ಸಾರಾಂಶ
ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಅವರು ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕವಾಗಿದ್ದು ಇದನ್ನು ಸಂಪೂರ್ಣ ಹೋಗಲಾಡಿಸಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಹೇಳಿದರು.ತಾಲೂಕಿನ ಹರವೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಸರೆ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳು ದೇಶದ ಸಂಪತ್ತಾಗಿದ್ದು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಬೆಳೆಯಬೇಕು. ಪ್ರಬುದ್ಧರಾಗದ ಮಕ್ಕಳ ದೈಹಿಕ ದುಡಿಮೆಯಿಂದ ಅವರ ಜೀವನದ ಮೇಲೂ ತೀವ್ರತರ ಪರಿಣಾಮ ಬೀರಲಿದೆ. ಈ ಹಿನ್ನಲೆಯಲ್ಲಿ ಮಕ್ಕಳನ್ನು 18ನೇ ವಯಸ್ಸಿನವರೆಗೆ ಯಾವುದೇ ದುಡಿಮೆಗೆ ದೂಡದೆ ಶಿಕ್ಷಣ ಕೊಡಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು.
ಬಾಲಕಾರ್ಮಿಕರನ್ನು ದುಡಿಸಿಕೊಳ್ಳಲು ನೇಮಕ ಮಾಡಿಕೊಳ್ಳುವುದು ಅಪರಾಧವಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಕರಣಗಳು ಕಡಿಮೆಯಾಗಿದ್ದರೂ ಸಹ ಅಲ್ಲಲ್ಲಿ ಕಂಡುಬರುತ್ತಿವೆ. ಇಂತಹ ಪ್ರಕರಣಗಳು ಕಂಡು ಬಂದರೆ ದೂರು ನೀಡಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಎಂ.ಮಹೇಶ್ ಮಾತಾನಾಡಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಜಿಲ್ಲಾದ್ಯಂತ ಜಾಗೃತಿ ಕಾರ್ಯಕ್ರಮ ವ್ಯಾಪಕವಾಗಿ ಆಯೋಜಿಸಲಾಗುತ್ತಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು. ಆಸರೆ ಟ್ರಸ್ಟ್ ಕಾರ್ಯದರ್ಶಿ ಟಿ.ಜೆ.ಸುರೇಶ್ ಮಾತನಾಡಿ, ಮಕ್ಕಳನ್ನು ಬಾಲ ಕಾರ್ಮಿಕ ಪದ್ಧತಿಗೆ ದೂಡುತ್ತಿರುವ ಮಾಹಿತಿ ತಿಳಿದ ಕೂಡಲೇ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆ ಗಮನಕ್ಕೆ ತಂದು ಮಕ್ಕಳನ್ನು ಮುಕ್ತಗೊಳಿಸಿ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.ಶಾಲೆಯ ಪ್ರಭಾರ ಪ್ರಾಂಶುಪಾಲರಾದ ಎಸ್. ದೀಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಹಿರಿಯ ಕಾರ್ಮಿಕ ನಿರೀಕ್ಷಕ ವಿ.ಎಲ್.ಪ್ರಸಾದ್, ವಕೀಲರಾದ ಮಲ್ಲು, ಶಿಕ್ಷಕರಾದ ಕೆ.ಎನ್. ರಾಜೇಶ್, ಹರೀಶ್ ಕುಮಾರ್ ವಿ, ನಾಮದೇವಗುರುವ, ಸಿ.ಎಂ.ಮಹದೇವಸ್ವಾಮಿ, ಎಂ.ಜ್ಯೋತಿ, ಟಿ. ಶಶಿಕುಮಾರ್, ಎಸ್.ಅಂಬಿಕಾ, ಮಹೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.