ಸಾರಾಂಶ
ನೌಕರರ ಕಾಯಂ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸುವುದು ಸೇರಿ ಕೆಲ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿಕೊಂಡು ಬರಲಾಗುತ್ತಿದೆ. ಆದರೆ, ನಮ್ಮ ಬೇಡಿಕೆಗಳಿಗೆ ಸರ್ಕಾರ ಮನ್ನಣೆ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸಂಘದ ಆದೇಶದಂತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವುದಾಗಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಚನ್ನಪಟ್ಟಣ ತಾಲೂಕು ಪೌರ ನೌಕರರ ಸಂಘ ಸಹ ತಮ್ಮೆಲ್ಲಾ ದೈನಂದಿನ ಕೆಲಸ- ಕಾರ್ಯಗಳನ್ನು ತ್ಯಜಿಸಿ ಪ್ರತಿಭಟನೆ ನಡೆಸುವ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.ನಗರಸಭೆಯ ನೌಕರರೆಲ್ಲಾ ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ ನಗರಸಭೆ ಮುಂಭಾಗ ಮುಷ್ಕರ ನಡೆಸಿದರು.
ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರಕಾರಿ ನೌಕರರಂತೆ ಪರಿಗಣಿಸುವುದು, ಸರಕಾರಿ ನೌಕರರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ತಮಗೂ ನೀಡುವುದು, ಹೊರ ಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು, ನೌಕರರ ಕಾಯಂ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸುವುದು ಸೇರಿ ಕೆಲ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿಕೊಂಡು ಬರಲಾಗುತ್ತಿದೆ. ಆದರೆ, ನಮ್ಮ ಬೇಡಿಕೆಗಳಿಗೆ ಸರ್ಕಾರ ಮನ್ನಣೆ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸಂಘದ ಆದೇಶದಂತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವುದಾಗಿ ತಿಳಿಸಿದರು.ಕೆಲ ದಿನಗಳ ಹಿಂದಷ್ಟೇ ನಮ್ಮ ಸಂಘ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಗಡುವು ನೀಡಿತ್ತು. ಆದರೂ ಸಹ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಕಾರಣ ಈ ಮುಷ್ಕರ ನಡೆಸುತ್ತಿದ್ದು, ನಮ್ಮೆಲ್ಲಾ ಬೇಡಿಕೆಗಳು ಈಡೇರದ ಹೊರತು ಮುಷ್ಕರ ನಿಲ್ಲುವುದಿಲ್ಲ ಎಂದು ಮುಷ್ಕರ ನಿರತರು ತಿಳಿಸಿದರು.
ಈ ವೇಳೆ ಪೌರ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಸಿ.ಮಂಜು, ಕಾರ್ಯದರ್ಶಿ ಕೆ.ಮಂಜು, ಖಜಾಂಚಿ ಲೋಕೇಶ್, ಸಂ.ಕಾರ್ಯದರ್ಶಿ ಜಗನ್ನಾಥ, ಹಿದಾಯತ್ ಖಾನ್, ಶಿವಕುಮಾರ್, ವಿಶ್ವನಾಥ್, ಲೋಕೇಶ್, ಮೀರ್ ಆಹಮದ್, ಅಣ್ಣಮ್ಮ, ರುಕ್ಮೀಣಿ, ಗೋವಿಂದ, ಶ್ರೀನಿವಾಸು ಸೇರಿದಂತೆ ಅನೇಕರು ಇದ್ದರು.