ಸಾರಾಂಶ
ಜಾತಿ ಗಣತಿ ವರದಿ ಕಳೆದ ಶುಕ್ರವಾರ ಸಂಪುಟ ಸಭೆಯಲ್ಲಿ ಮಂಡನೆಯಾಗಿ ಜಾತಿವಾರು ಜನಸಂಖ್ಯೆಯ ಅಂಶಗಳು ಹೊರಬೀಳುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಗೆ ಬಿದ್ದಿದ್ದಾರೆ.
ಬೆಂಗಳೂರು : ಜಾತಿ ಗಣತಿ ವರದಿ ಕಳೆದ ಶುಕ್ರವಾರ ಸಂಪುಟ ಸಭೆಯಲ್ಲಿ ಮಂಡನೆಯಾಗಿ ಜಾತಿವಾರು ಜನಸಂಖ್ಯೆಯ ಅಂಶಗಳು ಹೊರಬೀಳುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಗೆ ಬಿದ್ದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ರಾಜ್ಯ ಸರ್ಕಾರಕ್ಕೆ ಜನಗಣತಿ, ಜಾತಿ ಗಣತಿ ಮಾಡುವ ಅಧಿಕಾರವೇ ಇಲ್ಲ. ಅಲ್ಲದೆ ಜಾತಿಗಣತಿ ಅವೈಜ್ಞಾನಿಕವಾಗಿದೆ ಎಂದಿದ್ದಾರೆ. ಜಾತಿ ಜನಸಂಖ್ಯೆ ಅಂಕಿ ಅಂಶಗಳ ಬಗ್ಗೆಯೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಾತಿ ಗಣತಿ ಮಾಡುವ ಹಕ್ಕು ರಾಜ್ಯ ಸರ್ಕಾರಗಳಿಗಿಲ್ಲ. ಅದೇನಿದ್ದರೂ ಕೇಂದ್ರ ಸರ್ಕಾರ ಮಾಡಬೇಕು. ರಾಜ್ಯ ಸರ್ಕಾರ ಮಾಡಿರುವ ಗಣತಿ ಅಂತಿಮವಾಗಿ ಕೇಂದ್ರ ಸರ್ಕಾರ ಒಪ್ಪಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರದ ಜಾತಿಗಣತಿ ವರದಿ ವೈಜ್ಞಾನಿಕವಾಗಿಲ್ಲ. ಮೊದಲು ವೈಜ್ಞಾನಿಕವಾಗಿ ಅಧ್ಯಯನ ಮಾಡಲಿ. ಜಾತಿ ಗಣತಿಯನ್ನು ಕಾಂಗ್ರೆಸ್ ಮತಬ್ಯಾಂಕ್ ಗಾಗಿ ಬಳಸಿಕೊಳ್ಳುತ್ತಿದೆ. ವರದಿ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಒಮ್ಮತವಿಲ್ಲ ಎಂದು ಟೀಕಿಸಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಟಿ.ರವಿ, ಜನಗಣತಿ, ಜಾತಿ ಗಣತಿ ಮಾಡುವ ಅಧಿಕಾರ ಸಂವಿಧಾನ ಬದ್ಧವಾಗಿ ಕೇಂದ್ರ ಸರ್ಕಾರಕ್ಕೆ ಮಾತ್ರವೇ ಇದೆ ಎಂದು ಹೇಳಿದರು.
ಜಾತಿ ಗಣತಿ ವರದಿ ಅಧಿಕೃತವಾಗಿ ಬಿಡುಗಡೆಯಾಗಿಲ್ಲ. ಅನಧಿಕೃತವಾಗಿ ಸೋರಿಕೆಯಾಗಿರುವ ವರದಿ ಸತ್ಯ ಎಂದು ಭಾವಿಸಿದರೆ ಅದು ಚರ್ಚೆ ಹುಟ್ಟುಹಾಕುತ್ತದೆ ಎಂದರು. ಮುಸ್ಲಿಮರನ್ನು ಇಡಿಯಾಗಿ ಇಡುವ ಹಾಗೂ ಹಿಂದೂಗಳನ್ನು ಒಡೆದಾಳುವ ನೀತಿಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಹೇಳಿದರು.