ಇತ್ತೀಚಿಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸರ್ಕಾರಿ ಉದ್ಯೋಗ ಬೇಕಾದರೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರಬೇಕು.

ಕನ್ನಡಪ್ರಭ ವಾರ್ತೆ ಮುಳಬಾಗಿಲುಸರ್ಕಾರಿ ವೇತನ ಪಡೆಯುವ ಪ್ರತಿಯೊಬ್ಬ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಸುತ್ತೋಲೆ ಹೊರಡಿಸಬೇಕು ಎಂದು ಸಮಾಜ ಸೇವಕ ಸಂಗೊಳ್ಳಿ ವೆಂಕಟೇಶ್ ಸರ್ಕಾರಕ್ಕೆ ಮನವಿ ಮಾಡಿದರು.ತಾಲೂಕಿನ ಗುಮ್ಮಲಾಪುರ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿ, ಇತ್ತೀಚಿಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸರ್ಕಾರಿ ಉದ್ಯೋಗ ಬೇಕಾದರೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರಬೇಕು. ಸರ್ಕಾರಿ ವೇತನ ಪಡೆಯುತ್ತಿರುವ ಎಲ್ಲಾ ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ರಾಜಕಾರಣಿಗಳ ಹಾಗೂ ಅವರ ಕುಟುಂಬದವರ ಹೆಸರಿನಲ್ಲಿ ದೊಡ್ಡ ದೊಡ್ಡ ಖಾಸಗಿ ಶಾಲೆಗಳು, ಮೆಡಿಕಲ್, ಇಂಜಿನಿಯರ್ ಕಾಲೇಜು ಇರುವುದರಿಂದ ಸರ್ಕಾರಿ ಶಾಲೆಗಳ ಬಗ್ಗೆ ಹೆಚ್ಚಿನ ಗಮನಹರಿಸುತ್ತಿಲ್ಲ, ಇಲ್ಲಿ ವ್ಯಾಸಂಗ ಮಾಡುವ ಬಹುತೇಕ ಮಕ್ಕಳು ಬಡವರಾಗಿದ್ದು, ಸರ್ಕಾರಿ ಶಾಲೆಗಳು ಉಳಿಯಬೇಕೆಂಬ ಉದ್ದೇಶದಿಂದ ನನ್ನ ಕೈಲಾದಷ್ಟು ಸೇವೆ ಮಾಡಿಕೊಂಡು ಬರುತ್ತಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಹೇಳಿದರು.ಶಿಕ್ಷಣ ಸಂಯೋಜಕ ಸೋಮೇಶ್ ಮಾತನಾಡಿ, ಶಾಲೆಯಲ್ಲಿ ೨೫ ವಿದ್ಯಾರ್ಥಿಗಳು ಒಂದೇ ಕೊಠಡಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ವಿದ್ಯಾರ್ಥಿಗಳಿಗೆ ಕೊಠಡಿಯ ಅವಶ್ಯಕತೆ ಹಾಗೂ ಕ್ರೀಡಾಂಗಣ ಇಲ್ಲದೆ ಇರುವುದರಿಂದ ಯಾರಾದರೂ ದಾನಿಗಳು ಸ್ಥಳ ನೀಡಿದರೆ, ಸರ್ಕಾರದ ಅನುದಾನದಲ್ಲಿ ಕೊಠಡಿ ನಿರ್ಮಾಣ ಮಾಡಿಕೊಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಹಂತದ ಉತ್ತಮ ಶಿಕ್ಷಕರು ಪ್ರಶಸ್ತಿಗೆ ಇದೇ ಶಾಲಿಯ ಶಿಕ್ಷಕಿಗೆ ಲಭಿಸಿರುವುದು ಸಂತೋಷ ತಂದಿದೆ ಎಂದರು. ದೇವರಾಯ ಸಮುದ್ರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಾಲ್ಗುಣ ಶ್ರೀನಿವಾಸ್, ನಿವೃತ್ತ ಉಪನ್ಯಾಸಕ ವೆಂಕಟೇಶ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ರುದ್ರಪ್ಪ, ಶಿಕ್ಷಕರಾದ ವಾಸಪ್ಪ, ಲಕ್ಷ್ಮಿದೇವಮ್ಮ, ಶೋಭಾ, ಎಸ್‌ಡಿಎಂಸಿ ಅಧ್ಯಕ್ಷೆ ನಂದಿನಿ, ಶಿವಕುಮಾರ್ ಇದ್ದರು.