ಮಡಿಕೇರಿ: ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಬೇಜವಾಬ್ದಾರಿಯಿಂದ ನೀಟ್ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಿದ್ಯಾರ್ಥಿಗಳ ಜೀವನ ಹಾಳಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆರೋಪಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ನೀಟ್ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ವೈಫಲ್ಯದ ಹೊಣೆಗಾರಿಕೆಯನ್ನು ಸರಿಪಡಿಸುವ ಯಾವುದೇ ಮಹತ್ವದ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿಲ್ಲ. ಪರೀಕ್ಷೆಗಳ ನಿರ್ವಹಣೆಯ ಜವಬ್ದಾರಿ ಹೊತ್ತಿರುವ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂಧ್ರ ಪ್ರಧಾನ್ ಅವರು ಘಟನೆಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮತದಾನ ಪ್ರತಿಯೊಬ್ಬರ ಹಕ್ಕಾಗಿದೆ. ಆದ್ದರಿಂದ ಪ್ರತಿಯೊಬ್ಬರು ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಿಸಿಕೊಳ್ಳಬೇಕು. ಈ ಸಂಬಂಧ ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗಿದೆ. ಇದೊಂದು ಉತ್ತಮ ಕಾರ್ಯಕ್ರಮವಾಗಿದೆ. ಪ್ರತಿಯೊಬ್ಬರು ಸ್ವ ಇಚ್ಛೆಯಿಂದ ಮತದಾನ ಪರಿಷ್ಕರಣೆ ಮಾಡಿಸಿಕೊಳ್ಳತಕ್ಕದ್ದು ಎಂದರು.ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ, ನೀಟ್ ಯು.ಜಿ ಪರೀಕ್ಷೆಯನ್ನು ನಡೆಸುವ ಎನ್.ಟಿ.ಎ ಲೋಪದಿಂದಾಗಿ ಮೇ 3ರಂದು ನಡೆದ ನೀಟ್ ಯು.ಜಿ ಪ್ರಶ್ನೆ ಪತ್ರಿಕೆಯ ಸೋರಿಕೆಯಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಡಲಿ ಪೆಟ್ಟು ಬಿದ್ದಿದೆ. ಭಾರತದಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಕೇವಲ ಒಂದು ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲ. ಇದು ಭಾರತದ ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವೈಫಲ್ಯವಾಗಿದೆ ಎಂದರು.ಕೇಂದ್ರದ ಶಿಕ್ಷಣ ಸಚಿವಾಲಯ ಮತ್ತು ಎನ್.ಟಿ.ಎ ವಿದ್ಯಾರ್ಥಿಗಳಿಗೆ ದ್ರೋಹ ಬಗೆದಿದೆ. ಇದರಿಂದ ದೇಶದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆ ಮತ್ತು ಆತಂಕಕ್ಕೆ ತಳ್ಳಿದೆ. ಈ ಘಟನೆಯ ನಂತರ 14 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದ ಅವರು, ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಗೆ ಪ್ರಶ್ನೆ ಪತ್ರಿಕೆ ಸಿಕ್ಕಿದ್ದರೇ ಅದು ಬರಿ ಸೋರಿಕೆಯಲ್ಲ. ಇದು ಸಾಂಸ್ಥಿಕ ಭದ್ರತೆಯ ವೈಫಲ್ಯ ಎಂದರು.ಇದು ಪ್ರಶ್ನೆ ಪತ್ರಿಕೆಯ ಸೋರಿಕೆಯಲ್ಲ. ಇದು ಮಕ್ಕಳ ಭವಿಷ್ಯದ ಮೇಲೆ ನಡೆಸಿದ ಚೆಲ್ಲಾಟ. ಇದು ಪರೀಕ್ಷಾ ಸುಧಾರಣೆಗಳಲ್ಲ. ಇದು ಪರೀಕ್ಷಾ ವಂಚನೆ. ಹಾಗಾಗಿ ಪರೀಕ್ಷಾ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಸುಧಾರಿಸಬೇಕು. ಪ್ರಶ್ನೆ ಪತ್ರಿಕೆ ತಯಾರಿಕೆ ಮುದ್ರಣ ಸಾರಿಗೆ ವ್ಯವಸ್ಥೆ ಪರೀಕ್ಷಾ ಕೇಂದ್ರಗಳು ಡಿಜಿಟಲ್ ವ್ಯವಸ್ಥೆಗಳು ಮತ್ತು ಪರೀಕ್ಷಾ ನಿಯಮಗಳನ್ನು ತಪಾಸಣೆ ಮಾಡಬೇಕು. ಇನ್ನು ಮುಂದೆ ಯಾವುದೇ ಪ್ರಶ್ನೆ ಪತ್ರಿಕೆ ಬಹಿರಂಗಗೊಳ್ಳಬಾರದು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ಟಮುಡಿ ಹಂಸ, ಕೆಪಿಸಿಸಿ ಸದಸ್ಯ ನಂದಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.