ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ಗ್ರಾಮದ ನರಿಯಂದಡ ಅಯ್ಯಪ್ಪ ಯುವಕ ಸಂಘ ಸಹಕಾರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ 10ರಂದು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.ಅಂದು ಬೆಳಗ್ಗೆ 8.30ಕ್ಕೆ ಕಡಂಗ ಗಣಪತಿ ದೇವಸ್ಥಾನದ ಎದುರಿನಲ್ಲಿ ಮ್ಯಾರಥಾನ್ಗೆ ಚಾಲನೆ ನೀಡುವ ಮೂಲಕ ಉತ್ಸವ ಆರಂಭಗೊಳ್ಳಲಿದೆ. ಪೂರ್ವಾಹ್ನ 9.30ಕ್ಕೆ ಧ್ವಜಾರೋಹಣ ಮತ್ತು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ನರಿಯಂದಡ ಗ್ರಾ.ಪಂ.ಅಧ್ಯಕ್ಷ ಪೆಮ್ಮಂಡ ಕೌಶಿ ಕಾವೇರಮ್ಮ, ನೌಕಾದಳದ ನಿವೃತ್ತ ಸೇನಾನಿ ಪುದಿಯಮನೆ ಕೃಷ್ಣ, ಯವಕಪಾಡಿ ನಿವೃತ್ತ ಶಿಕ್ಷಕ ಮಂಞಂಡ್ರ ರೇಖಾ ಉಲ್ಲಾಸ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಳಗ್ಗೆ 10 ಗಂಟೆಗೆ ವಿವಿಧ ಕ್ರೀಡಾಕೂಟ ಮತ್ತು ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ 1.30 ಕ್ಕೆ ಚೆಯ್ಯಂಡಾಣೆ ಮುಖ್ಯರಸ್ತೆಯಿಂದ ಶಾಲೆವರೆಗೆ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಆಕರ್ಷಕ ಹುಲಿವೇಷ ಕುಣಿತ ಸೇರಿದಂತೆ ವಿವಿಧ ಕಲಾಪ್ರಕಾರಗಳ ಪ್ರದರ್ಶನ ಜರುಗಲಿದೆ ಎಂದು ನುಡಿದರು.ಮಧ್ಯಾಹ್ನ 2 ಗಂಟೆಗೆ ವಿಶೇಷ ಆಕರ್ಷಣೆಯ ಗಂಡಸರ ಹಗ್ಗಜಗ್ಗಾಟದ ಅಂತಿಮ ಪಂದ್ಯಾಟ ನಡೆಯಲಿದೆ. ನಂತರ ನಡೆಯುವ ಸಮಾರೋಪ ಸಮಾರಂಭದಲ್ಲಿ ಅರೆಭಾಷೆ ಕುರಿತು ಉಪನ್ಯಾಸ, ಹಿರಿಯ ಸಾಧಕರಿಗೆ ಸನ್ಮಾನ, ಬಹುಮಾನಗಳ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಸಮಾರೋಪ ಸಮಾರಂಭ:ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಶಾಸಕ ಎ.ಎಸ್.ಪೊನ್ನಣ್ಣ ಸಾಧಕರನ್ನು ಸನ್ಮಾನಿಸಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಡಾ.ಮಂತರ್ ಗೌಡ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಬಹುಮಾನ ವಿತರಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೊಟ್ಟಕೇರಿಯನ ದಯಾನಂದ ಸಮಾರೋಪ ಕುರಿತು ಭಾಷಣ ಮಾಡಲಿದ್ದಾರೆ. ಪಾರಣೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ಕುಶಾಲಪ್ಪ, ಚೆಯ್ಯಂಡಾಣೆ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಹರಿಪ್ರಸಾದ್ ಬೆಳಿಯಂಡ್ರ, ಮೈಸೂರು ಗೌಡ ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಚೆಯ್ಯಂಡಾಣೆ ಸ.ಹಿ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಪ್ರೇಮಕುಮಾರಿ, ಕೆದಮುಳ್ಳೂರು ಗ್ರಾ.ಪಂ.ಮಾಜಿ ಸದಸ್ಯ ಗೌಡುಧಾರೆ ಚೋಟು ಬಿದ್ದಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.ಚೆಯ್ಯಂಡಾಣೆಯಲ್ಲಿ ನಡೆಯುತ್ತಿರುವ ಗಡಿನಾಡ ಉತ್ಸವ ಎರಡನೆಯ ಕಾರ್ಯಕ್ರಮವಾಗಿದ್ದು, ಮೊದಲ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶ ಬಂದಡ್ಕ ಗ್ರಾಮದಲ್ಲಿ ಅ.27 ರಂದು ಬಹಳ ಅದ್ಧೂರಿಯಾಗಿ ಮತ್ತು ಯಶಸ್ವಿಯಾಗಿ ನಡೆದಿದೆ ಎಂದರು.
