ಏಪ್ರಿಲ್‌ 4ಕ್ಕೆ ಚಂದ್ರಪ್ಪ ನಾಮಪತ್ರ ಸಲ್ಲಿಕೆ; ಸಿಎಂ, ಡಿಸಿಎಂ ಭಾಗಿ

| Published : Apr 01 2024, 12:46 AM IST

ಏಪ್ರಿಲ್‌ 4ಕ್ಕೆ ಚಂದ್ರಪ್ಪ ನಾಮಪತ್ರ ಸಲ್ಲಿಕೆ; ಸಿಎಂ, ಡಿಸಿಎಂ ಭಾಗಿ
Share this Article
  • FB
  • TW
  • Linkdin
  • Email

ಸಾರಾಂಶ

ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದು, ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದೇ ದಿನ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ. ಸಾರ್ವಜನಿಕ ಸಭೆಯಲ್ಲಿ ಸಿಎಂ ಮತಯಾಚನೆ ಮಾಡಲಿದ್ದಾರೆ. ನೀಲಕಂಠೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿ ನಂತರ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಬಹಿರಂಗ ಸಭೆ ನಡೆಯಲಿದೆ ಎಂದರು.ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿ 5300 ಕೋಟಿ ರು. ಅನುದಾನ ನೀಡುವುದಾಗಿ ಪ್ರಧಾನ ಮಂತ್ರಿ ಹೇಳಿದ್ದು, ಇದುವರೆಗೂ ಘೋಷಿತ ಅನುದಾನ ಬಿಡುಗಡೆ ಮಾಡಿಲ್ಲ. ಮಧ್ಯ ಕರ್ನಾಟಕದ ಜನರ ಬಿಜೆಪಿ ವಂಚಿಸಿದೆ. ಪ್ರಧಾನಿ ಮೋದಿ ನೀಡಿದ ವಚನವ ಈಡೇರಿಸಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಬರ ನಿರ್ವಹಣೆಗೂ ಕೇಂದ್ರ ಸ್ಪಂದಿಸಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಗ್ಯಾರಂಟಿ ಯೋಜನೆಗಳ ಮುಂದಿಟ್ಟುಕೊಂಡು ಮತ ಯಾಚನೆ ಮಾಡಲಾಗುವುದು ಎಂದರು. ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಚಿತ್ರದುರ್ಗ ಕಾಂಗ್ರೆಸ್ ಭದ್ರಕೋಟೆ. ಮತದಾರರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಪ್ಪಿ ದ್ದಾರೆ. ಜನ ಕಲ್ಯಾಣಕ್ಕಾಗಿ ರೂಪಿಸಿದ ಐದು ಗ್ಯಾರಂಟಿ ಅನುಷ್ಠಾನ ಮಾಡಿ ಜನರ ನಂಬಿಕೆ ಉಳಿಸಿಕೊಂಡಿದ್ದೇವೆ. ಈ ಚುನಾವಣೆಯಲ್ಲೂ ಜನ ಕೈ ಹಿಡಿಯುವ ವಿಶ್ವಾಸ ಇದೆ. 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಾತಾವರಣ ಇದೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮಾತನಾಡಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭದ್ರ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ಅನುದಾನ ಘೋಷಿಸಿದ್ದರು. ಕಾಯ್ದೆ ಪ್ರಕಾರ 12 ಸಾವಿರ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚಿದ್ದರೆ ಅದನ್ನು ರಾಷ್ಟ್ರೀಯ ಯೋಜನೆ ಆಗಬೇಕು ಆದರೂ ಮಾಡಿಲ್ಲ. ಅನುದಾನವನ್ನೂ ಕೊಟ್ಟಿಲ್ಲ. ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸಿದ್ದರಾಮಯ್ಯ 500 ಕೋಟಿ ಕೊಟ್ಟಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಜಿಲ್ಲೆಗೆ ಯಾವ ಕೊಡುಗೆ ನೀಡಿದೆ ಎಂದು ಪ್ರಶ್ನಿಸಿದರು. ನಾನು ಮೂಡಿಗೆರೆ ಚಂದ್ರಪ್ಪ ಅಲ್ಲವಿಧಾನಸಭೆ ಚುನಾವಣೆಯಲ್ಲಿ ಮೂಡಿಗೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದೆ ಅನ್ನುವ ಕಾರಣಕ್ಕೆ ನನ್ನ ಹೆಸರಿಗೆ ಮೂಡಿಗೆರೆ ತಳಕು ಹಾಕಿಕೊಂಡಿದೆ. ನಾನು ಮೂಡಿಗೆರೆ ಚಂದ್ರಪ್ಪ ಅಲ್ಲ. ಹೊಸದುರ್ಗದ ಪಕ್ಕದಲ್ಲೇ ಇರುವ ತರೀಕೆರೆ ತಾಲೂಕಿನವನು. ನಾನೇನು 500 ಕಿಮೀ ದೂರದಿಂದ ಬಂದಿಲ್ಲ. ಕಳೆದ ಚುನಾವಣೆಯಲ್ಲಿ ಸೋತರೂ ಪಲಾಯನ ಮಾಡದೆ ಜನ ಸಂಪರ್ಕದಲ್ಲಿದ್ದೆ. ಈ ಸಾರಿ ಜನರು ಕೈ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಬರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಭಾರೀ ಅನ್ಯಾಯ ಆಗುತ್ತಿದೆ. ನಮಗೆ ಬರಬೇಕಾದ ತೆರಿಗೆಯೂ ಬರುತ್ತಿಲ್ಲ. ರಾಜ್ಯ ಸರ್ಕಾರ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದರೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುವುದು ಬಿಟ್ಟಿಲ್ಲವೆಂದರು.

ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಜಿಲ್ಲೆಯ ಶಾಸಕರು, ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ಇದರಿಂದ ರಾಜ್ಯ ಸರ್ಕಾರದ ಐದು ಗ್ಯಾರೆಂಟಿಗಳ ಜೊತೆಗೆ ಕೇಂದ್ರ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸಿಗಲಿದೆ ಎಂದರು.

ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‍ ಪೀರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಶಿವಣ್ಣ, ಮರುಳಾರಾಧ್ಯ, ಅಲ್ಲಾಭಕ್ಷಿ, ಡಿ.ಟಿ.ವೆಂಕಟೇಶ್, ನರಸಿಂಹರಾಜು, ಎನ್.ಡಿ.ಕುಮಾರ್, ಸಂಪತ್ ಕುಮಾರ್, ನರಸಿಂಹರಾಜು, ಬಾಲಕೃಷ್ಣ ಯಾದವ್, ಪ್ರಕಾಶ್ ರಾಮನಾಯ್ಕ್, ಅಲ್ಲಾಭಕ್ಷಿ, ಜಯ್ಯಣ್ಣ, ಶಿವಣ್ಣ, ವೆಂಕಟೇಶ್, ಮಧುಗೌಡ, ರವಿ ಲೋಕೇಶ್, ಕುಮಾರ್, ಜಗದೀಶ್ ಮತ್ತಿತರರಿದ್ದರು.