ಸಾರಾಂಶ
ಕನ್ನಡಪ್ರಭ ವಾರ್ತೆ ದಾವಣಗೆರೆ
ಮಗುವು ಶಿಕ್ಷಣ ಕಲಿತು, ಉದ್ಯೋಗ ಪಡೆದರೆ ಮಾತ್ರ ಬಡತನ ನಿವಾರಣೆ ಸಾಧ್ಯ ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ ನೀಡಿದರು.ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಒಂಟಿಹಾಳ್ ಗ್ರಾಮದಲ್ಲಿ ಶನಿವಾರ ಶ್ರೀ ಆಂಜನೇಯಸ್ವಾಮಿ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸರೋಹಣ, ಗೋಪುರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ನಿಮ್ಮ ಮಕ್ಕಳಿಗೆ ಶಿಕ್ಷಣ ಕಲಿಸಲು ಆಗಲಿಲ್ಲ ಎಂದರೆ ವಾಲ್ಮೀಕಿ ಗುರುಪೀಠದಲ್ಲಿ ಶಾಲೆಗಳ ತೆರೆಯಲಾಗಿದೆ. ಮಕ್ಕಳನ್ನು ಗುರುಗಳ ಮಡಲಿಗೆ ಹಾಕಿ ಶಿಕ್ಷಣ ಕೊಡಿಸುವ ಕಾರ್ಯ ಮಾಡಬೇಕೆಂದು ಸಲಹೆ ನೀಡಿದರು.
ಸಮಾಜದ ಕಳಕಳಿ ಹೊಂದಿರುವ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಮೀಸಲಾತಿಯಿಂದ ವಂಚಿತರಾದ ಮಕ್ಕಳಿಗೆ ಮೀಸಲಾತಿ ಸಿಗಬೇಕೆಂದು ಬೆಂಗಳೂರಿಗೆ ಪಾದಯಾತ್ರೆ ಮಾಡಿ ಮಳೆ, ಚಳಿ, ಬಿಸಿಲು ಎನ್ನದೆ ಸುದೀರ್ಘ 258 ದಿನಗಳ ಕಾಲ ಧರಣಿ ಸತ್ಯಾಗ್ರಹ ಮಾಡಿ ಸರ್ಕಾರವನ್ನೇ ಅವರ ಬಳಿ ಕರೆಸಿಕೊಂಡು ಮೀಸಲಾತಿ ಪಡೆಯುವಲ್ಲಿ ಯಶಸ್ವಿಯಾದ ಶ್ರೀಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.ಮುಂದಿನ ದಿನಗಳಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ತರುವ ಮೂಲಕ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈಗಾಗಲೇ ಒಂಟಿಹಾಳ್, ಮಾಯಕೊಂಡ ಮತ್ತು ದಿಂಡದಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗುತ್ತಿದೆ. ಒಂಟಿಹಾಳ್ ಮತ್ತು ಹಿಟ್ಲಾಪುರಕ್ಕೆ ವಾಲ್ಮೀಕಿ ಭವನ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಸಾನ್ನಿಧ್ಯ ವಹಿಸಿ ಮಾತನಾಡಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಶ್ರೀರಾಮನ ಚರಿತ್ರೆಯನ್ನು ಇಡೀ ಜಗತ್ತಿಗೆ ಪರಿಚಯಿಸಿದವರು ಆದಿಕವಿ ಮಹರ್ಷಿ ವಾಲ್ಮೀಕಿಯವರು. ಅಂತಹ ವಾಲ್ಮೀಕಿ ಕುಲದಲ್ಲಿ ಹುಟ್ಟಿದ ನಾವು ಅವರಂತೆಯೇ ಆದರ್ಶ ಪುರುಷರಾಗಿ ಬಾಳಿ ಜಗತ್ತಿಗೆ ಬೆಳಕಾಗಬೇಕೆಂದರು.ಮನುಷ್ಯನ ದುರಾಸೆಯಿಂದ ಪರಿಸರ ನಾಶವಾಗಿ ಭೂಮಿಯ ತಾಪಮಾನ ಹೆಚ್ಚಾಗುತ್ತಿದೆ. ಇದರ ಪರಿಣಾಮ ಅತಿವೃಷ್ಟಿ ಮತ್ತು ಅನಾವೃಷ್ಟಿ ಆಗಿ ಮಳೆ, ಬೆಳೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಭಗವಂತನ ನಾಮಸ್ಮರಣೆ ಮಾಡುವ ಮೂಲಕ ಸಕಾಲಕ್ಕೆ ಮಳೆ, ಬೆಳೆ ಕೊಡುವಂತೆ ಪ್ರಾರ್ಥನೆ ಸಲ್ಲಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಹನುಮಂತಪ್ಪ ಐಗೂರು, ರುದ್ರಸ್ವಾಮಿ, ಒಂಟಿಹಾಳ್ ಶಿವಣ್ಣ, ಮಹಾರುದ್ರಣ್ಣ, ಗೌರಮ್ಮ ಸೇರಿ ಗ್ರಾಮಸ್ಥರಿದ್ದರು.