ದೇಶದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಯುವಜನರ ಹಕ್ಕುಗಳು ಮತ್ತು ಆಶಯಗಳನ್ನು ರಕ್ಷಿಸಲು ಯುವ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ.
ಹುಬ್ಬಳ್ಳಿ:
ಕೇಂದ್ರ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರೆ ನೀಡಿರುವ ರಾಷ್ಟ್ರವ್ಯಾಪಿ ಛತ್ರೋನ್ ಕಿ ಗೂಂಜ್ ಪ್ರತಿಭಟನೆಯ ಬೆಂಬಲಾರ್ಥವಾಗಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ದಾರಿ ಮಧ್ಯೆಯೇ ತಡೆದ ಪೊಲೀಸರು, ಎಲ್ಲರನ್ನು ಬಂಧಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ಎಲ್ಲರನ್ನು ಪೊಲೀಸರು ಬಂಧಿಸಿ, ಕರೆದೊಯ್ದು ನಂತರ ಬಿಡುಗಡೆಗೊಳಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ, ದೇಶದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಯುವಜನರ ಹಕ್ಕುಗಳು ಮತ್ತು ಆಶಯಗಳನ್ನು ರಕ್ಷಿಸಲು ಯುವ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದರು.ವಿದ್ಯಾರ್ಥಿಗಳ ಸಮಸ್ಯೆಗಳನ್ನು ತಕ್ಷಣ ಪರಿಹರಿಸಲು ಹಾಗೂ ಎಲ್ಲರಿಗೂ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಲು ಕೇಂದ್ರ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಾಸೀಮ ಹುಕ್ಕರಿ, ಶಾನುಖಾನ, ಶುಜಾವುದ್ದೀನ ವಾಚ್ಮೇಕರ್, ಲಿಂಗರಾಜ ನೂಲ್ವಿ, ರಾಹುಲ್ ಉಪ್ಪಲದದ್ದಿ, ನಯೀಮ್ ಸೇರಿದಂತೆ ಹಲವರಿದ್ದರು.