ಮೂರನೇ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶ ಮಂಡೆಕೋಲು ಗ್ರಾಮದಲ್ಲಿ ಡಿ.1 ರಂದು ನಡೆಯಲಿದೆ. ಉಳಿದಂತೆ ಕೊಡಗಿನ ಭಾಗಮಂಡಲ ಹಾಗೂ ಕುಶಾಲನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ನಡೆಯಲಿವೆ ಎಂದರು.ಚೆಯ್ಯಂಡಾಣೆ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಹರಿಪ್ರಸಾದ್ ಬೆಳಿಯಂಡ್ರ ಮಾತನಾಡಿ, ಉತ್ಸವದಲ್ಲಿ ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದರು.
ಗುಡ್ಡಗಾಡು ಓಟ, 5 ವರ್ಷದೊಳಗಿನ ಮಕ್ಕಳಿಗೆ ಕಾಳು ಹೆಕ್ಕುವುದು, 5 ರಿಂದ 10 ವರ್ಷದೊಳಗಿನ ಮಕ್ಕಳಿಗೆ 50 ಮೀಟರ್ ಓಟ, 10 ರಿಂದ 15 ವರ್ಷದೊಳಗಿನ ಮಕ್ಕಳಿಗೆ 100 ಮೀಟರ್ ಓಟ, ಪುರುಷರಿಗೆ ಬಾರದ ಗುಂಡು ಎಸೆತ, 60 ವರ್ಷ ಮೇಲ್ಪಟ್ಟವರಿಗೆ 75 ಮೀಟರ್ ಓಟ, 15 ರಿಂದ 20 ವರ್ಷದೊಳಗಿನ ಯುವಕರಿಗೆ 200 ಮೀಟರ್ ಓಟ, 20 ಮೇಲ್ಪಟ್ಟ ಮಹಿಳೆಯರಿಗೆ ಪಾಸಿಂಗ್ ದ ಬಾಲ್, ಬಾಂಬ್ ಇನ್ದ ಸಿಟಿ ಆಟ ನಡೆಯಲಿವೆ.ಹಗ್ಗ ಜಗ್ಗಾಟ, ಊರಿನವರಿಗೆ ಸೋಬಾನೆ ಹೇಳುವ ಸ್ಪರ್ಧೆ ನಡೆಯಲಿದೆ. ಈ ಆಟೋಟಗಳಲ್ಲಿ ಕೆದಮುಳ್ಳೂರು, ಕೊಡಂಜಗೇರಿ, ನರಿಯಂದಡ, ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಭಾಷಿಕರು ವಿವಿಧ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.
ನರಿಯಂದಡ ಅಯ್ಯಪ್ಪ ಯುವಕ ಸಂಘದ ಗೌರವ ಅಧ್ಯಕ್ಷ ತೋಟಂಬೈಲು ಅನಂತಕುಮಾರ್, ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ವಿನೋದ್ ಮೂಡಗದ್ದೆ ಸುದ್ದಿಗೋಷ್ಠಿಯಲ್ಲಿ ಇದ್ದರು.