ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ಹಿಂದಿನ ದಿನ ಹಾಗೂ ಕಾರ್ಯಕ್ರಮದ ದಿನ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು.

ಗದಗ: ಜ. 26ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಯವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ವ್ಯವಸ್ಥಿತವಾಗಿ ಆಚರಿಸಲು ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ಹಿಂದಿನ ದಿನ ಹಾಗೂ ಕಾರ್ಯಕ್ರಮದ ದಿನ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಅವಳಿ ನಗರದ ಪ್ರಮುಖ ಸ್ಥಳಗಳಲ್ಲಿ ಬ್ಯಾನರ್ ಅಳವಡಿಕೆಗೆ ಕ್ರಮ ವಹಿಸಬೇಕು ಎಂದರು.ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ- ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆಳಗ್ಗೆ 7.30ರೊಳಗೆ ನೆರವೇರಿಸಿ ಬೆಳಗ್ಗೆ 8.30ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು.

ಅಂದು ಬೆಳಗ್ಗೆ 9ಕ್ಕೆ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೂ ಮುಂಚೆ ದೇಶಭಕ್ತಿಗೀತೆಗಳ ಪ್ರಸಾರ ಮಾಡಬೇಕು ಎಂದರು.ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ಗಣರಾಜ್ಯೋತ್ಸವ ವ್ಯವಸ್ಥಿತ ಆಚರಣೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ ಎಂದರು.

ಸಭೆಯಲ್ಲಿ ಎಸ್ಪಿ ರೋಹನ್ ಜಗದೀಶ್, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಸಿ ಗಂಗಪ್ಪ ಎಂ., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ, ವಾರ್ತಾ ಇಲಾಖೆಯ ವಸಂತ ಮಡ್ಲೂರ, ಡಿಡಿಪಿಐ ಆರ್.ಎಸ್. ಬುರುಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.