ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯವೂ ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಬೆನ್ನಲ್ಲೇ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವ ಕುರಿತು ಇಂದು (ಜು.31) ಮಹತ್ವದ ಸಭೆ ನಡೆಯಲಿದೆ.
ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯವೂ ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಬೆನ್ನಲ್ಲೇ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವ ಕುರಿತು ಇಂದು (ಜು.31) ಮಹತ್ವದ ಸಭೆ ನಡೆಯಲಿದೆ.
ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಚರ್ಚೆ
ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಹಾಗೂ ರೈತ ಸಂಘಟನೆಗಳ ಮುಖಂಡರು ಚರ್ಚೆ ನಡೆಸಲಿದ್ದಾರೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ನಗರದ ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣ, ಪ್ರವೀಣ್ ಕುಮಾರ್ ಶೆಟ್ಟಿ, ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಮಂಜುನಾಥ್ ದೇವ್, ಸಿ.ಕೆ.ರಾಮೇಗೌಡ, ಪಾಲನೇತ್ರ, ವ.ಚ.ಚನ್ನೇಗೌಡ ಸೇರಿ 35ರಿಂದ 50 ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದು ಎಂಬ ಒತ್ತಾಯದೊಂದಿಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಜೊತೆಗೆ ರಾಜ್ಯವ್ಯಾಪಿ ಕರ್ನಾಟಕ ಬಂದ್ಗೆ ಕರೆ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಮಾಹಿತಿ ನೀಡಿರುವ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು
ಈ ಕುರಿತು ಮಾಹಿತಿ ನೀಡಿರುವ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಅವರು, ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಎಲ್ಲ ಕನ್ನಡಪರ ಸಂಘಟನೆಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲಿವೆ. ಸಭೆ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಕನ್ನಡಪರ ಸಂಘಟನೆಗಳು ಮಾತ್ರವಲ್ಲ, ಇತರ ಸಂಘಟನೆಗಳಿಗೂ ಬಂದ್ಗೆ ಸಹಕಾರ ನೀಡುವಂತೆ ಮನವಿ ಮಾಡುತ್ತೇವೆ. ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ಸುತ್ತಮುತ್ತಲ ಎಲ್ಲ ಜಿಲ್ಲೆಗಳ ಜನರನ್ನೂ ಹೋರಾಟಕ್ಕೆ ಆಹ್ವಾನಿಸುತ್ತೇವೆ. ಯಾವುದೇ ಕಾರಣಕ್ಕೂ ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಕನ್ನಡಪ್ರಭಕ್ಕೆ ತಿಳಿಸಿದರು.

