ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಾಂದ್ರಮಾನ ಯುಗಾದಿ ಹಬ್ಬದ ಸಂಭ್ರಮದ ಮಹಾ ರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಪ್ರಯುಕ್ತ ಹಲವು ವಿಶೇಷತೆಗಳೊಂದಿಗೆ ಮಂಗಳವಾರ ಮಹಾ ರಥೋತ್ಸವ 8 ರಿಂದ 9 ರವರೆಗೆ ಸಾಲೂರು ಬೃಹನ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಸಾನ್ನಿಧ್ಯದಲ್ಲಿ ಮಹಾ ರಥೋತ್ಸವ ಧಾರ್ಮಿಕವಾಗಿ ಸಂಭ್ರಮದಿಂದ ನಡೆಯಿತು. ಇದೇ ವೇಳೆಯಲ್ಲಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎ ಇ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದರ್ ಉಪಸ್ಥಿತರಿದ್ದರು.
ಮಹಾರಥೋತ್ಸವ ವಿಶೇಷತೆ:ಚಾಂದ್ರಮಾನ ಯುಗಾದಿ ಮಹಾರಥೋತ್ಸವಕ್ಕೂ ಮುನ್ನ ಬೆಳಗ್ಗೆ 7 ಕ್ಕೆ ಕೆಂಪು ಅನ್ನ ತಯಾರಿಸಿ (ಬಲಿ ಅನ್ನ) ಮಲೆ ಮಹದೇಶ್ವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ನಂತರ ಬೇಡರ ಸ್ವಾಮಿಗಳ ನೇತೃತ್ವದಲ್ಲಿ ರಥಕ್ಕೆ ಪೂಜೆ ಸಲ್ಲಿಸಿ ರಥದ ಚಕ್ರಗಳಿಗೆ ಬಲಿ ಅನ್ನ ಇಟ್ಟು ನಂತರ ಮಹಾ ಮಂಗಳಾರತಿ ಪೂಜೆ ಸಲ್ಲಿಸಿ ಬೆಲ್ಲದ ಆರತಿ ನಂತರ ಬೂದು ಕುಂಬಳಕಾಯಿ ಒಡೆದ ನಂತರ ಸ್ವಾಮೀಜಿಗಳು ತೆಂಗಿನಕಾಯಿ ಒಡೆಯುವ ಮೂಲಕ ಮಹಾರಥೋತ್ಸವಕ್ಕೆಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳಿಂದ ಬೆಲ್ಲದ ಆರತಿ ಬೆಳಗಿದ ನಂತರ ಚಾಲನೆ ನೀಡಲಾಯಿತು.
ಬಿಳಿ ಆನೆ ಉತ್ಸವ:ಮಹಾ ರಥೋತ್ಸವದ ನಂತರ ಪಾರ್ವತಿ ಪರಮೇಶ್ವರರ ಉತ್ಸವ ಮೂರ್ತಿಯನ್ನು ಬಿಳಿ ಆನೆಯ ಮೇಲೆ ಪ್ರತಿಷ್ಠಾಪಿಸಿ ದೇವಾಲಯದ ಸುತ್ತಲೂ ವಾದ್ಯಗಳೊಂದಿಗೆ ಪ್ರದಕ್ಷಣೆ ಹಾಕಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಮಹಾ ಮಂಗಳಾರತಿಯೊಂದಿಗೆ ಪೂಜೆಯ ನಂತರ ಬಿಳಿ ಆನೆ ಹಾಗೂ ಪಾರ್ವತಿ ಪರಮೇಶ್ವರರ ವಿಗ್ರಹ ಮೂರ್ತಿಗಳ ಉತ್ಸವ ಭಾರಿ ವಿಜೃಂಭಣೆಯಿಂದ ನಡೆಯಿತು.
ಗುರು ಬ್ರಹ್ಮೋತ್ಸವ:ಮಲೆ ಮಹದೇಶ್ವರ ಉತ್ಸವ ಮೂರ್ತಿಗೆ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ನಲ್ಲಿ ಇರುವ ಪಲ್ಲಕಿಯಲ್ಲಿ ಇಟ್ಟು ಗುರು ಬ್ರಹ್ಮೋತ್ಸವ ಉತ್ಸವ ಮೂರ್ತಿಯನ್ನು ವಾದ್ಯಗಳ ಹಾಗೂ ವೀರಗಾಸೆ ಕತ್ತಿ ವರಸೆ, ನವಿಲೂರು ವಾದ್ಯ ಮೇಳೆಗಳ ಜೊತೆ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಿ ನಂತರ ಉತ್ಸವ ಮೂರ್ತಿಗೆ ಧೂಪದ ಅಭಿಷೇಕ, ಬಿಲ್ವಾರ್ಚನೆ, ಅಭಿಷೇಕ ಮಹಾಮಂಗಳಾರತಿ ನಂತರ ವಿಶೇಷ ಪೂಜೆ ಸಲ್ಲಿಸುವ ಈ ಸನ್ನಿವೇಶವನ್ನು ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಮಾದಪ್ಪನ ಭಕ್ತರು ಕಣ್ತುಬಿಕೊಂಡರು.
ವಿಶೇಷ ವಿದ್ಯುತ್ ದೀಪಾಲಂಕಾರ:ಮಲೆ ಮಹದೇಶ್ವರ ಬೆಟ್ಟದಲ್ಲಿ ಏರ್ಪಡಿಸಲಾಗಿದ್ದ ಜಾತ್ರೆಯಲ್ಲಿ ಹಲವು ವಿಶೇಷತಗಳೊಂದಿಗೆ ವಿದ್ಯುತ್ ದೀಪ ಅಲಂಕಾರ ಆಕರ್ಷಕ ವಿವಿಧ ಬಣ್ಣಗಳಿಂದ ಕೂಡಿರುವ ವಿದ್ಯುತ್ ದೀಪಾಲಂಕಾರ ಮೆರಗು ತಂದಿತ್ತು.
ರಥೋತ್ಸವಕ್ಕೆ ಭಕ್ತರ ದಂಡು:ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಮಹಾರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಹಾಗೂ ವಿವಿಧ ಜಿಲ್ಲೆಯ ತಾಲೂಕುಗಳಿಂದ ಮತ್ತು ತಮಿಳುನಾಡಿನಿಂದಲೂ ಲಕ್ಷಾಂತರ ಭಕ್ತರು ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಕಣ್ತುಂಬಿ ಕೊಂಡರು.
ದಾಸೋಹ ವ್ಯವಸ್ಥೆ:ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಮಾದಪ್ಪನ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಿದೆ. ಜೊತೆಗೆ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೂ ದಾಸೋಹ ವ್ಯವಸ್ಥೆಯನ್ನು ಪ್ರಾಧಿಕಾರದ ವತಿಯಿಂದ ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಕಲ್ಪಿಸಿತ್ತು.