ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುವ ಭಾರೀ ದನಗಳ ಜಾತ್ರಾ ಮಹೋತ್ಸವವು ಫೆ.15ರಿಂದ 23ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿವರ್ಷ ನಡೆಯುವ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ರಾಸುಗಳು ಆಗಮಿಸಲಿವೆ, ಜಾತ್ರೆಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪುಸ್ತಕ ಪ್ರೇಮಿ ಅಂಕೇಗೌಡರ ಅವರಿಂದ ಉದ್ಘಾಟಿಸಲಾಗುವುದು ಎಂದರು.

ಜಾತ್ರೆಯನ್ನು ಯಶಸ್ವಿಯಾಗಿ ನಡೆಸಬೇಕೆಂಬ ಉದ್ದೇಶದಿಂದ ಈಗಾಗಲೇ ಸ್ಥಳೀಯ ಮುಖಂಡರು, ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳ ಸಮ್ಮುಖದಲ್ಲಿ ಎರಡು ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿ ಸಮಿತಿಯನ್ನು ರಚನೆ ಮಾಡಲಾಗಿದೆ. ಜಾತ್ರೆಗೆ ಆಗಮಿಸುವ ರಾಸುಗಳಿಗೆ ಅನುಕೂಲವಾಗುವಂತೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಜಾತ್ರೆಯಲ್ಲಿ ಹಲವಾರು ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಆಯೋಜಿಸಲಾಗಿದೆ. ಕ್ರೀಡಾಕೂಟಗಳು, ಮಹಿಳಾ ಕ್ರೀಡಾಕೂಟಗಳು, ಮೂರು ನಾಟಕ, ಮಕ್ಕಳಿಗಾಗಿಯೇ ಒಂದು ದಿನ ಮೀಸಲಿಡಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಬರುವ ರೈತರಿಗೆ ಅಧಿಕಾರಿಗಳ ಮೂಲಕ ಬೆಳೆಪದ್ದತಿ, ಹೊಸ ಬೆಳೆಗಳು, ಹವಮಾನ ವೈಪರಿತ್ಯ, ಬಹುಬೆಳೆ ಪದ್ದತಿ, ಮಣ್ಣಿನ ಫಲವತತ್ತೆ ಕುರಿತು ಹೆಚ್ಚಿನ ಅರಿವುಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಬಾರಿ ವಿಶೇಷವಾಗಿ ಪ್ಲಾಸ್ಟಿಕ್ ಮುಕ್ತ ಜಾತ್ರೆ ನಡೆಸಲು ಪ್ರಯತ್ನ ನಡೆಸುತ್ತಿದ್ದೇವೆ. ಜಾತ್ರೆಯಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗಾಗಿ ಸಮಿತಿ ರಚಿಸಲಾಗಿದೆ, ಬೇಬಿ ಬೆಟ್ಟದಲ್ಲಿ ಚಿರತೆಗಳ ಹಾವಳಿ ಇರುವುದರಿಂದ ಹೆಚ್ಚಿನ ಬೋನ್‌ ವ್ಯವಸ್ಥೆ ಕಲ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ, ಜಾತ್ರೆಗೆ ಸಾರ್ವಜನಿಕರು ಬಂದು ಹೋಗಲು ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗೆ ಸೂಚಿಸಲಾಗಿದೆ ಎಂದರು.


ಸಾಮೂಹಿಕ ವಿವಾಹ:

ಫೆ.19ರಂದು ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ, ಈಗಾಗಲೇ ವಧು-ವವರ ನೋಂದಣಿ ಮಾಡಿಸುವ ಪ್ರಕ್ರಿಯೆ ಆರಂಭವಾಗಿದ್ದು ಇಲ್ಲಿಯವರೆಗೆ ಸುಮಾರು 25 ಜೋಡಿಗಳು ನೋಂದಣಿಯಾಗಿವೆ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗುವ ಸಾಧ್ಯತಗಳು ಇವೆ ಎಂದರು.

ಜಾತ್ರೆಯಲ್ಲಿ ಬಹುಮಾನಕ್ಕೆ ಬರುವ ರೈತರು ಫೆ.17ರ ರಾತ್ರಿ 10 ಗಂಟೆಯ ಒಳಗೆ ನೋಂದಾಯಿಸಿಕೊಳ್ಳಬೇಕು, ಫೆ.21ಕ್ಕೆ ರಾಸುಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಫೆ.23ಕ್ಕೆ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಬಹುಮಾನವಾಗಿ ಚಿನ್ನ ನೀಡಬೇಕಾ, ಅಥವಾ ನಗದು ನೀಡಬೇಕಾ ಎನ್ನುವುದನ್ನು ಇನ್ನೂ ಅಂತಿಮಗೊಳಿಸಲ್ಲ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ರೈತಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕೆ.ಟಿ.ಗೋವಿಂದೇಗೌಡ, ಕೆ.ಎಸ್.ದಯಾನಂದ್, ಹಾರೋಹಳ್ಳಿ ಸತೀಶ್, ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.