ಸಾರಾಂಶ
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಡು ಬಡವರು, ನಿರ್ಗತಿಕರು, ಅಲೆಮಾರಿಗಳು, ಕೂಲಿ ಕಾರ್ಮಿಕರು ಹಾಗೂ ಕೃಷಿ ಕುಟುಂಬದ ಹಿನ್ನಲೆಯಿಂದ ಬಂದ ಪೋಷಕರು ತಮ್ಮ ಮಕ್ಕಳ ಮುಂದಿನ ಜೀವನ ಸಮೃದ್ಧ ವಾಗಿರಬೇಕಾದರೆ ಸರಿಯಾದ ವಯಸ್ಸಿನಲ್ಲಿ ಮಕ್ಕಳಿಗೆ ಸೂಕ್ತ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಬೇಕು.
ಕನ್ನಡಪ್ರಭ ವಾರ್ತೆ ಗುಡಿಬಂಡೆ
ಬಾಲ ಕಾರ್ಮಿಕ ಪದ್ಧತಿ ಮತ್ತು ಜೀತ ಪದ್ಧತಿ ನಿರ್ಮೂಲನೆಗೆ ಪೋಷಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕೆಲಸ ಮಾಡಿದರೆ ಸಂಪೂರ್ಣವಾಗಿ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬಹುದು ಎಂದು ಜೆಎಂಎಫ್ ಸಿ ನ್ಯಾಯಾಧೀಶರಾದ ಸವಿತಾ ರುದ್ರಗೌಡ ಚಿಕ್ಕನಗೌಡರ್ ಅಭಿಪ್ರಾಯ ಪಟ್ಟರು.ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಸೂಕ್ತ ಶಿಕ್ಷಣ ನೀಡಿಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಡು ಬಡವರು, ನಿರ್ಗತಿಕರು, ಅಲೆಮಾರಿಗಳು, ಕೂಲಿ ಕಾರ್ಮಿಕರು ಹಾಗೂ ಕೃಷಿ ಕುಟುಂಬದ ಹಿನ್ನಲೆಯಿಂದ ಬಂದ ಪೋಷಕರು ತಮ್ಮ ಮಕ್ಕಳ ಮುಂದಿನ ಜೀವನ ಸಮೃದ್ಧ ವಾಗಿರಬೇಕಾದರೆ ಸರಿಯಾದ ವಯಸ್ಸಿನಲ್ಲಿ ಮಕ್ಕಳಿಗೆ ಸೂಕ್ತ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಬೇಕೆಂದು ಕರೆ ನೀಡಿದರು.
ನಂತರ ತಾಪಂ ಇಒ ನಾಗಮಣಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ನಿಮ್ಮ ನೆರೆ ಹೊರೆಯ ವಾಸಸ್ಥಳಗಳಲ್ಲಿ ಅಪ್ರಾಪ್ತ ಹೆಣ್ಣುಮಕ್ಕಳ ಜತೆ ಅಸಭ್ಯವಾಗಿ ನಡೆದುಕೊಳ್ಳುವುದು, ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಪೊಲೀಸರಿಗೆ ಅಥವಾ ಸಹಾಯವಾಣಿ 112 ಗೆ ಕರೆ ಮಾಡುವಂತೆ ಸಲಹೆ ನೀಡಿದರು.ನಂತರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಕೀಲರ ಎಸ್.ವಿ. ನಂದೀಶ್ವರ ರೆಡ್ಡಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಹಾಗೂ ದುಡಿಮೆಗೆ ಬಳಸಿಕೊಳ್ಳುವುದು ಅಪರಾಧ. ಅಂತಹವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸಮಾರಂಭದಲ್ಲಿ ವಕೀಲರ ಎಸ್.ವಿ. ನಂದೀಶ್ವರ ರೆಡ್ಡಿ, ಬಿಇಒ ಕೃಷ್ಣ ಕುಮಾರಿ, ವಕೀಲರ ಸಂಘದ ಅಧ್ಯಕ್ಷ ಟಿ.ಸಿ.ಅಶ್ವತ್ಥರೆಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕ ವಿ ರಾಮಮೂರ್ತಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕುರಿತು ಮಾತನಾಡಿದರು.