ಸಾರಾಂಶ
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಆನಂದದಿಂದ ಕಳೆಯಬೇಕು. ಹಾಗೆಯೇ ಅವರು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.
ನಗರದ ಮಲೆನಾಡು ವಿದ್ಯಾಸಂಸ್ಥೆಯ ಸುಂದರಮ್ಮ ಶಂಕರಮೂರ್ತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು, ಮಕ್ಕಳನ್ನು ದುಡಿಮೆಗೆ ಹಚ್ಚಿದಲ್ಲಿ ಅವರ ಬಾಲ್ಯವನ್ನು ಕಸಿದುಕೊಂಡಂತಾಗುತ್ತದೆ ಎಂದು ಹೇಳಿದರು.ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ಕಾಯ್ದೆ 1983ರಲ್ಲಿ ಜಾರಿಗೆ ಬಂದಿತು. ಅನಂತರ 2016 ರಲ್ಲಿ ಆ ಕಾಯ್ದೆ ತಿದ್ದುಪಡಿ ಬಳಿಕ 14 ರಿಂದ 18ರ ವಯೋಮಾನದವರನ್ನು ಬಾಲ ಕಾರ್ಮಿಕರೆಂದು ಪರಿಗಣಿಸಲಾಯಿತು. ಮಕ್ಕಳು ಅದರಲ್ಲೂ 5 ರಿಂದ 14 ವರ್ಷದ ಒಳಗಿನವರು ಕಡ್ಡಾಯವಾಗಿ ಶಿಕ್ಷಣಕ್ಕೆ ಒಳಪಡಬೇಕು. ಶಿಕ್ಷಣ ಅವರ ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದರು. ಹಲವಾರು ಕಾರಣಕ್ಕಾಗಿ ಮಕ್ಕಳನ್ನು ದುಡಿಮೆಗೆ ಹಚ್ಚುತ್ತಿರುವ ನಿದರ್ಶನ ಕಂಡು ಬಂದಿವೆ. ಮಕ್ಕಳನ್ನು ದುಡಿಸಿಕೊಳ್ಳುವ ಸಂದರ್ಭ ಅವರು ವಯಸ್ಕರಂತೆ ಕನಿಷ್ಠ ವೇತನ ಕಾಯ್ದೆ ಅನ್ವಯ ಬೇಡಿಕೆ ಮುಂದಿಡುವುದಿಲ್ಲ. ಅವರಿಂದ ಕಡಿಮೆ ವೇತನಕ್ಕೆ ಹೆಚ್ಚು ದುಡಿಸಿಕೊಳ್ಳಲು ಅವಕಾಶವಿದೆ. ಹಾಗೆಯೇ ಬೋನಸ್ ಹಾಗೂ ವಿಶ್ರಾಂತಿ ಬೇಡಿಕೆ ಸಹ ಅವರಿಂದ ಬರುವುದಿಲ್ಲ. ಬಡತನ, ನಿರುದ್ಯೋಗ, ಅನಕ್ಷರತೆ ಬಾಲಕಾರ್ಮಿಕ ಪದ್ಧತಿಗೆ ಕಾರಣವಾಗಿದೆ. ಅನೇಕ ಸಂದರ್ಭಗಳಲ್ಲಿ ಶಿಕ್ಷಣ ಕೊಡಿಸುವ ಸಾಮರ್ಥ್ಯವಿಲ್ಲದೆ, ಪಾಲಕರೇ ಮಕ್ಕಳನ್ನು ದುಡಿಮೆಗೆ ಹಚ್ಚಿರುವ ನಿದರ್ಶನಗಳಿವೆ. ಅವರ ದುಡಿಮೆಯಿಂದ ಕುಟುಂಬದ ಆರ್ಥಿಕ ಸ್ಥಿತಿಗೆ ಅನುಕೂಲವಾಗಬಹುದು ಎನ್ನುವುದೇ ಇದಕ್ಕೆ ಕಾರಣ ಎಂದರು. ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಣೆ ಮಾಡಿದ ಬಳಿಕ ಅಂಥ ವಿದ್ಯಾರ್ಥಿಗಳಿಗೆ ವಯಸ್ಸಿಗೆ ಅನುಗುಣವಾಗಿ ಶಾಲೆಗೆ ಸೇರಿಸುವ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಈ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ರಕ್ಷಿಸಿದ ನಾಲ್ವರು ವಿದ್ಯಾರ್ಥಿಗಳಿಗೆ ಎಸ್ಸಿಪಿ ಹಾಗೂ ಟಿಎಸ್ಪಿ ಮೊತ್ತದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ನೆರವು ಒದಗಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆ ಗಳು ಮಾತ್ರ ಜಾಗೃತಿ ಕೈಗೊಂಡರೆ ಸಾಲದು. ಸಾರ್ವಜನಿಕರು ಸಹ ಕೈಜೋಡಿಸಬೇಕು. ಸಾರ್ವಜನಿಕರು ಕೈಜೋಡಿಸದ ಹೊರತು ಯಾವ ಯೋಜನೆಗಳು ಕೂಡ ಫಲಪ್ರದವಾಗುವುದಿಲ್ಲ ಎಂದು ಹೇಳಿದರು. ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂಥವರಿಗೆ 6 ತಿಂಗಳಿಂದ 2 ವರ್ಷ ಜೈಲು ಹಾಗೂ 20 ರಿಂದ 50 ಸಾವಿರ ರು.ವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ತಂದೆ, ತಾಯಿ, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಜಿಪಂ. ಉಪ ಕಾರ್ಯದರ್ಶಿ ಶಂಕರ ಕೊರವರ ಮಾತನಾಡಿ, ಮಕ್ಕಳು ತಮ್ಮ ಬಾಲ್ಯದಲ್ಲಿ ಸುಗಮವಾಗಿ ಶಿಕ್ಷಣವನ್ನು ಪಡೆಯುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಬಾಲಕಾರ್ಮಿಕ ಪದ್ಧತಿ ತಡೆಯಲು ಪ್ರತಿಜ್ಞಾ ವಿಧಿ ಬೋಧಿಸಿದರು.ಚಿಕ್ಕಮಗಳೂರು ವಕೀಲರ ಸಂಘದ ಅಧ್ಯಕ್ಷ ಸುಜೇಂದ್ರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕೆ.ಆರ್.ಜಯಶೀಲಾ, ಡಿವೈಎಸ್ಪಿ ಶೈಲೇಂದ್ರ, ಸಮಾಜ ಕಲ್ಯಾಣ ಅಧಿಕಾರಿ ರೇವಣ್ಣ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ರಮೇಶ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಕಾರ್ಯಕ್ರಮದಲ್ಲಿದ್ದರು.
12 ಕೆಸಿಕೆಎಂ 2ಚಿಕ್ಕಮಗಳೂರಿನ ಮಲೆನಾಡು ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಗುರುವಾರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಉದ್ಘಾಟಿಸಿದರು.