ್ನಾಟಕದಲ್ಲೂ ನಾವು ಮಾಡುತ್ತೇವೆ ಎಂಬ ಅರ್ಥ ಬರುವ ರೀತಿಯಲ್ಲಿ ಅವರು ಮಾತನಾಡಿದ್ದಾರೆ. ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆಯಾಗಿದೆ. ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಕರ್ನಾಟಕದಲ್ಲೂ ಇದೇ ಕೆಲಸವನ್ನು ನಾವು ಮಾಡುತ್ತೇವೆ ಎಂಬುದು ಐವನ್ ಡಿಸೋಜರ ಹೇಳಿಕೆಯೇ ಎಂದು ಆಕ್ರೋಶವ್ಯಕ್ತಪಡಿಸಿದರು.