ಮಕ್ಕಳ ಗ್ರಾಮಸಭೆ: ರಾಜ್ಯ, ರಾಷ್ಟ್ರ ಮಟ್ಟದ ಸಾಧಕರಿಗೆ ಗೌರವ

| Published : Feb 11 2024, 01:46 AM IST / Updated: Feb 11 2024, 01:47 AM IST

ಮಕ್ಕಳ ಗ್ರಾಮಸಭೆ: ರಾಜ್ಯ, ರಾಷ್ಟ್ರ ಮಟ್ಟದ ಸಾಧಕರಿಗೆ ಗೌರವ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ಗ್ರಾಮಸಭೆ: ಸಾಧಕರಿಗೆ ಗೌರವ

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮಕ್ಕಳ ಗ್ರಾಮಸಭೆಯಲ್ಲಿ ಶಿಕ್ಷಕರ ರಾಜ್ಯ ಪ್ರಶಸ್ತಿ ವಿಜೇತರು ಹಾಗೂ ಯುವ ವಿಜ್ಞಾನಿಯಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು.

ಶಾಂತಿನಿಕೇತನ ಶಾಲೆಯ ಆವರಣದಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಗೌರವ ಸಮರ್ಪಣೆ ನಡೆಯಿತು. ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾದ್ಯಾಯನಿ ಮೇರಿಫಾತೀಮಾ ಅವರು ರಾಜ್ಯ ಮಟ್ಟದ ಉತ್ತಮ ಮುಖ್ಯೋಪಾದ್ಯಾಯನಿ ಪ್ರಶಸ್ತಿಗೆ ಭಾಜನರಾಗಿದ್ದು, ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 8ನೇ ತರಗತಿಯ ಬಾಲವಿಜ್ಞಾನಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ‘ಬಾಲವಿಜ್ಞಾನ’ ಸಮಾವೇಶದಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿರುವ ಎ.ಎಸ್.ಶ್ರೀಶಾ ಅವರಿಗೆ ಶಾಲು ಹೊದಿಸಿ, ಫಲತಾಂಬೂಲ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರತ ಬೆಳ್ಳಿಯಪ್ಪ ಹಾಗೂ ಅಭಿವೃದ್ಧಿ ಅಧಿಕಾರಿ ರವೀಶ್, ಗ್ರಾ.ಪಂ.ಸದಸ್ಯರಾದ ನೀತ, ಕವಿತಾ, ಕಲಾಮಣಿ, ಚೆನ್ನಬಸವಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನವೀನ್, ಸುಂಟಿಕೊಪ್ಪ ಪೊಲೀಸ್ ಠಾಣೆಯ ಎ.ಎಸ್.ಐ. ಸೈಮನ್ ಡಿಕುನ್ನ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದಮಯಂತಿ ಇದ್ದರು.

ಬೇಡಿಕೆಗಳ ಸರಮಾಲೆ

ಅನುದಾನಿತ ಶಾಲೆಗಳಲ್ಲಿ ನರೇಗಾ ಅಡಿಯಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಅವಕಾಶವಿಲ್ಲ, ಸರ್ಕಾರಿ ಪ್ರಾಥಮಿಕ ಶಾಲೆಗೆ ಪ್ರತ್ಯೇಕ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಮಕ್ಕಳಿಂದ ಬೇಡಿಕೆ, ಕೊಡಗರಹಳ್ಳಿ ಜಂಕ್ಷನ್‌ನಲ್ಲಿ ಅಡ್ಡಾದಿಡ್ಡಿ ವಾಹಗಳ ನಿಲುಗಡೆ ತಪ್ಪಿಸಲು ಬೇಡಿಕೆ ಮೊದಲಾದವು ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 2023-24ನೇ ಸಾಲಿನ ಮಕ್ಕಳ ಗ್ರಾಮಸಭೆಯಲ್ಲಿ ಕೇಳಿ ಬಂದ ಪ್ರಮುಖ ಅಂಶಗಳು.ಗ್ರಾ.ಪಂ. ಅಧ್ಯಕ್ಷೆ ನಿರತ ಬೆಳ್ಳಿಯಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಸುಂಟಿಕೊಪ್ಪ ನಾಡು ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿ ಮಾತನಾಡಿ, ತಮ್ಮ ಶಾಲೆಗೆ ಶೌಚಾಲಯದ ಅಗತ್ಯತೆ ಇದ್ದು, ತುರ್ತಾಗಿ ಶೌಚಾಲಯ ನಿರ್ಮಾಣ ಮಾಡಿಕೊಡುವಂತೆ ಕೇಳಿದರು.ಗ್ರಾ.ಪಂ. ಪಿಡಿಒ ರವೀಶ್ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಅವಕಾಶವಿದೆ. ಆದರೆ ಅನುದಾನಿತ ಶಾಲೆಗಳಲ್ಲಿ ನಿರ್ಮಾಣಕ್ಕೆ ಅವಕಾಶವಿಲ್ಲ. ಈ ಬಗ್ಗೆ ತುರ್ತಾಗಿ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥ ಪಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.ಕೊಡಗರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಾತನಾಡಿ, ನಮ್ಮ ಶಾಲೆಯಲ್ಲಿ ಸೂಕ್ತ ನೀರಿನ ಟ್ಯಾಂಕ್ ವ್ಯವಸ್ಥೆ ಇರುವುದಿಲ್ಲ. ಈ ಬಗ್ಗೆ ಗ್ರಾ.ಪಂ. ವತಿಯಿಂದ ಕ್ರಮವಹಿಸುವಂತೆ ತಿಳಿಸಿದರು.ಗ್ರಾ.ಪಂ. ಅಧ್ಯಕ್ಷೆ ನಿರತ ಬೆಳ್ಳಿಯಪ್ಪ ಮಾತನಾಡಿ, ಮುಂದಿನ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.