ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಉನ್ನತ ಸ್ಥಾನ ಅಲಂಕರಿಸುವ ಗುರಿಯೊಂದಿಗೆ ನಿರಂತರ ಅಭ್ಯಾಸ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರಕುತ್ತಿದೆ. ಇಲ್ಲಿ ವ್ಯಾಸಂಗ ಮಾಡಿದ ಹಲವರು ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ವಿದ್ಯಾರ್ಥಿ ದಿಸೆಯಲ್ಲಿ ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡುವತ್ತ ಮಕ್ಕಳು ಗಮನ ಹರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ಕಿವಿಮಾತು ಹೇಳಿದರು.

ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀಹಳ್ಳಿಕೇಶ್ವರ ಮತ್ತು ಶ್ರೀಬೋರೇಶ್ವರ ಟೆಂಪಲ್ ಟ್ರಸ್ಟ್ ವತಿಯಿಂದ ನಡೆದ ಶಾಲಾ ವಾರ್ಷಿಕೋತ್ಸವ, ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪ್ರಸಕ್ತ ಸಾಲಿನ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ಶಾಲೆ ಹಳೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಉನ್ನತ ಸ್ಥಾನ ಅಲಂಕರಿಸುವ ಗುರಿಯೊಂದಿಗೆ ನಿರಂತರ ಅಭ್ಯಾಸ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರಕುತ್ತಿದೆ. ಇಲ್ಲಿ ವ್ಯಾಸಂಗ ಮಾಡಿದ ಹಲವರು ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಅಂತಹವರನ್ನು ಮಾದರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳು ಗುರಿ ಸಾಧನೆಗೆ ಮುಂದಾಗಬೇಕು ಎಂದರು.

ಶ್ರೀಹಳ್ಳಿಕೇಶ್ವರ ಮತ್ತು ಶ್ರೀಬೋರೇಶ್ವರ ಟೆಂಪಲ್ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಶಿವಲಿಂಗಯ್ಯ ಮಾತನಾಡಿ, ಟ್ರಸ್ಟ್ ವತಿಯಿಂದ ಪ್ರತಿವರ್ಷ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ ಎಂದರು.

ಇದೇ ವೇಳೆ ನಾನು ವಿಜ್ಞಾನಿ ಕಾರ್ಯಕ್ರಮದಲ್ಲಿ ವಿಶ್ವ ದಾಖಲೆ ನಿರ್ಮಿಸಿರುವ ವಿದ್ಯಾರ್ಥಿನಿಯರಾದ ಸಿ.ಎಸ್.ವಿನುತ ಹಾಗೂ ಸಿ.ಜೆ.ಹರ್ಷಿತ, ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಸ್.ಪರೀಣ್, ಕೆ.ಆರ್.ಧನುಷ್, ಕೆ.ಆರ್.ಬಸಂತ್‌ ಗೌಡ, ವಿಭವ್ ಆರ್.ಗೌಡ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಳೆಯ ವಿದ್ಯಾರ್ಥಿ ಧನುಷ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಎಂ.ಎಲ್.ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಮುಖ್ಯ ಶಿಕ್ಷಕ ಎಚ್.ಎನ್.ದೇವರಾಜು, ವಿನಯ್‌ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್ ಮತ್ತಿತರರು ಭಾಗವಹಿಸಿದ್ದರು.