ಸಾರಾಂಶ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಕ್ರೀದ್ ಪ್ರಯುಕ್ತ ಶಾಂತಿ ಸಭೆ ಜರುಗಿತು.
ಕನ್ನಡಪ್ರಭ ವಾರ್ತೆ, ಯಾದಗಿರಿ
ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದಯುತವಾಗಿ ಆಚರಿಸಲು ಅಧಿಕಾರಿಗಳು ಕ್ರಮವಹಿಸಿ ಹಾಗೂ ಸಮಾಜ ಬಾಂಧವರು ಸರಕಾರದ ನಿಯಮ ಪಾಲಿಸುವ ಮೂಲಕ ಆಚರಿಸಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಕೋರಿದರು.ಬಕ್ರೀದ್ ಪ್ರಯುಕ್ತ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾದಗಿರಿ ಜಿಲ್ಲೆ ಮೊದಲಿನಿಂದಲೂ ಶಾಂತಿ, ಸೌಹಾರ್ದತೆಗೆ ಹೆಸರಾಗಿದೆ. ಎಲ್ಲ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಬಕ್ರೀದ್ ಆಚರಣೆಯಲ್ಲಿ ಸಹಿತ ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡದೆ ಹಬ್ಬದ ಆಚರಿಸಬೇಕು. ಜಿಲ್ಲೆಯ ಎಲ್ಲಾ ಪ್ರಾರ್ಥನೆಯ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.ಮಳೆಗಾಲವಿರುವ ಕಾರಣ ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನಗರದ ಹಾಗೂ ಗ್ರಾಮಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು. ಪ್ರಾಣಿಗಳ ವಧೆ ಹಾಗೂ ಅಕ್ರಮವಾಗಿ ಸಾಗಾಣಿಕೆ ತಡೆಯಲು ಕ್ರಮ ಕೈಗೊಳ್ಳಲು ತಿಳಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಹೆಚ್ಚುವರಿ ಎಸ್ಪಿ ಧರಣೇಶ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ರಾಜು ದೇಶಮುಖ, ಮುಖಂಡರಾದ ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಸಿರವಾರ, ಲಾಯಕ್ ಹುಸೇನ್ ಬಾದಲ್, ಅಸದ್ ಚಾವುಷ್, ಬಾಷುಮಿಯಾ, ಇನಾಯುತ್ ರಹಮಾನ್, ಡಿಎಸ್ಎಸ್ ರಾಜ್ಯ ಉಪಾಧ್ಯಕ್ಷ ಸದ್ದಾಂ ಹುಸೇನ್, ತಾಜಮ್ಮುಲ್ ಹುಸೇನ್, ಶೇಕ್ ಇಮ್ರಾನ್, ನತಿಕ್ ಬಾದಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ವರ್ಗದವರಿದ್ದರು.