ಸಾರಾಂಶ
ರಾಮನಗರ: 70ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಇದಕ್ಕಾಗಿ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು. ಅದಕ್ಕೂ ಮುನ್ನ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಬೆಳಿಗ್ಗೆ 8 ಗಂಟೆಗೆ ದ್ವಜಾರೋಹಣ ನೆರವೇರಿಸಿ 9 ಗಂಟೆಯ ವೇದಿಕೆ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಬೇಕು ಎಂದರು.ವೇದಿಕೆಯ ಸಿದ್ಧತೆ, ಆಸನಗಳ ವ್ಯವಸ್ಥೆ, ಆಮಂತ್ರಣ ಪತ್ರಿಕೆಗಳ ಮುದ್ರಣ ಹಾಗೂ ವಿತರಣೆ, ಬ್ಯಾನರ್, ಪುಷ್ಪಾಲಂಕಾರ, ಕ್ರೀಡಾಂಗಣದ ಸಮತಟ್ಟು ಹಾಗೂ ಸ್ವಚ್ಛತೆ ಕಾಪಾಡುವುದು. ಕುಡಿಯುವ ನೀರು ಪೂರೈಕೆ, ನಿರಂತರ ವಿದ್ಯುತ್ ಪೂರೈಕೆ ಹಾಗೂ ವಿದ್ಯುತ್ ಅಲಂಕಾರ, ರಾಷ್ಟçಗೀತೆ ಹಾಗೂ ನಾಡಗೀತೆ ಹಾಡಲು ಕಲಾವಿದರ ನಿಯೋಜನೆ, ಆರೋಗ್ಯ ಇಲಾಖೆ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಹಾಗೂ ಪೊಲೀಸರಿಂದ ಸೂಕ್ತ ಬಂದೋಬಸ್ಥ್ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಚ್ಚುಕಟ್ಟಾಗಿ ನೆರವೇರಿಸುವಂತೆ ಸೂಚನೆ ನೀಡಿದರು.
ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುವುದು. ನಾಡಿನ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸಿದ ಇಂತಹ ಮಹನೀಯರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಕ್ತಿ ಸಮರ್ಪಣೆ ಮಾಡಬೇಕು. ಅ.23ರಂದು ರಾಯರ ದೊಡ್ಡಿಯಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 10:.30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಎಲ್ಲರೂ ಈ ಜಯಂತಿಯಲ್ಲಿ ಭಾಗವಹಿಸುವಂತೆ ಚಂದ್ರಯ್ಯ ಕೋರಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಧನರಾಜ್, ಅಪರ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಡಿವೈಎಸ್ಪಿ ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
18ಕೆಆರ್ ಎಂಎನ್ 1.ಜೆಪಿಜಿರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆ ನಡೆಯಿತು.