ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ-ಕೇರ್ ಕಿಮೋಥೆರಪಿಯನ್ನು ಆರಂಭಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್ ಹೇಳಿದರು.ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೋಥೆರಪಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ವಿಜಯಪುರ ಹಾಗೂ ರಾಯಚೂರು ಜಿಲ್ಲೆಯಲ್ಲಿ ಕೇಂದ್ರ ಸ್ಥಾಪಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೇ-ಕೇರ್ ಕಿಮೋಥೆರಪಿಗಳನ್ನು ಸ್ಥಾಪಿಸಲಾಗುತ್ತಿದೆ. ವಿಜಯಪುರದಲ್ಲಿ ಕಿಮೋಥೆರಪಿ ಕೇಂದ್ರದಿಂದ ದೂರದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೋಗುವ ಅನಿವಾರ್ಯತೆ ಇಲ್ಲ. ಆದರೆ, ದೂರದ ಪ್ರಯಾಣ ಬೆಳೆಸುವ ಬದಲಿಗೆ, ಕ್ಯಾನ್ಸರ್ ರೋಗಿಗಳು ಸ್ಥಳೀಯವಾಗಿಯೇ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲಾದ ಕೇಂದ್ರದಲ್ಲಿಯೇ ಚಿಕಿತ್ಸೆ ಪಡೆಯುವುದರಿಂದ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದರು.
ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ೧೦ ಹಾಸಿಗೆಯುಳ್ಳ ಕಿಮೋಥೆರಪಿ ಡೇ ಕೇರ್ ಕೇಂದ್ರ ತೆರೆಯುವ ಮೂಲಕ ಸರ್ಕಾರ ಅನುಕೂಲ ಕಲ್ಪಿಸಿದೆ. ಇದರೊಂದಿಗೆ ಮೆಮೋಗ್ರಾಫಿ ಕೇಂದ್ರವನ್ನು ಈ ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭಗೊಂಡಿದ್ದು ಇದರಿಂದ ಸ್ತನ ಕ್ಯಾನ್ಸರ್ ಪ್ರಮಾಣವನ್ನು ಬಹಳಷ್ಟು ತಗ್ಗಿಸಬಹುದು. ಯಾವುದೇ ರೋಗವನ್ನು ಗುಣಪಡಿಸಲು ಪ್ರಾಥಮಿಕ ಹಂತದಲ್ಲಿಯೇ ರೋಗವನ್ನು ಪತ್ತೆ ಹೆಚ್ಚಿದ್ದಲ್ಲಿ ಗುಣಪಡಿಸಲು ಸಹಾಯಕವಾಗುತ್ತದೆ. ಪ್ರಾಥಮಿಕ ಹಂತದಲ್ಲಿಯೇ ಸ್ತನ ಕ್ಯಾನ್ಸರ್ ಪತ್ತೆ ಹಚ್ಚಿದ್ದಲ್ಲಿ ಗುಣಪಡಿಸಬಹುದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲಿಯೇ ರೋಗವನ್ನು ಪತ್ತೆ ಹಚ್ಚಲು ಅವಶ್ಯಕವಿರುವ ಯಂತ್ರೋಪಕರಣಗಳನ್ನು ಸಹ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಇದರಿಂದ ತಪಾಸಣೆಗೊಳಪಡಿಸಿ ರೋಗ ಪರೀಕ್ಷಿಸಲು ಅನುಕೂಲವಾಗಲಿದೆ ಎಂದು ಹೇಳಿದರು.ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಬಾಲ ವಿಕಾಸ ಅಕಾಡೆಮಿ ಅಧ್ಯಕ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇವೆಗಳ ನಿರ್ದೇಶಕಿ ಡಾ.ತ್ರಿವೇಣಿ.ಎಂ.ಜಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ್ ಗುಣಾರಿ ಉಪಸ್ಥಿತರಿದ್ದರು.
ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಒದಗಿಸುವ ಸೌಲಭ್ಯ ಕುರಿತಾಗಿ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ನೀಡುತ್ತಿರುವ ಔಷಧೋಪಚಾರ ಕುರಿತು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾಹಿತಿ ನೀಡಿದರು.