ಸಾರಾಂಶ
ಕನ್ನಡಪ್ರಭ ವಾರ್ತೆ ನಾಗಮಂಗಲ
ಪುರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಸೇವಾ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಅಗತ್ಯ ಸೌಕರ್ಯ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಪೌರಕಾರ್ಮಿಕರು ಮತ್ತು ನೌಕರರು ಧರಣಿ ನಡೆಸಿದರು.ಕಳೆದ ಹಲವು ದಶಕಗಳಿಂದ ಪುರಸಭೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾವು ಸಾರ್ವಜನಿಕರಿಗೆ ಅತ್ಯವಶ್ಯಕ ಸೇವೆಗಳಾದ ಸ್ವಚ್ಛತೆ ಮತ್ತು ಕುಡಿಯುವ ನೀರು ಸರಭರಾಜು ಮಾಡುವ ಕೆಲಸದಲ್ಲಿ ನಿರತರಾಗಿದ್ದೇವೆ. ಹಲವು ಬಗೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಪೌರ ಸೇವಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ ಮತ್ತು ಕೆಜಿಎಡಿ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿದರು.
ಹಲವು ವರ್ಷಗಳಿಂದ ಕನಿಷ್ಠ ವೇತನಕ್ಕೆ ಕೆಲಸ ನಿರ್ವಹಿಸುತ್ತಿದ್ದೇವೆ. ಆ ವೇತನವನ್ನೂ ಕೂಡ ಮೂರು ತಿಂಗಳು ಆರು ತಿಂಗಳಿಗೊಮ್ಮೆ ನೀಡಲಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆ ಮತ್ತು ಮಕ್ಕಳಿಗೆ ಶಿಕ್ಷಣ ಕೊಡಿಸಲು ನಮಗೆ ಬಹಳ ಕಷ್ಟವಾಗುತ್ತಿದೆ. ಹಾಗಾಗಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕುಡಿವ ನೀರು ಸರಭರಾಜು ಸಹಾಯಕರು, ಲೋಡರ್ಸ್ ಚಾಲಕರು, ಕಂಪ್ಯೂಟರ್ ಆಪರೇಟರ್ಗಳು ಮತ್ತು ಲೆಕ್ಕಿಗರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರಸೇವಾ ನೌಕರರ ಜೀವನ ಮಟ್ಟ ಸುಧಾರಿಸಲು ಅನುಕೂಲ ಮಾಡಿಕೊಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರು ಮತ್ತು ನೌಕರರು ನಡೆಸಿದ ಧರಣಿಗೆ ಪುರಸಭೆ ಅಧ್ಯಕ್ಷ ಅಲಿ ಅನ್ಸರ್ಪಾಷ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ಸದಸ್ಯರಾದ ತಿಮ್ಮಪ್ಪ, ಸಂಪತ್ಕುಮಾರ್, ನರಸಿಂಹ, ರಿಜ್ವಾನ್ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದರು.ಧರಣಿಯಲ್ಲಿ ಪೌರಕಾರ್ಮಿಕರಾದ ಚಿಕ್ಕಮಾರ, ಮುರುಗೇಶ, ಪಾಪಮ್ಮ, ಸುಬ್ಬಮ್ಮ, ನಾಗಮ್ಮ, ಮೂರ್ತಿ, ರಂಗ, ಸುರೇಶ, ಮಾರ, ಬಿ.ಎಂ.ಜವರೇಗೌಡ, ಚಾಲಕರಾದ ನವೀನ, ರಂಗಸ್ವಾಮಿ, ಧನರಾಜ, ಮಂಜು, ಪ್ರಸನ್ನ, ನೌಕರರಾದ ತೋಪ, ಅಕ್ರಂಪಾಷ, ಬೋರಲಿಂಗ, ಶಿವರುದ್ರ, ಯೋಗೇಶ, ಕುಮಾರ, ಕಂಪ್ಯೂಟರ್ ಆಪರೇಟರ್ ಸುಮಿತ್ರ, ಮಂಗಳಗೌರಿ ಸೇರಿದಂತೆ 50 ಕ್ಕೂ ಹೆಚ್ಚು ನೌಕರರು ಪಾಲ್ಗೊಂಡಿದ್ದರು.