ಬಾಲ್ಯ ವಿವಾಹ ನಾಗರೀಕ ಸಮಾಜಕ್ಕೆ ಅಂಟಿರುವ ಶಾಪ: ನ್ಯಾಯಾಧೀಶ ಆನಂದ್

| Published : Aug 14 2025, 01:00 AM IST

ಬಾಲ್ಯ ವಿವಾಹ ನಾಗರೀಕ ಸಮಾಜಕ್ಕೆ ಅಂಟಿರುವ ಶಾಪ: ನ್ಯಾಯಾಧೀಶ ಆನಂದ್
Share this Article
  • FB
  • TW
  • Linkdin
  • Email

ಸಾರಾಂಶ

ಅಪ್ರಾಪ್ತ ಹೆಣ್ಣು ಮಕ್ಕಳನ್ನು ವಿವಾಹದ ಬಂಧನಕ್ಕೆ ಸಿಲುಕಿಸಿ ತೊಂದರೆ ನೀಡುವುದು ಸರಿಯಲ್ಲ. ಹೆಣ್ಣಿಗೆ 18 ವರ್ಷ, ಗಂಡಿ 21 ಆಗದಿದ್ದರೂೂ ಬಾಲ್ಯ ವಿವಾಹ ನಡೆಸುವುದು ಶಿಕ್ಷಾರ್ಹ ಅಪರಾಧ. ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ಮಾಡಲು ಜನರು ಸಹಕಾರ ನೀಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಬಾಲ್ಯ ವಿವಾಹ ಸಾಮಾಜಿಕ ಅನಿಷ್ಟ ಪದ್ಧತಿ. ನಾಗರೀಕ ಸಮಾಜಕ್ಕೆ ಅಂಟಿರುವ ಶಾಪ. ಸಾಮಾಜಿಕ ಜಾಗೃತಿಯಿಂದ ಬಾಲ್ಯ ವಿವಾಹ ಪದ್ಧತಿ ನಾಶ ಸಾಧ್ಯ ಎಂದು ಜಿಲ್ಲಾ ಪ್ರಧಾನ ಸೆಷನ್ಸ್‌ ನ್ಯಾಯಾಧೀಶ ಆನಂದ್ ಹೇಳಿದರು.

ಪಟ್ಟಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸರ್ಕಾರಿ ಪಾಲಿಟೆಕ್ನಿಕ್‌ನ ಸಹಯೋಗದಲ್ಲಿ ಆಯೋಜಿಸಿದ್ದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣ ಜಾಗೃತಿ ಅಭಿಯಾನ ಜಾಥಾ ಮತ್ತು ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಪ್ರಾಪ್ತ ಹೆಣ್ಣು ಮಕ್ಕಳನ್ನು ವಿವಾಹದ ಬಂಧನಕ್ಕೆ ಸಿಲುಕಿಸಿ ತೊಂದರೆ ನೀಡುವುದು ಸರಿಯಲ್ಲ. ಹೆಣ್ಣಿಗೆ 18 ವರ್ಷ, ಗಂಡಿ 21 ಆಗದಿದ್ದರೂೂ ಬಾಲ್ಯ ವಿವಾಹ ನಡೆಸುವುದು ಶಿಕ್ಷಾರ್ಹ ಅಪರಾಧ. ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ಮಾಡಲು ಜನರು ಸಹಕಾರ ನೀಡಬೇಕು ಎಂದರು.

ಹೆಣ್ಣು ಮಗಳು ಮಾನಸಿಕವಾಗಿ ಇನ್ನೂ ಪ್ರಬುದ್ಧಗೊಳ್ಳದೇ ಆಕೆ ದೇಹ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಹೀಗಾಗಿ ನಾವೆಲ್ಲರೂ ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಮಾಡಲು ಪಣತೊಡೋಣ ಎಂದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಮಿಕ್ಕೆರೆ ವೆಂಕಟೇಶ್ ಮಾತನಾಡಿ, ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ಬಾಲ್ಯ ವಿವಾಹದಂತ ಪ್ರಕರಣಗಳು ಹೆಚ್ಚಾಗಿವೆ. ಮಕ್ಕಳ ಸಹಾಯವಾಣಿ ಘಟಕಕ್ಕೆ ನೂರಕ್ಕೂ ಹೆಚ್ಚು ದೂರುಗಳು ಬಂದಿವೆ. ನಾಗರೀಕ ಸಮಾಜದಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರುವಾಗಿ ಕಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನಾಗರಿಕ ಸಮಾಜದಲ್ಲಿ ಹಿಂದೂ ಹೆಣ್ಣು ಗಂಡಿನ ಜನನ ಪ್ರಮಾಣದ ಅನುಪಾತದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಸಮಾಜದಲ್ಲಿ ಏರುಪೇರು ಉಂಟಾಗಲಿದೆ. 18 ವರ್ಷದೊಳಗಿನ ಅಪ್ರಾಪ್ತ ಹೆಣ್ಣು ಮಕ್ಕಳನ್ನು ವಿವಾಹ ಬಂಧನದೊಳಗೆ ಸಿಲುಕಿಸಿ ಮುಗ್ಧ ಮನಸ್ಸಿನ ಹೆಣ್ಣು ಮಕ್ಕಳನ್ನು ವಿವಾಹ ಮಾಡಿ ಮಾನಸಿಕ ಹಾಗೂ ದೈಹಿಕವಾಗಿ ತೊಂದರೆ ನೀಡಿದರೆ ಕಾನೂನು ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮದುವೆ ಮಾಡಲು ನಿಶ್ಚಯಿಸಿ ನಿಶ್ಚಿತಾರ್ಥ ಹಾಗೂ ಮದುವೆ ಮಾಡುವುದು ಪ್ರಕರಣಗಳು ಕಂಡು ಬಂದರೆ ಕೂಡಲೇ ಮಕ್ಕಳ ಹಕ್ಕುಗಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಟ್ಟಣದ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಸುಧೀರ್, ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಚ್.ಆರ್. ದೇವರಾಜು, ಕೆ.ವಿ.ಅರ್ಪಿತ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್.ರಶ್ಮಿ, ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ತಾಪಂ ಇಒ ಕೆ.ಸುಷ್ಮ, ಪುರಸಭೆ ಮುಖ್ಯ ಅಧಿಕಾರಿ ನಟರಾಜು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿದ್ಯಾವತಿ, ಆರಕ್ಷಕ ನಿರೀಕ್ಷಕರಾದ ಸುಮಾರಾಣಿ, ಆನಂದೇಗೌಡ, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನಾಗರಾಜು ಮತ್ತಿತರರು ಭಾಗವಹಿಸಿದ್ದರು.

ಪಟ್ಟಣದ ತಾಲೂಕು ಆಡಳಿತ ಕಾರ್ಯ ಸೌಧದ ಆವರಣದಿಂದ ಆರಂಭವಾದ ಬಾಲ್ಯ ವಿವಾಹ ಮುಕ್ತ ಜಾಗೃತಿ ಜಾಥಾ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಸಾಗಿ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಮುಕ್ತಾಯಗೊಂಡಿತು. ಇದೇ ಸಂದರ್ಭದಲ್ಲಿ ದುಶ್ಚಟ ಮುಕ್ತ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣ ಮಾಡುತ್ತೇವೆ ಎಂದು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.