ಚನ್ನರಾಯಪಟ್ಟಣದ ಶಿವನಗೌಡ ಪಾಟೀಲಗೆ ವರ್ಷದ ವ್ಯಕ್ತಿ ಪ್ರಶಸ್ತಿ

| Published : Oct 07 2024, 01:32 AM IST

ಚನ್ನರಾಯಪಟ್ಟಣದ ಶಿವನಗೌಡ ಪಾಟೀಲಗೆ ವರ್ಷದ ವ್ಯಕ್ತಿ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನರಾಯಪಟ್ಟಣದ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಕುಂಬೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕರಾದ ಶಿವನಗೌಡ ಪಾಟೀಲ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಶಿಕ್ಷಣ ಕ್ಷೇತ್ರದ ಕೊಡುಗೆಗೆ ಒಲಿದ ಗೌರವ

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಕುಂಬೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕರಾದ ಶಿವನಗೌಡ ಪಾಟೀಲ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ತಂದುಕೊಟ್ಟು ಮಕ್ಕಳಲ್ಲಿ ಗುಣಾತ್ಮಕ ಮತ್ತು ಪರಿಣಾಮಾತ್ಮಕ ಕಲಿಕೆ ಮೂಡಿಸುವದರೊಂದಿಗೆ ಶಿಕ್ಷಣದಲ್ಲಿ ರಂಗಕಲೆ ಮತ್ತು ಜಾನಪದ ಕಲೆಗಳನ್ನು ಅಳವಡಿಸಿಕೊಂಡು ಉತ್ತಮವಾದ ಕಲಿಕಾ ವಾತಾವರಣ ನಿರ್ಮಿಸುವುದರ ಜತೆಗೆ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.

ಇವರ ೩೪ ವರ್ಷಗಳ ಸುದೀರ್ಘ ಸೇವೆಯನ್ನು ಪರಿಗಣಿಸಿ ದಿನಾಂಕ ಹಾಸನದ ಶ್ರೀ ಆದಿಚುಂಚನಗಿರಿ ಸಮುದಾಯಭವನದಲ್ಲಿ ನಡೆದ ಸಮಾರಂಭದಲ್ಲಿ ಕೆ.ಎನ್.ಫೌಂಡೇಶನ್ ಬೆಂಗಳೂರು, ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಹಾಸನ ಶಾಲಾ ಶಿಕ್ಷಣ ಇಲಾಖೆ ಹಾಸನ, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಹಾಸನ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಕೆ.ಪಾಂಡು, ಕೆ.ಎನ್.ಫೌಂಡೇಶನ್‌ನ ಛೇರ್ಮನ್ ಮತ್ತು ಸಿಇಒ ರಾಜ್ ಕೃಷ್ಣಮೂರ್ತಿ, ಹಾಸನ ಜಿಲ್ಲಾಧಿಕಾರಿ ಸತ್ಯಭಾಮ, ಹಾಸನ ಜಿಲ್ಲಾ ಪಂಚಾಯತ್ ಸಿಇಒ ಪೂರ್ಣಿಮಾ, ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಪ್ಪ ಮುಂತಾದವರು ಉಪಸ್ಥಿತರಿದ್ದರು.

ವರ್ಷದ ವ್ಯಕ್ತಿ ಪ್ರಶಸ್ತಿಗೆ ಭಾಜನರಾದ ಪಾಟೀಲರಿಗೆ ಬಿಇಒ ಎಚ್. ಎನ್. ದೀಪಾ, ಅನಿಲ್, ನಂಜಪ್ಪ ಮತ್ತು ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.