ಈಗ ಜಿಲ್ಲೆಯವರೇ ಸಚಿವರಾಗಿರುವುದರಿಂದ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದರು. ಹಾಸನ ಜಿಲ್ಲೆಯ ಕಾಂಗ್ರೆಸ್ ಸಂಘಟನೆಗೆ ಶಿವಲಿಂಗೇಗೌಡ ಅವರ ನೇತೃತ್ವ ಹೊಸ ಶಕ್ತಿ ತುಂಬಲಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ಶ್ರೇಯಸ್ ಪಟೇಲ್, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಪಕ್ಷದ ವರಿಷ್ಠರಿಗೆ ಕಾಂಗ್ರೆಸ್ ಕಾರ್ಯಕರ್ತರು ಧನ್ಯವಾದ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ರಾಜ್ಯ ಸಚಿವ ಸಂಪುಟಕ್ಕೆ ಹಿರಿಯ ಶಾಸಕ ಕೆ. ಶಿವಲಿಂಗೇಗೌಡ ಸೇರ್ಪಡೆಯಾಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸಕಲೇಶಪುರ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಹಾಸನ ಜಿಲ್ಲೆಯ ಮಣ್ಣಿನ ಮಗನಾದ ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯವಾಗಿದೆ. ಅವರ ಸೇರ್ಪಡೆಯಿಂದ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದ್ದು, ಜಿಲ್ಲೆಯ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಲ್ಕು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಶಿವಲಿಂಗೇಗೌಡ ಅವರು ಕ್ಷೇತ್ರದ ಸಮಸ್ಯೆಗಳು ಮತ್ತು ಜಿಲ್ಲೆಯ ಅಗತ್ಯಗಳ ಬಗ್ಗೆ ಸಂಪೂರ್ಣ ಅರಿವು ಹೊಂದಿದ್ದಾರೆ. ಹಿಂದೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಹೊರ ಜಿಲ್ಲೆಗಳ ನಾಯಕರು ಬಂದಿದ್ದರಿಂದ ಸ್ಥಳೀಯ ಸಮಸ್ಯೆಗಳಿಗೆ ಸಮರ್ಪಕ ಸ್ಪಂದನೆ ದೊರೆಯುತ್ತಿರಲಿಲ್ಲ. ಈಗ ಜಿಲ್ಲೆಯವರೇ ಸಚಿವರಾಗಿರುವುದರಿಂದ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದರು. ಹಾಸನ ಜಿಲ್ಲೆಯ ಕಾಂಗ್ರೆಸ್ ಸಂಘಟನೆಗೆ ಶಿವಲಿಂಗೇಗೌಡ ಅವರ ನೇತೃತ್ವ ಹೊಸ ಶಕ್ತಿ ತುಂಬಲಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ಶ್ರೇಯಸ್ ಪಟೇಲ್, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಪಕ್ಷದ ವರಿಷ್ಠರಿಗೆ ಕಾಂಗ್ರೆಸ್ ಕಾರ್ಯಕರ್ತರು ಧನ್ಯವಾದ ಸಲ್ಲಿಸಿದರು.

ಶಿವಲಿಂಗೇಗೌಡ ಅವರು ಪ್ರಾಮಾಣಿಕ ಹಾಗೂ ಅನುಭವಿ ನಾಯಕರಾಗಿದ್ದು, ಅವರಿಗೆ ಮಹತ್ವದ ಖಾತೆ ನೀಡಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು. ಅವರ ನಾಯಕತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಸದೃಢವಾಗಲಿದೆ ಎಂಬ ವಿಶ್ವಾಸವನ್ನೂ ಮುಖಂಡರು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಮುಫೀಸ್, ಸದಸ್ಯರಾದ ಚರಣ್, ಬೈಕೆರೆ ದೇವರಾಜ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ಪಕ್ಷದ ಮುಖಂಡರಾದ ಆನೆಮಹಲ್ ಹಸೈನರ್‌, ಕಲ್ಗನೆ ಪ್ರಶಾಂತ್, ಗಿರೀಶ್ ಕಲ್ಗನೆ, ಪೇಪರ್‌ ಮಂಜು, ಅನಿಲ್ ಬಿಳಿಸಾರೆ, ಶಾಂತರಾಜ್ ಹೆನ್ನಲಿ, ಚಂದ್ರು ಅಳಕೆರೆ, ಜಾಬಿರ್‌, ಜಾಕೀರ್‌ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.