ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ವಿಶ್ವವಿಖ್ಯಾತ ಮೈಸೂರು ಜಂಬುಸವಾರಿ ಶನಿವಾರ ಆರಂಭವಾಗಲಿದ್ದು, ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಟಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ತಯಾರಿ ಜೋರಾಗಿದ್ದು ನಿತ್ಯ ಬೆವರು ಹರಿಸುತ್ತಿದ್ದಾರೆ. ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ ಶ್ರೀನಿವಾಸ ಜಟ್ಟಿ ಸಜ್ಜುಗೊಳ್ಳುತ್ತಿದ್ದಾರೆ.ಕಳೆದ ಎರಡು ತಿಂಗಳಿನಿಂದ ಚಾಮರಾಜನಗರದ ದೊಡ್ಡ ಗರಡಿಯಲ್ಲಿ ತರಬೇತುದಾರ ಪುಟ್ಟಣ್ಣ ಜಟ್ಟಿ ಅವರಿಂದ ಶ್ರೀನಿವಾಸ್ ತರಬೇತಿ ಪಡೆಯುತ್ತಿದ್ದಾರೆ. ಈ ಹಿಂದೆ 2 ಬಾರಿ ಮುಷ್ಟಿ ಕಾಳಗದಲ್ಲಿ ಭಾಗವಹಿಸಿದ್ದರು. ದಸರಾ ಮಹೋತ್ಸವದಲ್ಲಿ ವಜ್ರಮುಷ್ಟಿ ಕಾಳಗಕ್ಕೆ ಅತ್ಯಂತ ಮಹತ್ವವಿದೆ. ವಿಜಯದಶಮಿ ದಿನ ನಡೆಯುವ ಜಂಬೂ ಸವಾರಿಗೂ ಮೊದಲು ರಾಜ ಮನೆತನದವರ ಸಮ್ಮುಖದಲ್ಲಿ ಈ ಕಾಳಗ ನಡೆಯುತ್ತದೆ. ಸಂಪ್ರದಾಯದ ಉದ್ದೇಶದಿಂದ ನಡೆಯುವ ಈ ಕಾಳಗ ಕೆಲವೇ ಸೆಕೆಂಡುಗಳಲ್ಲಿ ಮುಗಿಯುತ್ತದೆ. ಆದರೂ, ಈ ಕಾಳಗವನ್ನು ವೀಕ್ಷಿಸಲು ಜನರ ದಂಡೇ ನೆರೆಯುತ್ತದೆ.
ಜಟ್ಟಿ ಜನಾಂಗಕ್ಕೆ ಸೇರಿದ ನಾಲ್ವರು ಪೈಲ್ವಾನರು ವಜ್ರಮುಷ್ಟಿ ಕಾಳಗ ಮಾಡುತ್ತಾರೆ. ಕೈಯಲ್ಲಿ ದಂತದ ನಖವನ್ನು ಧರಿಸಿ ಮಾಡುವ ಈ ಹೊಡೆದಾಟದಲ್ಲಿ ಯಾರಾದರೂ ಒಬ್ಬ ಜಟ್ಟಿಯ ತಲೆಯಲ್ಲಿ ರಕ್ತ ಸುರಿಯಲು ಆರಂಭವಾದ ತಕ್ಷಣ ಕಾಳಗವನ್ನು ಮುಕ್ತಾಯ ಮಾಡುವುದು ರೂಢಿಯಿಂದಲೂ ನಡೆದುಕೊಂಡು ಬಂದಿದೆ.ಈ ವರ್ಷ ಯಾರನ್ನು ಕಳುಹಿಸುತ್ತೇವೆ ಎಂದು ರಾಜಮನೆತನಕ್ಕೆ ಮೊದಲೇ ತಿಳಿಸುತ್ತೇವೆ. ದಸರಾ ಆರಂಭಕ್ಕೆ ಒಂದು ತಿಂಗಳು ಇರುವಾಗ ಆಯ್ಕೆ ಮಾಡಿದವರಿಗೆ ತರಬೇತಿ ನೀಡಲು ಆರಂಭಿಸುತ್ತೇವೆ. ಕಾಳಗದ ನಡೆಗಳನ್ನು ಕಲಿಸಲಾಗುತ್ತದೆ. ನಿತ್ಯ ಬೆಳಗ್ಗೆ ತರಬೇತಿ ಇರುತ್ತದೆ. ಶನಿವಾರ - ಭಾನುವಾರ ದಿನಪೂರ್ತಿ ತರಬೇತಿ ನಡೆಯಲಿದ್ದು, ಜಟ್ಟಿಗಳಾಗಿರುವುದು ನಮಗೆ ಹೆಮ್ಮೆ ಎಂದು ತರಬೇತುದಾರ ಪುಟ್ಟಣ್ಣ ಜಟ್ಟಿ ಸಂತಸಪಟ್ಟರು.
ವಜ್ರಮುಷ್ಟಿ ಕಾಳಗದಲ್ಲಿ ಭಾಗವಹಿಸುವುದು ಎಂದರೆ ಅದೊಂದು ಗೌರವ. ನಮ್ಮ ಜನಾಂಗಕ್ಕೆ ಮಾತ್ರ ಇದರಲ್ಲಿ ಭಾಗಿಯಾಗಲು ಅವಕಾಶ. ಇದಕ್ಕಾಗಿ ನಮಗೆ ಗೌರವಧನ ಸಿಗುತ್ತದೆ. ಆದರೆ, ದುಡ್ಡಿಗಾಗಿ ನಾವು ಇದರಲ್ಲಿ ಪಾಲ್ಗೊಳ್ಳುತ್ತಿಲ್ಲ. ಅದು ನಮಗೆ ಮುಖ್ಯವೂ ಅಲ್ಲ. ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುವುದು ಮತ್ತು ರೋಮಾಂಚಕಾರಿಯಾದ ಈ ಸಮರ ಕಲೆಯನ್ನು ಉಳಿಸುವುದಕ್ಕಾಗಿ ಸಂತೋಷದಿಂದಲೇ ಪಾಲ್ಗೊಳ್ಳುತ್ತೇವೆ ಎಂದು ಈ ಬಾರಿ ಕಾಳಗಕ್ಕೆ ಅಣಿಯಾಗುತ್ತಿರುವ ಶ್ರೀನಿವಾಸ ಜಟ್ಟಿ ಮಾಹಿತಿ ಹಂಚಿಕೊಂಡರು.