ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು, ವಸತಿ ಶಾಲೆಗಳಲ್ಲಿ ಪ್ರತಿನಿತ್ಯ ಬೆಳಗಿನ ಪ್ರಾರ್ಥನೆಯ ಸಮಯದ ನಂತರ ವಿದ್ಯಾರ್ಥಿಗಳಿಗೆ ಹತ್ತು ನಿಮಿಷ ಕಡ್ಡಾಯವಾಗಿ ಕನ್ನಡ ದಿನ ಪತ್ರಿಕೆ ಓದಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು, ವಸತಿ ಶಾಲೆಗಳಲ್ಲಿ ಪ್ರತಿನಿತ್ಯ ಬೆಳಗಿನ ಪ್ರಾರ್ಥನೆಯ ಸಮಯದ ನಂತರ ವಿದ್ಯಾರ್ಥಿಗಳಿಗೆ ಹತ್ತು ನಿಮಿಷ ಕಡ್ಡಾಯವಾಗಿ ಕನ್ನಡ ದಿನ ಪತ್ರಿಕೆ ಓದಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಮಕ್ಕಳಿಗೆ ದಿನಪತ್ರಿಕೆ ಓದಿಸುವ ಹವ್ಯಾಸ ರೂಢಿಸಲು ಕೋರಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೊಸುಂಬೆ ಅವರು ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಇಂಟರ್‌ನೆಟ್ ಶಿಕ್ಷಣ, ಮನೋರಂಜನೆ ಮತ್ತು ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಿನ ಸಮಯಾವಕಾಶ ನೀಡುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಕೊರತೆ, ಶ್ರವಣದೋಷ ಮತ್ತು ದೈಹಿಕ ಚಟುವಟಿಕೆಗಳಲ್ಲಿ ಆಸಕ್ತಿ ಇಲ್ಲದೇ ಇರುವಂತಹ ಲಕ್ಷಣಗಳು ಕಂಡು ಬರುತ್ತಿವೆ ಎಂದು ಪತ್ರದಲ್ಲಿ ತಿಳಿಸಿದ್ದರು.

10ರಿಂದ 15 ನಿಮಿಷ ಓದಿಸಬೇಕು:

ಆದ್ದರಿಂದ, ಮಕ್ಕಳು ಶಾಲೆಗಳಲ್ಲಿ ದಿನ ನಿತ್ಯ ಕನಿಷ್ಠ 10 ರಿಂದ 15 ನಿಮಿಷ ದಿನಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಸಿದ್ಧತೆ, ಪ್ರಚಲಿತ ವಿದ್ಯಮಾನಗಳ ಸಾಮಾನ್ಯ ಜ್ಞಾನವೃದ್ಧಿಸಿಕೊಳ್ಳಲು ಮತ್ತು ಶಬ್ದಕೋಶ, ಭಾಷಾ ಶೈಲಿ ಮತ್ತು ಬರವಣಿಗೆ ಕೌಶಲ್ಯಗಳನ್ನು ಸುಧಾರಿಸಲು ಸಹಕಾರಿ ಆಗುತ್ತದೆ ಎಂದು ಶಿಕ್ಷಣ ಇಲಾಖೆಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದರು.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮತ್ತು ಸರ್ಕಾರದ ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ವಸತಿ ಶಾಲೆ, ನಿಲಯಗಳು/ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪ್ರತಿ ನಿತ್ಯವೂ ಬೆಳಗಿನ ಪ್ರಾರ್ಥನೆ ಸಮಯದ ನಂತರ ಮಕ್ಕಳಿಂದ 10 ನಿಮಿಷಗಳ ಕಾಲ ಕಡ್ಡಾಯವಾಗಿ ಕನ್ನಡ ದಿನಪತ್ರಿಕೆ ಓದುವ ಅಭ್ಯಾಸ ಅನುಷ್ಠಾನಗೊಳಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.