ಕನ್ನಡಪ್ರಭ ವಾರ್ತೆ, ತುಮಕೂರುಜಾತಿ ಜನಗಣತಿ ಬಗ್ಗೆ ಬದ್ಧತೆಯ ರಾಜಕಾರಣ ಕೊರತೆಯಿಂದ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ದೊಡ್ಡಬಳ್ಳಾಪುರ ಶಾಸಕ, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ವೋಟಿನ ರಾಜಕೀಯ ಬಿಟ್ಟರೆ ಮತ್ತೇನು ಮಾಡಿಲ್ಲ. ಕೇಂದ್ರ ಸರ್ಕಾರವೇ ಅಧಿಕೃತವಾಗಿ ಜಾತಿ ಜನಗಣತಿಯ ಸಿದ್ಧತೆ, ಪ್ರಕ್ರಿಯೆ ಆರಂಭಿಸಿದ್ದು, ಆ ಮೂಲಕವೇ ಕರ್ನಾಟಕದ ಜನತೆ ಸಾಮಾಜಿಕ ನ್ಯಾಯ ಪಡೆದುಕೊಳ್ಳಬೇಕಾಗಿದೆ. ಈಗ ಸ್ವೀಕರಿಸಿರುವ ಸಮೀಕ್ಷಾ ವರದಿಯನ್ನು ಅಧಿವೇಶನದಲ್ಲಿ ಮಂಡನೆ ಮಾಡಿ ವರದಿಯ ಅಂಶಗಳನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದರು. ಕಳೆದ ವರ್ಷ ಸಿದ್ಧರಾಮಯ್ಯನವರು ಮತ್ತೊಂದು ಜಾತಿಗಣತಿಗೆ ಮುಂದಾದರು ಜೂನ್ 15, 2025 ರಂದು ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಮಧುಸೂದನ್ ನಾಯಕ್ ನೇತೃತ್ವದಲ್ಲಿ ಮತ್ತೊಂದು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಘೋಷಿಸಿದರು . ತಂತ್ರಜ್ಞಾನ ಬಳಸಿ ಸಮೀಕ್ಷೆ ಮಾಡಲಾಗುತ್ತಿದ್ದು ಮೂರೇ ತಿಂಗಳಲ್ಲಿ ವರದಿ ಸಿದ್ಧವಾಗುತ್ತದೆ ಎಂದು ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದರು. 3 ತಿಂಗಳಲ್ಲ, 6 ತಿಂಗಳಲ್ಲ ಒಂದು ವರ್ಷವಾದರೂ ಜಾತಿ ಜನಗಣತಿ ಪ್ರಕ್ರಿಯೆ ಮುಗಿಯುತ್ತಿಲ್ಲ. ಸಮೀಕ್ಷೆ ಶುರುವಾದದ್ದೆ ಸೆಪ್ಟೆಂಬರ್ 22ಕ್ಕೆ. ಆಗಲೇ ಮೊದಲ ಮೂರು ತಿಂಗಳು ಮುಗಿದಿತ್ತು. ನವಂಬರ್ 10 ಕ್ಕೆ ಸಮೀಕ್ಷೆ ಮುಗಿದರೂ ಆರು ತಿಂಗಳಾದರೂ ಸಮೀಕ್ಷೆಯ ವರದಿ ಪೂರ್ತಿಯಾಗಿರಲಿಲ್ಲ. ಮೇ 26ಕ್ಕೆ ಸಿದ್ದರಾಮಯ್ಯನವರಿಗೆ ರಾಜೀನಾಮೆ ಕೊಡಲು ಕಾಂಗ್ರೆಸ್ ಹೈಕಮಾಂಡ್ ಆದೇಶಿಸಿತು. ಮರುದಿನ ಮೇ 27ರಂದು ಸಿದ್ದರಾಮಯ್ಯ ತರಾತುರಿಯಲ್ಲಿ ವರದಿ ಸ್ವೀಕರಿಸಿದ ಶಾಸ್ತ್ರ ಮಾಡಿದರು, ಬದ್ಧತೆ ಇದ್ದಿದ್ದರೆ ಆಯೋಗ ಚುರುಕಾಗಿ ಕಾರ್ಯ ನಿರ್ವಹಿಸುವಂತೆ ಮಾಡಿ, ಶಿಫಾರಸ್ಸುಗಳನ್ನು ಜಾರಿಗೆ ತರಲು ಮುಂದಾಗಬೇಕಿತ್ತಲ್ಲವೇ? ಎಂದು ಅವರು ಪ್ರಶ್ನಿಸಿದರು.ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ, ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಎಸ್.ಪಿ. ಚಿದಾನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಂಗಣ್ಣ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಶಿಕಿರಣ್, ಮುಖಂಡ ನಂಜೇಗೌಡ, ವಕ್ತಾರ ಜೆ. ಜಗದೀಶ್ ಮೊದಲಾದವರು ಭಾಗವಹಿಸಿದ್ದರು.