ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಪಟ್ಟಣದ ಆಸ್ಪತ್ರೆ ವೃತ್ತದಲ್ಲಿ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.ಅದಕ್ಕೂ ಮೊದಲು ತಾಲೂಕು ಕಚೇರಿ ಮುಂಭಾಗ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿಎಟಿಯು ಜಿಲ್ಲಾ ಮುಖಂಡ ಎಚ್. ಎಸ್. ಮಂಜುನಾಥ್, ಬಂಡವಾಳಶಾಹಿಗಳಿಗೆ ಪರವಾದ ಮತ್ತು ಕಾರ್ಮಿಕರಿಗೆ ಮಾರಕವಾದ ನೀತಿಗಳನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಯುವಜನತೆ ಮತ್ತು ಶ್ರಮಿಕ ವರ್ಗವನ್ನು ಆಧುನಿಕ ಗುಲಾಮಗಿರಿಗೆ ತಳ್ಳಲಿದೆ. ೪ ಕಾರ್ಮಿಕ ಕೋಡ್‌ಗಳನ್ನು ಜಾರಿಗೊಳಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾರ್ಮಿಕ ನೋಡ್‌ಗಳನ್ನು ಹಿಂಪಡೆದುಕೊಳ್ಳಬೇಕು, ರಾಜ್ಯ ಸರ್ಕಾರ ೪ ಕಾರ್ಮಿಕ ಕೋಡ್‌ಗಳಿಗೆ ನಿಯಮಗಳನ್ನು ರೂಪಿಸದೇ ಜಾರಿ ಮಾಡಬಾರದು. ೨೯ ಕಾರ್ಮಿಕ ಕಾಯ್ದೆಗಳನ್ನು ೪ ಕಾರ್ಮಿಕ ಕೋಡ್‌ಗಳಾಗಿ ಜಾರಿಗೊಳಿಸಿ ಆರ್ಥಿಕ ಮತ್ತು ರಾಜಕೀಯ ದಾಳಿಯಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.ಕೇಂದ್ರದ ಕಾರ್ಮಿಕರ ನೀತಿಗಳಿಂದ ನೇರವಾದ ಹೊಡೆತ ಸ್ಥಳೀಯ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಬೀಳಲಿದೆ. ಕಾರ್ಮಿಕರ ಹಿತ ಕಾಪಾಡುವ ಬದಲಿಗೆ ಬಂಡವಾಳ ಶಾಹಿಗಳ ಹಿತ ಸರ್ಕಾರಗಳಿಗೆ ಮುಖ್ಯವಾಗಿದೆ. ಕಾಯಂಯೇತರ ಕಾರ್ಮಿಕರ ಖಾಯಂಗೆ ತಿಲಾಂಜಲಿ ಇಟ್ಟಿದೆ. ಸಂಹಿತೆ ಮೂಲಕ ನಿಗದಿ ಅವಧಿಯ ಉದ್ಯೋಗಕ್ಕೆ ಅವಕಾಶ ನೀಡಿ ಕಾಯಂ ಉದ್ಯೋಗದಿಂದ ಕಾರ್ಮಿಕರನ್ನು ಹೊರ ಹಾಕಲಾಗಿದೆ ಎಂದು ಆರೋಪಿಸಿದರು.ವಿದ್ಯುಚ್ಛಕ್ತಿ ಖಾಸಗೀಕರಣ, ಪ್ರಸರಣ ಸಾರ್ವತ್ರಿಕ ಮುಷ್ಕರ ಮತ್ತು ಅನುಷ್ಠಾನ ನಿರ್ವಹಣೆ ಖಾಸಗಿ ಬಂಡವಾಳಗಾರರಿಗೆ ನೀಡುವ ಮೂಲಕ ರೈತರು, ಜನಸಾಮಾನ್ಯರ ಸಬ್ಸಿಡಿಗೆ ಕಲ್ಲು ಹಾಕಿದೆ ಎಂದು ಕಿಡಿ ಕಾರಿದರಲ್ಲದೆ, ಭೂ ಸ್ವಾಧೀನ ಕಾಯ್ದೆ ಯನ್ನು ಹಿಂಪಡೆಯಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು, ವಿದ್ಯುಚ್ಛಕ್ತಿ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಬೀಜ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದರು.ತಾಲೂಕು ಕಚೇರಿ ಮುಂಭಾಗದಿಂದ ಸಾಗಿದ ಪ್ರತಿಭಟನಾ ರ್‍ಯಾಲಿ ನವೋದಯ ವೃತ್ತದ ಹೊಸ ಬಸ್ ನಿಲ್ದಾಣ ಮುಖಾಂತರ ಮೈಸೂರು ರಸ್ತೆಯಲ್ಲಿ ಸಾಗಿ ನಂತರ ಆಸ್ಪತ್ರೆ. ವೃತ್ತದಲ್ಲಿ ರಸ್ತೆ ತಡೆ ನಡೆಸಿ ರಾಜ್ಯ, ಕೇಂದ್ರ ಸರ್ಕಾರಗಳ ನೀತಿಗಳನ್ನು ಖಂಡಿಸಿ ರಸ್ತೆ ತಡೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಜಯಲಕ್ಷ್ಮೀ , ತೇಜಸ್‌ಗೌಡ, ವಾಸು, ಚಂದ್ರೇಗೌಡ, ಸಹ ಕಾರ್ಯದರ್ಶಿ ಲಕ್ಷ್ಮೀ ಗೌಡ, ಸಿ. ಜಿ. ರವಿ, ಗೋವಿಂದರಾಜು, ದಂಡೋರ ಮಂಜುನಾಥ್, ಹರೀಶ, ಹಾಗೂ ಹಲವು ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.