ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ರೋಣ ವಾಸುದೇವ್ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ಸ್ವಯಂ ಜನಗಣಿತಿಗೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ದೇಶದ ಭವಿಷ್ಯದ ಯೋಜನೆಗಳ ರೂಪಿಸುವಿಕೆಗೆ ಅಡಿಪಾಯವಾಗಿರುವ ಜನಗಣತಿ ಪ್ರಕ್ರಿಯೆಗೆ ಜಿಲ್ಲೆಯಲ್ಲಿ ಬುಧವಾರ ಚಾಲನೆ ದೊರೆಯಿತು.

ಚಿತ್ರದುರ್ಗ ನಗರದ ವಿ.ಪಿ ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಧೀಶರ ನಿವಾಸ ಹಾಗೂ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ಬುಧವಾರ ಜನಗಣತಿ-2027ರ ಮೊದಲ ಹಂತದ ಮನೆಪಟ್ಟಿ ಕಾರ್ಯಕ್ರಮಕ್ಕೆ ಹಾಗೂ ಸ್ವಯಂ ಗಣತಿ ಪ್ರಕ್ರಿಯೆಗೆ ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ್ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರೋಣ ವಾಸುದೇವ್, ಭಾರತ ಜನಗಣತಿ ಕಾರ್ಯಕ್ರಮ ರಾಷ್ಟ್ರದ ಅಭಿವೃದ್ಧಿಯ ದೃಷ್ಠಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಏ.1 ರಿಂದ 15ರವರೆಗೆ ಸಾರ್ವಜನಿಕರು ತಮ್ಮ ಕುಟುಂಬದ ವಿವರಗಳನ್ನು ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಎಲ್ಲ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ತಮ್ಮ ಮನೆ ಬಾಗಿಲಿಗೆ ಬರುವ ಗಣತಿ ಅಧಿಕಾರಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ನಿಖರವಾದ ಮಾಹಿತಿ ನೀಡುವ ಮೂಲಕ ರಾಷ್ಟ್ರೀಯ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಸುಮಾರು 18 ಲಕ್ಷ ಜನಸಂಖ್ಯೆ ಹೊಂದಿರುವ ಚಿತ್ರದುರ್ಗ ಜಿಲ್ಲೆಯ ಎಲ್ಲಾ 6 ತಾಲೂಕುಗಳಲ್ಲಿ ಏಕಕಾಲಕ್ಕೆ ಜನಪ್ರತಿನಿಧಿಗಳು ಹಾಗೂ ಪ್ರಮುಖರ ಉಪಸ್ಥಿತಿಯಲ್ಲಿ ಸ್ವಯಂ ಗಣತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಏ.01 ರಿಂದ 15ರವರೆಗೆ ಸಾರ್ವಜನಿಕರು ಮೊಬೈಲ್ ಆಪ್ ಮೂಲಕ ತಾವೇ ಸ್ವತಃ ತಮ್ಮ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸ್ವಯಂ ಗಣತಿ 15 ದಿನಗಳ ಅವಧಿ ಮುಗಿದ ನಂತರ ಜನಗಣತಿ ಸಿಬ್ಬಂದಿ ಜಿಲ್ಲೆಯ ಪ್ರತಿ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಜನಗಣತಿ ಸಿಬ್ಬಂದಿಗಳು ಮನೆ ಬಾಗಿಲಿಗೆ ಬರುವ ಮುನ್ನವೇ ಜಿಲ್ಲೆಯ ನಾಗರಿಕರು ಆ್ಯಪ್ ಮೂಲಕ ಸ್ವಯಂ ಪ್ರೇರಿತರಾಗಿ ತಮ್ಮ ನಿಖರವಾದ ಮಾಹಿತಿಗಳನ್ನು ದಾಖಲಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದರು.

ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮೀ ಮಾತನಾಡಿ, ಇಂದಿನಿಂದ ಏ.15ರವರೆಗೆ ಜನಗಣತಿಯ ಮೊದಲ ಹಂತವು ನಡೆಯಲಿದೆ. ಈ ಅವಧಿಯಲ್ಲಿ ಸಾರ್ವಜನಿಕರು ತಾವಾಗಿಯೇ ಆನ್‍ಲೈನ್ ಮೂಲಕ ಮಾಹಿತಿ ದಾಖಲಿಸಲು ಸ್ವಯಂ ನೋಂದಣಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

https://se.census.gov.in ವೆಬ್‍ಸೈಟ್‍ಗೆ ಭೇಟಿ ನೀಡುವ ಮೂಲಕ ತಮ್ಮ ವಿವರಗಳನ್ನು ದಾಖಲಿಸಬಹುದು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಮೂಲಕ ದೃಢೀಕರಣ ಪಡೆದು, ಮನೆಯ ಸ್ಥಿತಿಗತಿ ಮತ್ತು ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು. ಈ ಮನೆಯ ನಿರ್ಮಾಣಕ್ಕೆ ಬಳಸಿದ ಸಾಮಗ್ರಿಗಳು, ಮನೆಯಲ್ಲಿರುವ ಕುಡಿಯುವ ನೀರಿನ ಸೌಲಭ್ಯಗಳು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶ್ನೆಗಳು ಇರುತ್ತವೆ. ಏಪ್ರಿಲ್ 16ರಿಂದ ಗಣತಿದಾರರು ಖುದ್ದಾಗಿ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ತಹಸೀಲ್ದಾರ್ ಬಿ.ಎಂ.ಗೋವಿಂದರಾಜ್, ಕಂದಾಯ ನಿರೀಕ್ಷಕ ಪ್ರಾಣೇಶ್, ನಗರಸಭೆ ಪರಿಸರ ಅಭಿಯಂತರ ಜಾಫರ್, ವ್ಯವಸ್ಥಾಪಕ ಜಯಣ್ಣ, ಆರೋಗ್ಯ ನಿರೀಕ್ಷಕರು ಹೀನಾ ಕೌಸರ್, ರುಕ್ಮೀಣಿ, ಬಾಬುರೆಡ್ಡಿ ಸೇರಿದಂತೆ ಜನಗಣತಿ ಅಧಿಕಾರಿಗಳು, ಸಿಬ್ಬಂದಿ ಇದ್ದರು.