ಕನ್ನಡಪ್ರಭ ವಾರ್ತೆ ಮೈಸೂರುಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ದೋಷರಹಿತವಾಗಿ ನಡೆಸಬೇಕು ಎಂದು ಜಂಟಿ ಚುನಾವಣಾಧಿಕಾರಿ ವಿ. ರಾಘವೇಂದ್ರ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗ ಮಟ್ಟದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ತರಬೇತಿ ಕಾರ್ಯಾಗಾರದಲ್ಲಿ ಅವರು ಪ್ರಮುಖ ತರಬೇತುದಾರರಾಗಿ ಪಾಲ್ಗೊಂಡು ಮಾತನಾಡಿದರು.ಚುನಾವಣಾ ನಿಯಮಗಳನ್ನು ಉಲ್ಲಂಘಿಸಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಸಾಕಷ್ಟು ಉದಾಹರಣೆಗಳಿವೆ. ಪ್ರತಿಯೊಬ್ಬ ಅಧಿಕಾರಿಯೂ ಅತ್ಯಂತ ಜಾಗೃತಿ ಹಾಗೂ ಕಾರ್ಯದಕ್ಷತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಬೇಕು. ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡುವುದು, ಅನರ್ಹರು, ಮೃತಪಟ್ಟವರು ಹಾಗೂ ನಕಲಿ ಮತದಾರರನ್ನು ಕೈಬಿಡುವುದು ಮತ್ತು ಗೈರು ಹಾಗೂ ವಲಸೆ ಹೋಗಿರುವ ಮತದಾರರ ಕುರಿತು ಸೂಕ್ತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಮತದಾನವು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಸದರಿ ಹಕ್ಕು ಎಲ್ಲರಿಗೂ ದೊರೆಯುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯಾವೊಬ್ಬ ವ್ಯಕ್ತಿಯೂ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಅವರು ಹೇಳಿದರು.ಚುನಾವಣಾ ಆಯೋಗ ನೀಡುವ ಪ್ರತಿಯೊಂದು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಾರ್ಯಾಗಾರದಲ್ಲಿ ಅಧಿಕಾರಿಗಳಿಗೆ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ, ಹೊಸ ಮತದಾರರ ನೋಂದಣಿ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಆನ್‌ ಲೈನ್ ಸೇವೆಗಳ ಬಳಕೆ ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ತರಬೇತಿಗೆ ಹಾಜರಾಗಿದ್ದ ಅಧಿಕಾರಿಗಳು ತಮ್ಮ ಕ್ಷೇತ್ರ ಮಟ್ಟದ ಸಮಸ್ಯೆಗಳಿಗೆ ಜಂಟಿ ಮುಖ್ಯ ಚುನಾವಣಾಧಿಕಾರಿಗಳಿಂದ ನೇರವಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದರು.ಎಡಿಸಿ ಆರ್. ಐಶ್ವರ್ಯ ಅವರು ಈ ಇಡೀ ತರಬೇತಿ ಕಾರ್ಯಾಗಾರದ ಮೇಲುಸ್ತುವಾರಿ ನಿರ್ವಹಿಸಿದರು. ಕಾರ್ಯಾಗಾರದಲ್ಲಿ ಮೈಸೂರು ವಿಭಾಗದ ಎಲ್ಲಾ 8 ಜಿಲ್ಲೆಗಳ ಎಡಿಸಿಗಳು, ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಚುನಾವಣಾ ತಹಸೀಲ್ದಾರರು ಹಾಗೂ ಜಿಲ್ಲಾ ತಾಂತ್ರಿಕ ಕಾರ್ಯಕ್ರಮ ಅಧಿಕಾರಿಗಳು ಇದ್ದರು.