ಸಾರಾಂಶ
ಬೆಂಗಳೂರು : ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸೋಮವಾರ ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿ, ರಾಜ್ಯ ಸರ್ಕಾರ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯ ಪರವಾಗಿದೆ. ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಗೊಳಿಸಿದ್ದು, ಕನ್ನಡದಲ್ಲೇ ಆಡಳಿತ ನಡೆಸುತ್ತಿದೆ. ಅದೇ ರೀತಿ ಕನ್ನಡಪರ ಹೋರಾಟದ ವೇಳೆ ದಾಖಲಾದ ಕೇಸುಗಳನ್ನು ನಮ್ಮ ಸರ್ಕಾರ ವಾಪಸ್ ಪಡೆಯಲಿದೆ ಎಂದು ಭರವಸೆ ನೀಡಿದರು.
ಕನ್ನಡಪರ ಸಂಘಟನೆಗಳು, ಹೋರಾಟಗಾರರು ಕೇಸು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮೊದಲು ಅರ್ಜಿ ಸಲ್ಲಿಸಬೇಕು. ಈ ಅರ್ಜಿಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಉಪಸಮಿತಿ ಮುಂದೆ ಇಟ್ಟು ಚರ್ಚಿಸಿ ತೀರ್ಮಾನ ಕೈಗೊಂಡು ಕೇಸುಗಳನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳಿದರು.
ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿ, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರು, ನಮ್ಮ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು ಅತೀವ ಸಂತಸವಾಗಿದೆ. ಹೋರಾಟಗಾರರು ಕೂಡಲೇ ಸರ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀರ್ಮಾನ ಅಭಿನಂದನೀಯ. ಕನ್ನಡ ಹೋರಾಟಗಾರರಿಗೆ ಶಕ್ತಿ ತುಂಬುವಂತಹ ಇನ್ನಷ್ಟು ತೀರ್ಮಾನಗಳನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಬೇಕು ಎಂದರು.