ಸಾರಾಂಶ
ಬಿಡಿಸಿಸಿ ಬ್ಯಾಂಕ್ ಚುನಾವಣೆ ಅಕ್ಟೋಬರ್ನಲ್ಲಿ ನಡೆಯಲಿದ್ದು, ಖಾನಾಪುರ ಸಹಕಾರ ಕ್ಷೇತ್ರದಿಂದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬಿಡಿಸಿಸಿ ಬ್ಯಾಂಕ್ ಚುನಾವಣೆ ಅಕ್ಟೋಬರ್ನಲ್ಲಿ ನಡೆಯಲಿದ್ದು, ಖಾನಾಪುರ ಸಹಕಾರ ಕ್ಷೇತ್ರದಿಂದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಈ ಕುರಿತು ವಿಡಿಯೋ ಹೇಳಿಕೆ ನೀಡಿರುವ ಅವರು, ಚನ್ನರಾಜ ಹಟ್ಟಿಹೊಳಿ ಖಾನಾಪುರ ಪಿಕೆಪಿಎಸ್ನಿಂದ ಕಳೆದ ಕೆಲ ತಿಂಗಳುಗಳಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ, ಜಿಲ್ಲಾ ರಾಜಕಾರಣದ ಹಿತದೃಷ್ಟಿಯಿಂದ ಅವರ ಸ್ಪರ್ಧೆ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಜೊತೆಗೆ ಮಾತನಾಡಿ ಮನವೊಲಿಸಲಾಗಿದೆ ಎಂದರು.
ಕೆಲ ಕಡೆಗಳ ಪಿಕೆಪಿಎಸ್ನಿಂದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದರೇ ಇನ್ನೊಂದು ಕ್ಷೇತ್ರದಲ್ಲಿ ಚುನಾವಣೆ ನಡೆಸುವ ಅನಿವಾರ್ಯತೆ ಬಂದಿದೆ. ಹಾಗಾಗಿ, ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ ಚನ್ನರಾಜ ಸ್ಪರ್ಧೆಯಿಂದ ಹಿಂಪಡೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.ಸಚಿವ ಸತೀಸ ಜಾರಕಿಹೊಳಿ ನಿರ್ಧಾರಕ್ಕೆ ಬದ್ಧ: ಎಂಎಲ್ಸಿ ಚನ್ನರಾಜ
ಬೆಳಗಾವಿ: ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಸ್ಪರ್ಧೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 6 ತಿಂಗಳನಿಂದ ಖಾನಾಪುರ ಪಿಕೆಪಿಎಸ್ ಕ್ಷೇತ್ರದಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದೇವು. ಅದು ಸತ್ಯ. ಸಾಕಷ್ಟು ಸೊಸೈಟಿ ಮುಂದೆ ಬಂದು ಬೆಂಬಲ ಸೂಚಿಸಿದ್ದರು ಎಂದರು.ಜಿಲ್ಲೆಯ ರಾಜಕೀಯ ಪರಿಸ್ಥಿತಿ ಮತ್ತು ಡಿಸಿಸಿ ಬ್ಯಾಂಕ್ ಮುಂದೆ ಯಾವ ರೀತಿ ನಡೆಸಬೇಕು ಎಲ್ಲ ಹೊಂದಾಣಿಕೆ ಮಾಡಿಕೊಂಡು ಹೋಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ನಾವು ಒಂದು ಗಂಟೆಗಳ ಕಾಲ ಸುಧೀರ್ಘ ಚರ್ಚೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ನಾವು ಬದ್ಧರಾಗಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಸ್ಪಷ್ಟನೆ ನೀಡಲಿದ್ದಾರೆ ಎಂದರು.ಮುಂಬರುವ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಯಾವ ರೀತಿ ಮಾರ್ಗದರ್ಶನ ಕೊಡುತ್ತಾರೋ ಆ ರೀತಿ ನಡೆಯುತ್ತೇವೆ. ಮುಂಬರುವ ದಿನಗಳಲ್ಲಿ ಸಾಕಷ್ಟು ಅವಕಾಶಗಳಿವೆ. ಅಂಥ ಸಂದರ್ಭದಲ್ಲಿ ನಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.ಯಾವುದೇ ಚರ್ಚೆಯಾದರೂ ಸದ್ಯದ ಪರಿಸ್ಥಿತಿಯ ಬಗ್ಗೆ ಯಾವ ನಿರ್ಧಾರ ಸೂಕ್ತ ಎಂಬುವುದು ತೆಗೆದುಕೊಳ್ಳುವುದು ಸೂಕ್ತ. ಗ್ರಾಮೀಣ ಕ್ಷೇತ್ರದಿಂದ ಇನ್ನೂ ಚರ್ಚೆಯಾಗಿಲ್ಲ. ಮೃಣಾಲ್ ಹೆಬ್ಬಾಳ್ಕರ್ ಸ್ಪರ್ಧೆ ಮಾಡುವುದು ಇನ್ನೂ ಚರ್ಚೆಯಾಗಿಲ್ಲ. ಖಾನಾಪುರ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಇನ್ನೂ ಗೊತ್ತಿಲ್ಲ. ಆದರೆ, ಖಾನಾಪುರ ಜನತೆಗೆ ನೀಡಿದ ಅಭಿವೃದ್ಧಿ ಕೆಲಸ ಮುಂದುವರೆಯುತ್ತದೆ ಎಂದರು.